E khata: 1.62 ಲಕ್ಷ ಕುಟುಂಬದ ಫಲಾನುಭವಿಗಳಿಗೆ ಇ-ಖಾತಾ ನೋಂದಣಿ: ಮಹತ್ವದ ಮಾಹಿತಿ, ವಿವರ
ಬೆಂಗಳೂರು, ಆಗಸ್ಟ್ 25: ತಹಶೀಲ್ದಾರರು ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ಹಕ್ಕುಪತ್ರ ನೀಡಿದಾಕ್ಷಣ ತಮ್ಮ ಕೆಲಸ ಮುಗಿಯಿತು ಎಂದು ವಿರಮಿಸುವಂತಿಲ್ಲ. ಬದಲಿಗೆ ಇ-ಖಾತಾ ಜನರೇಟ್ ಮಾಡಿ ಇ-ಆಸ್ತಿ ಮಾಡಿಕೊಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು.
ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಈಗಾಗಲೇ ಕಳೆದ ಮೇ ತಿಂಗಳಲ್ಲಿ ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1.11 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ 1.62 ಲಕ್ಷ ಕುಟುಂಬದ ಫಲಾನುಭವಿಗಳಿಗೆ ಇ-ಖಾತಾ- ನೋಂದಣಿ ಮಾಡಿಸಿದ ಪಕ್ಕಾ ಹಕ್ಕುಪತ್ರ ನೀಡುವ ಗುರಿಯನ್ನು ನವೆಂಬರ್ ತಿಂಗಳ ಅಂತ್ಯದೊಳಗೆ ಯಶಸ್ವಿಗೊಳಿಸಬೇಕು ಎಂದು ಎಲ್ಲಾ ತಹಶೀಲ್ದಾರರಿಗೂ ಗುರಿ ನೀಡಿದರು.

ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ದಿನಗಳ ಒಳಗೆ ವಿಲೇವಾರಿ ಆಗದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು. ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಬೇಸರ ಹೊರಹಾಕಿದರು.
ತಕರಾರು ಅರ್ಜಿಗಳ ವಿಲೇಗಾಗಿ ಜನ ಸಾಮಾನ್ಯರು ದಿನನಿತ್ಯ ತಹಶೀಲ್ದಾರ್ ಕಚೇರಿ ಅಲೆಯುವುದನ್ನು ಶಾಶ್ವತವಾಗಿ ತಡೆಯಬೇಕು ಎಂಬ ಕಾರಣದಿಂದಲೇ ಅಭಿಯಾನ ಮಾದರಿಯಲ್ಲಿ ಕೋರ್ಟ್ ಕೇಸ್ ವಿಲೇ ಅಂಕಿತ ಹಾಕಲಾಗಿತ್ತು. ಹಲವು ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವು ಅಧಿಕಾರಿಗಳ ಅಸಡ್ಡೆ, ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ತನದಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಅಧಿಕಾರಿಗಳ ಇಂತಹ ವರ್ತನೆ ಸಹಿಸುವುದು ಅಸಾಧ್ಯ. ಹೀಗಾಗಿ ಮುಂದಿನ ದಿನಗಳಲ್ಲಿ ಅಧಿಕಾರಿಗಳು 90 ದಿನ ಮೀರಿ ಒಂದು ಪ್ರಕರಣ ಉಳಿಸಿಕೊಂಡಿದ್ದರೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.
ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು.
ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಹಾಗೂ ತುಮಕೂರು ಜಿಲ್ಲೆಯಲ್ಲಿ ಪೋಡಿ ದುರಸ್ಥಿ ಕೆಲಸ ಚುರುಕುಗೊಂಡಿರುವ ಬಗ್ಗೆ ಅಧಿಕಾರಿಗಳ ಶ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಇತರೆ ಜಿಲ್ಲೆಗಳೂ ಪೋಡಿ ದುರಸ್ಥಿ ಕೆಲಸಕ್ಕೆ ವೇಗ ನೀಡಬೇಕು. ಅಲ್ಲದೆ, ರೈತರ ಬಳಿ ಭೂ ಮಂಜೂರಿಗೆ ಸಂಬಂಧಿಸಿ ಕನಿಷ್ಠ 3 ದಾಖಲೆ ಇದ್ದರೂ ಸಹ ಅಂತಹ ಪ್ರಕರಣಗಳನ್ನು ಪೋಡಿ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.












Click it and Unblock the Notifications