E Khata: ಆಸ್ತಿಗಳ ಸರಳೀಕರಣಕ್ಕಾಗಿ ಇ ಖಾತಾ ಅಭಿಯಾನ
ಕಲಬುರಗಿ,ಏಪ್ರಿಲ್ 07: ಆಸ್ತಿಗಳ ಸರಳೀಕರಣ ಹಾಗೂ ಬಲಿಷ್ಠಗೊಳಿಸಲು ಸರ್ಕಾರ ಎ ಖಾತಾ ಹಾಗೂ ಬಿ ಖಾತಾ ವ್ಯವಸ್ಥೆ ಜಾರಿಗೆ ತಂದಿದೆ. ಇದರಿಂದ ಸ್ವತ್ತುಗಳ ಮಾಲೀಕತ್ವ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯ ಉದ್ಯಾನವನದ ಇಂದಿರಾ ಸ್ಮಾರಕ ಭವನದಲ್ಲಿ ನಡೆದ ಇ ಖಾತಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯದಲ್ಲಿ ಗ್ರಾಮೀಣ ಭಾಗದ ಒಟ್ಟು 11.50 ಲಕ್ಷ ಅಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದ್ದು ಇದರಿಂದ ರೂ 1,272 ಕೋಟಿ ರೂ ತೆರಿಗೆ ಸಂಗ್ರಹವಾಗಿದೆ.ಇದರಿಂದ ಗ್ರಾಮೀಣ ವ್ಯಾಪ್ತಿಯಲ್ಲಿ ಅಭಿವೃದ್ದಿ ಕೆಲಸಗಳಾಗುತ್ತವೆ ಎಂದು ಹೇಳಿದರು.

ನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಅಥವಾ ವಸತಿ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಒದಗಿಸಿದರು ಕೂಡಾ ಅವುಗಳ ಮಾಲಿಕತ್ವ ದೊರಕಿರಲಿಲ್ಲ. ಎ ಖಾತಾ ಹಾಗೂ ಬಿ ಖಾತಾ ವಿತರಿಸುವ ಮೂಲಕ ಮಾಲೀಕತ್ವವನ್ನೂ ಕೂಡಾ ನೀಡಲಾಗುತ್ತಿದೆ. ಎ ಖಾತಾ ಹಾಗೂ ಬಿ ಖಾತಾ ಅನ್ವಯ ಗ್ರಾಮೀಣ ಭಾಗದ ಸ್ವತ್ತುಗಳನ್ನು ಕೂಡಾ ಕಾನೂನುಬದ್ದಗೊಳಿಸಲಾಗುವುದು ಎಂದು ಕೂಡಾ ಸಚಿವರು ತಿಳಿಸಿದರು. ಈ ಅಭಿಯಾನದ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು ಕರೆ ನೀಡಿದರು. ಕಲಬುರಗಿ ಯನ್ನು ಸ್ಮಾರ್ಟ್ ಸಿಟಿ ಯನ್ನಾಗಿ ಮಾಡಲು ಮುಂದಿನ ಎರಡು ತಿಂಗಳ ಒಳಗಾಗಿ ನೀಲಿ ನಕ್ಷೆ ತಯಾರಿಸಲಾಗುತ್ತಿದ್ದು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ.ಉದ್ಯಾಮವನಗಳ ನಿರ್ಮಾ, ಔದ್ಯೋಗಿಕ ಅಭಿವೃದ್ದಿ, ರಸ್ತೆ ಚರಂಡಿಗಳ ಅಭಿವೃದ್ದಿ ಸೇರಿದಂತೆ ವಿವಿಧ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಕುರಿತಂತೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಈ ಬಗ್ಗೆ ಅವಶ್ಯ ಸಲಹೆ ನೀಡಲಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮಾನದಂಡ ನಿಗದಿ ಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಖಾಸಗಿ ಬೋರ್ ವೆಲ್ ಬಾಡಿಗೆ ಪಡೆದುಕೊಂಡು ನೀರು ಸರಬರಾಜು ಮಾಡುವುದು, ಹೊಸ ಬೋರ್ ವೆಲ್ ಕೊರೆಸುವುದು ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಬರ ಘೋಷಣೆಯಾದರೆ ಬೇಕಾಗುವ ಅನುದಾನಕ್ಕಾಗಿ ಪಿಡಿ ಅಕೌಂಟ್ ನಲ್ಲಿ ಸಾಕಷ್ಟು ಅನುದಾನ ಬಿಡುಗಡೆ ಮಾಡಲು ಕೂಡಾ ಅಗತ್ಯ ಕ್ರಮ ವಹಿಸಲಾಗುತ್ತಿದೆ. ಮುಂದಿನ ವಾರದಲ್ಲಿ ನಡೆಯಲಿರುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಬಗ್ಗೆ ಮತ್ತೆ ಚರ್ಚಿಸಲಾಗುವುದು ಎಂದರು.
ಜನರಿಗೆ ಕುಡಿಯುವ ನೀರು ಒದಗಿಸಲು ಮೊದಲ ಆದ್ಯತೆ ನೀಡಲಾಗುವುದು, ನಂತರ ಬೆಳೆಗಳಿಗೆ ಹರಿಸಲು ಯೋಚಿಸಲಾಗುತ್ತದೆ. ನಮ್ಮ ಭಾಗದ ಜನರಿಗೆ ನೀರು ಒದಗಿಸುವ ವಿಚಾರದಲ್ಲಿ ಮಹಾರಾಷ್ಟ್ರದಿಂದ ನೀರು ಹರಿಸಲು ಪತ್ರಬರೆಯುವಂತೆ ಸಿಎಂ ಅವರಿಗೆ ಮನವಿ ಮಾಡಲಾಗಿತ್ತು. ಹಾಗಾಗಿ, ಕೃಷ್ಣಾ ನದಿಗೆ ನೀರು ಹರಿಸುವಂತೆ ಈಗಾಗಲೇ ಸಿಎಂ ಮಹಾರಾಷ್ಟ್ರ ರಾಜ್ಯಕ್ಕೆ ಪತ್ರ ಬರೆದಿದ್ದಾರೆ ಅಲ್ಲಿನ ಡ್ಯಾಂ ಗಳಲ್ಲಿ ನೀರಿನ ಲಭ್ಯತೆ ಕುರಿತಂತೆ ಮಹಾರಾಷ್ಟ್ರ ಸರ್ಕಾರ ಅಧಿಕೃತ ಮಾಹಿತಿ ಒದಗಿಸಿಲ್ಲ ಎಂದರು. ತಮಿಳು ನಾಡಿಗೆ ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಮಾತ್ರ ರಾಜ್ಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಕಾವೇರಿಗೆ ಇರುವಷ್ಟು ಮಹತ್ವ ಕೃಷ್ಣಾಗೂ ಇದೆ ಎಂದರು.
ರಾಜ್ಯ ಬಜೆಟ್ ಹಲಾಲ್ ಬಜೆಟ್ ಎನ್ನುವ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಬಜೆಟ್ ಎಲ್ಲ ವರ್ಗದವರನ್ನು ಗಮನದಲ್ಲಿರಿಸಿಕೊಂಡು ತಯಾರಿಸಲಾಗಿದೆ. ಅನುದಾನ ಬಳಕೆಯೂ ಕೂಡಾ ಅದೇ ಮಾನದಂಡ ಅನುಸರಿಸಿ ಉಪಯೋಗಿಸಲಾಗುತ್ತಿದೆ. ಪ್ರಗತಿ ಪಥ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಆಗುತ್ತಿರುವ ಅಭಿವೃದ್ದಿ ಹಾಗೂ ಗ್ಯಾರಂಟಿ ಯೋಜನೆಗಳು ಕೇವಲ ಮುಸ್ಲಿಮರಿಗೆ ಮಾತ್ರ ಅನ್ವಯವಾಗುತ್ತವಯೇ? ಎಂದು ಟೀಕಿಸಿದರು.
ಬಸನಗೌಡ ಪಾಟೀಲ್ ಯತ್ನಾಳ ಅವರ ಹೆಣಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅವರು ಆರೋಗ್ಯವಂತರಾಗಿರಲಿ. ಅವರ ಸಿದ್ದಾಂತಗಳು ನಮಗೆ ಒಪ್ಪುವುದಿಲ್ಲ, ಅವರು ಪಾರ್ಟಿಗೆ ಬರುವುದು ಬೇಡ. ಅವರ ಈ ಹಿಂದೆ ಯಾವ ಯಾವ ರೀತಿ ಫೋಟೋ ತೆಗೆಸಿಕೊಂಡಿದ್ದರು ಎಂದು ಬಿಜೆಪಿ ಪಕ್ಷದ ಅಧ್ಯಕ್ಷರು ವೈರಲ್ ಮಾಡುತ್ತಿದ್ದಾರಲ್ಲ ಅಷ್ಟೆ ಸಾಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.












Click it and Unblock the Notifications