ವಾಲ್ಮೀಕಿ ನಿಗಮದ ಹಗರಣ ಕೇಸ್ನಲ್ಲಿ ಸಿಎಂ, ಸಚಿವರ ಹೆಸರು ಹೇಳಲು ಇಡಿ ಒತ್ತಾಯ: ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 23: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಇಡಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಪಾದಿಸಿದ್ದು, ಈ ಬಗ್ಗೆ ಇಡಿ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಾಗಿದೆ.
ಇಡಿ ಅಧಿಕಾರಿಗಳ ವರ್ತನೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು.ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ ಎಂದರು.
ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್. ಐ ಟಿ ತನಿಖೆ ಮುಗಿದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣ ಮಾಡುವುದಿಲ್ಲ ಎಂದರು. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿವೆ. ಎಸ್.ಐ.ಟಿ ಯನ್ನು 31-5.2024 ರಂದು ರಚಿಸಲಾಗಿದೆ. 3-6-2024 ರಂದು ಸಿಬಿಐ ಗೆ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಅದರಲ್ಲಿ ಶುಚಿ ಸ್ಮಿತಾ ರಾವುಲ್, ದೀಪಾ ಹಾಗು ಕೃಷ್ಣಮೂರ್ತಿ ಇವರ ಮೇಲೆ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ. ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ. ಮೂರು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ಬಗ್ಗೆ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ ಎಂದರು.

ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ . ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ.
89.63 ಕೋಟಿ . 46 ಕೋಟಿ ರೂ.ಗಳನ್ನು ಫ್ಸ್ತ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ , ರತ್ನಾಕರ ಬ್ಯಾಂಕ್ ಲೀ., ನಲ್ಲಿ 46 ಕೋಟಿ ರೂಪಾಯಿ ಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಒತ್ತು 85.25 ಕೋಟಿ ಹಿಂಪಡೆದು , ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಒಟ್ಟು ಅಕ್ರಮವಾಗಿರುವುದು 85.63 ಕೋಟಿಗಳು. ಎಸ್. ಐ ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.
ಅಕ್ರಮವಾಗಲು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕಿನಿಂದ ಸೂರು ನೀಡಲಾಗಿದ್ದು ಸಿಬಿಐ ತನಿಖೆ ಮಾಡುತ್ತಿದೆ. ಅವರೇನು ಮಾಡಿದ್ದಾರೆಂದು ತಿಳಿದಿಲ್ಲ. ಇಡಿ ಯವರು ಸ್ವಯಂ ಪ್ರೇರಿತವಾಗಿ ತನಿಖೆ ಪ್ರಾರಂಭ ಮಾಡಿದ್ದು , ನಾಗೇಂದ್ರ ಹಾಗೂ ದದ್ದಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ,ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಎಂಬುವರು ಹೇಳಿಕೆಯನ್ನು ಕೊಟ್ಟಿದ್ದರೂ ಇವರೇ ಆದೇಶ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಒತ್ತಾಯ ಮಾಡಿದ್ದಾರೆ. 187.33 ಕೋಟಿಗಳಲ್ಲಿ 43.33 ಕೋಟಿ ರೂಪಾಯಿ ಖಜಾನೆಯಿಂದ ಹೋಗಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ಹಾಗೂ ಆರ್ಥಿಕ ಇಲಾಖೆ ಪಾತ್ರ ಇದರಲ್ಲಿ ಇರುವುದಿಲ್ಲ. ಬಜೆಟ್ ಒಮ್ಮೆ ಅನುಮೋದನೆಯಾದ ಮೇಲೆ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ಅದನ್ನು ನಿರ್ದೇಶಕರಿಗೆ ಹಾಗೂ ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ.
ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ ಹೆಸರು ಹೇಳುವಂತೆ ಬೆದರಿಸಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನೇನು ನಡೆಯಿತು ಎಂದು ಹೇಳಿದ್ದಾರೆ ಎಂದರು.
ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹಾಗೂ ಮುಖ್ಯಮಂತ್ರಿಗಳನ್ನು ಗುರಿಯಾಗಿಸಬೇಕು ಹಾಗೂ ನನ್ನ ಮತ್ತು ಸರ್ಕಾರದ ವರ್ಚಸ್ಸನ್ನು ಹಾಳು ಮಾಡಬೇಕು. ನಮ್ಮ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಇದ್ದೇವೆ ಎಂದು ರಾಜ್ಯದ ಜನರಿಗೆ ಹೇಳಬೇಕೆಂದು ಹೀಗೆ ಮಾಡುತ್ತಿದ್ದಾರೆ.
ನಾವು ಎಂದಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ದುರ್ಬಲ ವರ್ಗದವರ, ಬಡವರ, ರೈತರ , ಕಾರ್ಮಿಕರ ಪರವಾಗಿ ಇದ್ದೇವೆ . ಆದರೂ ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರಬಾರದು, ದುರ್ಬಲಗೊಳಿಸಬೇಕೆಂಬ ಉದ್ದೇಶದಿಂದ ವಾಮ ಮಾರ್ಗವನ್ನು ಅನುಸರಿಸುತ್ತಿದ್ದಾರೆ. ಆರ್ಥಿಕ ಇಲಾಖೆಯಾಗಲಿ, ಮುಖ್ಯಮಂತ್ರಿಯಾಗಲಿ ಈ ಹಗರಣಕ್ಕೆ ಸಂಬಂಧಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು , ಹಗರಣ ಆಗಿದೆ ಎಂದು ತನಿಖೆ ಮಾಡಿಸುತ್ತಿದ್ದೇವೆ ಎಂದರು.
ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳಿಗೆ ಇಡಿ ಬರಲಿಲ್ಲ. ಆದರೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿರುವ ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸ್ ಟ್ರಕ್ ಟರ್ಮಿನಲ್, ಎ.ಪಿ .ಎಂ.ಸಿ ಹಾಗೂ ಕೋವಿಡ್ ಹಗರಣಗಳಲ್ಲಿ ಇಡಿ ಬರಲೇ ಇಲ್ಲ. ಬಿಜೆಪಿ ಸಿಬಿಐ ಗೆ ವಹಿಸಲು ಹೇಳುತ್ತಾರೆ. ಅವರು ವಿರೋಧಪಕ್ಷ ದಲ್ಲಿದ್ದಾಗ ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಅವರ ಸರ್ಕಾರ. ಕೇಂದ್ರದಲ್ಲಿರುವುದರಿಂದ ಸಿಬಿಐ ಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ.
ನಾವು ಅನೇಕ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇವೆ. ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಪರೇಶ್ ಮೆಹ್ತಾ, ರವಿ, ಗಣಪತಿ, ಲಾಟರಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಸರ್ಕಾರ ವಿವೇಚನೆಯನ್ನು ಆಧರಿಸಿ ಪ್ರಕರಣಗಳನ್ನು ವಹಿಸುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಗಳು ಪ್ರಕಾರ 25 ಕೋಟಿ ರೂಪಾಯಿ ಗಿಂತ ಹೆಚ್ಚಿನ ಮೊತ್ತವಿದ್ದರೆ ಸಿಬಿಐ ತನಿಖೆ ಮಾಡಬಹುದು.
ತನಿಖೆಗೆ ನಮ್ಮ ತಕರಾರಿಲ್ಲ. ಆದರೆ ಕಾನೂನು ಬಾಹಿರವಾಗಿ ತನಿಖೆ ಮಾಡುವುದನ್ನು ಖಂಡಿಸುತ್ತೇವೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುತ್ತಿದ್ದು ಇದನ್ನು ಖಂಡಿಸಲು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಇದನ್ನು ನಾವು ಪ್ರಸ್ತಾಪಿಸಲಿದ್ದೇವೆ ಎಂದರು.












Click it and Unblock the Notifications