ಐಟಿ ದಾಳಿ ಪ್ರಕರಣ : ಡಿ.ಕೆ.ಶಿವಕುಮಾರ್ಗೆ ಜಾಮೀನು
ಬೆಂಗಳೂರು, ಆಗಸ್ಟ್ 02 : ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳಿಗೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ಗುರುವಾರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿತು.

50 ಸಾವಿರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಿದ ಕೋರ್ಟ್ ಮಧ್ಯಂತರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತು. ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವ ತನಕ ತನಿಖೆ ನಡೆಸುವಂತಿಲ್ಲ ಎಂದು ಸೂಚನೆ ನೀಡಿತು.
ಮನೆಯಲ್ಲಿ ಹಣ ಸಿಕ್ಕಿತ್ತು : ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಆಗ ಮನೆಯಲ್ಲಿ ಕೋಟ್ಯಾಂತರ ರೂ. ಹಣ ಸಿಕ್ಕಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಸಚಿನ್ ನಾರಾಯಣ್, ಶರ್ಮಾ ಟ್ರಾವೆಲ್ಸ್ನ ಸುನೀಲ್ ಕುಮಾರ್ ಶರ್ಮಾ, ದೆಹಲಿ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ, ರಾಜೇಂದ್ರ ಇತರ ಆರೋಪಿಗಳಾಗಿದ್ದಾರೆ. ಗುರುವಾರ ನ್ಯಾಯಾಲಯ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ.
ಸಚಿನ್ ನಾರಾಯಣ್ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.












Click it and Unblock the Notifications