ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ
ಬೆಂಗಳೂರು, ಜುಲೈ 10: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಸಿಐಡಿಯ ಎಸ್ಐಟಿ ಸಹ ಈ ಹಗರಣದ ಕುರಿತು ತನಿಖೆ ನಡೆಸುತ್ತಿದೆ.
ಬುಧವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮಂಗಳವಾರ ಇಬ್ಬರೂ ಸಹ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಹಾಜರಾಗಿದ್ದರು.

ಸುಮಾರು 187 ಕೋಟಿ ರೂ.ಗಳ ಬೃಹತ್ ಮೊತ್ತದ ಹಗರಣವಿದು. ಹಗರಣ ಬೆಳಕಿಗೆ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವರಾಗಿದ್ದ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು.
ಏಕಕಾಲಕ್ಕೆ ವಿವಿಧ ಕಡೆ ದಾಳಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರು, ಸಿಆರ್ಪಿಎಫ್ ಸಿಬ್ಬಂದಿ ಸಹಕಾರದಲ್ಲಿ ಬುಧವಾರ ಏಕಕಾಲಕ್ಕೆ ಹಲವು ಕಡೆ ದಾಳಿ ಮಾಡಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆಂಗಳೂರಿನ ಫ್ಲಾಟ್, ಬಳ್ಳಾರಿಯಲ್ಲಿರುವ ನಿವಾಸ, ಶಾಸಕ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿದ್ದಾರೆ.
ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಿ. ನಾಗೇಂದ್ರ ನಿವಾಸದಲ್ಲಿ ಯಾರೂ ಸಹ ಇಲ್ಲ. ಪೊಲೀಸರು, ನಿವಾಸದ ಸಿಬ್ಭಂದಿಯಿಂದ 8 ಮಂದಿ ಇಡಿ ಅಧಿಕಾರಿಗಳ ತಂಡ ಮಾಹಿತಿಯನ್ನು ಪಡೆಯುತ್ತಿದೆ. ನಿವಾಸದ ಸುತ್ತ ಸಿಆರ್ಪಿಎಫ್ ಸಿಬ್ಬಂದಿ, ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ರಾಮ್ಕಿ ಉತ್ಸವ್ ಅಪಾರ್ಟ್ಮೆಂಟ್ನಲ್ಲಿರುವ ಬಿ. ನಾಗೇಂದ್ರ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ. ಮಾಹಿತಿಗಳ ಪ್ರಕಾರ ಬೆಂಗಳೂರು, ಬಳ್ಳಾರಿ, ರಾಯಚೂರು ಸೇರಿ 18 ಕಡೆಗಳಲ್ಲಿ ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬುದು ಆರೋಪವಾಗಿದೆ. ಈ ಕುರಿತು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದೆ. ಬೆಂಗಳೂರಿನಲ್ಲಿ ವಸಂತ ನಗರ, ಡಾಲರ್ಸ್ ಕಾಲೋನಿ, ಯಲಹಂಕ ಮೂರು ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ.
ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು. ಆದ್ದರಿಂದ ರಾಯಚೂರಿನಲ್ಲಿರುವ ಅವರ ನಿವಾಸದ ಮೇಲೆಯೂ ಇಡಿ ದಾಳಿ ನಡೆದಿದೆ.
ಕರ್ನಾಟಕ ಸರ್ಕಾರ ಈ ಹಗರಣದ ತನಿಖೆಗೆ ಸಿಐಡಿ ಎಸ್ಐಟಿ ರಚನೆ ಮಾಡಿದೆ. ಮಂಗಳವಾರ ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ಬಸನಗೌಡ ದದ್ದಲ್ 5 ತಾಸಿಗೂ ಅಧಿಕ ಕಾಲ ಸಿಐಡಿಯ ಎಸ್ಐಟಿಯ ವಿಚಾರಣೆಯನ್ನು ಎದುರಿಸಿದ್ದರು.
ಶಿವಮೊಗ್ಗದ ನಿವಾಸದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರನ್ (52) 6 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಆತ್ಮಹತ್ಯೆಯ ಬಳಿಕ ನಿಗಮದಲ್ಲಿ ನಡೆದದಿದೆ ಎನ್ನಲಾದ ಹಗರಣ ಬೆಳಕಿಗೆ ಬಂದಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಅಡಿಯಲ್ಲಿ ಬರುತ್ತದೆ. ಆದ್ದರಿಂದ ಹಗರಣ ಬೆಳಕಿಗೆ ಬಂದ ಬಳಿಕ ಖಾತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದರು. ಅಂತಿಮವಾಗಿ ಅವರು ಜೂನ್ 6ರಂದು ರಾಜೀನಾಮೆ ನೀಡಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಖಾತೆಯಿಂದ 187 ಕೋಟಿ ರೂ. ಹಣವನ್ನು ಅಕ್ರಮವಾಗಿ ತೆಲಂಗಾಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬುದು ಆರೋಪ. ಈ ಕುರಿತು ಹೈದರಾಬಾದ್ನಲ್ಲಿಯೂ ಎಸ್ಐಟಿ ಹಲವರ ವಿಚಾರಣೆ ನಡೆಸಿದೆ, ಇಬ್ಬರನ್ನು ಬಂಧಿಸಿದೆ. ಈ ಹಗರಣದ ಕುರಿತು ಸಿಬಿಐ ತನಿಖೆಗೆ ಸಹ ಶಿಫಾರಸು ಮಾಡಲಾಗಿದ್ದು, ತನಿಖೆ ಇನ್ನೂ ಆರಂಭವಾಗಿಲ್ಲ.












Click it and Unblock the Notifications