ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇ.ಡಿ ದಾಳಿ
ಬೆಂಗಳೂರು, ಜನವರಿ 20: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣ ಸಂಬಂಧ ಜನವರಿ 20ರ ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ, ಟ್ರಸ್ಟಿಗಳ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ.

ಬಳ್ಳಾರಿಯ ಪ್ರತಿಷ್ಠಿತ ರೊದ್ದಂ ಜ್ಯುವೆಲ್ಲರಿ ಅಂಗಡಿ ಹಾಗೂ ಅದರ ಮಾಲೀಕ ಗೋವರ್ಧನ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 9 ಮಂದಿ ಇ.ಡಿ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಗೋವರ್ಧನ್ ನಿವಾಸದ ಮೇಲೆ ದಾಳಿ ನಡೆಸಲು ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾಖಲೆಗಳ ಪರಿಶೀಲನೆ: ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಪಾತ್ರ ಪ್ರಮುಖರಾಗಿದ್ದಾರೆ ಎನ್ನುವ ಮಾಹಿತಿ ಇತ್ತೀಚೆಗಷ್ಟೇ ಬಟಾಬಯಲಾಗಿತ್ತು. ಈ ಆಧಾರದ ಮೇಲೆ ಇವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದೇವಸ್ಥಾನದಿಂದ ಕಳವು ಮಾಡಿದ್ದ ಚಿನ್ನವನ್ನು ಗೋವರ್ಧನ್ಗೆ ಮಾರಾಟ ಮಾಡಿದ್ದ ಎಂಬ ಆರೋಪ ಇದೆ. ಅಕ್ರಮವಾಗಿ 470 ಗ್ರಾಂ ಚಿನ್ನವನ್ನು ಖರೀದಿಸಿದ ಆರೋಪದ ಮೇಲೆ ಕೇರಳ ಎಸ್ಐಟಿ ಅಧಿಕಾರಿಗಳು ಗೋವರ್ಧನ್ ಅವರನ್ನು ಈಗಾಗಲೇ ಬಂಧಿಸಿದ್ದಾರೆ. ಅಷ್ಟಕ್ಕೆ ಈ ಪ್ರಕರಣವನ್ನು ಅಧಿಕಾರಿಗಳು ಕೈಬಿಡಲಿಲ್ಲ. ಬದಲಾಗಿ ಇದರ ಹಿಂದೆ ಇನ್ನೂ ಯಾರೆಲ್ಲಾ ಇದ್ದಾರೆ ಎಂದು ಜಾಲಾಡುವ ಕೆಲಸ ಮುಂದುವರೆಸಿತ್ತು.
ಪ್ರಭಾವಿಗಳ ಕೈವಾಡದ ಆರೋಪ: ಇದೀಗ ಈ ಪ್ರಕರಣದಲ್ಲಿ ದೊಡ್ಡ ಮಟ್ಟದ ಹಣ ಅಕ್ರಮ ವರ್ಗಾವಣೆ ನಡೆದಿರುವ ಶಂಕೆ ವ್ಯಕ್ತ ಆಗಿದ್ದರಿಂದ ಇ.ಡಿ ಮನಿ ಲಾಂಡರಿಂಗ್ ಕಾಯ್ದೆಯಡಿ ತನಿಖೆ ಆರಂಭಿಸಿದೆ. ಅಷ್ಟೇ ಅಲ್ಲದೆ, ಶಬರಿಮಲೆ ಚಿನ್ನ ಕಳವು ಪ್ರಕರಣ ಕಳ್ಳತನಕ್ಕಷ್ಟೇ ಸೀಮಿತ ಆಗಿಲ್ಲ. ಇದರಲ್ಲಿ ಪ್ರಭಾವಿಗಳ ಕೈವಾಡವಿದೆ ಎಂಬ ಆರೋಪವೂ ಕೇಳಿಬಂದಿತ್ತು.
2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5 ಕೆಜಿ ಚಿನ್ನ ನಾಪತ್ತೆ ಆಗಿತ್ತು. ಈ ಬಗ್ಗೆ ಕೇರಳ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶ ಹೊರಡಿಸಿತ್ತು. ಪ್ರಕರಣ ಸಂಬಂಧ ಶಬರಿಮಲೆಯ ಮಾಜಿ ಮುಖ್ಯ ಅರ್ಚಕ ತಂತ್ರಿ ಕಂದರಾರು ರಾಜೀವ್, ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಸೇರಿದಂತೆ ಈಗಾಗಲೇ 12ಕ್ಕೂ ಹೆಚ್ಚು ಜನರನ್ನು ಬಂಧನಕ್ಕೊಳಪಡಿಸಲಾಗಿದೆ.
ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯಿಂದ ಚಿನ್ನ ಖರೀದಿ ಮಾಡಿದ ಆರೋಪ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಮೇಲಿದೆ. ಈ ಸಂಬಂಧ ಕೇರಳ ಎಸ್ಐಟಿ ಈಗಾಗಲೇ ಗೋವರ್ಧನ್ರನ್ನು ವಿಚಾರಣೆಗೆ ಒಳಪಡಿಸಿದೆ. ಮತ್ತೊಂದೆಡೆ, ಇ.ಡಿ ಶೋಧಕಾರ್ಯ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications