ಶಿಕ್ಷಣ ಇಲಾಖೆ ಭ್ರಷ್ಟಾಚಾರ: ಸಿದ್ದರಾಮಯ್ಯಗೆ ಸಚಿವ ಬಿ. ಸಿ. ನಾಗೇಶ್ ತಿರುಗೇಟು
ಬೆಂಗಳೂರು, ಸೆಪ್ಟೆಂಬರ್ 11: ಶಿಕ್ಷಣ ಇಲಾಖೆಯಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟ್ರಾಚಾರವನ್ನು ಹೋಗಲಾಡಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಟೀಕಿಸಿದ್ದ ಸಿದ್ದರಾಮಯ್ಯಗೆ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರೇ ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್ಸಿ ಶಾಲೆಗಳ ಆರಂಭಕ್ಕೆ ಎನ್ಒಸಿ ನೀಡಲು ನಿಯಮಗಳನ್ನೇ ರೂಪಿಸದೆ ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ನಿಮ್ಮ ಪಾತ್ರ ಏನು? ಎಂದು ಪ್ರಶ್ನಿಸಿದ್ದಾರೆ.
ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡಿದ್ದ ಇಲಾಖೆಯೇ ಅಕ್ರಮ ಮುಚ್ಚಿಹಾಕಲು ಲಂಚ ಕೇಳುತ್ತಿದೆಯಂತೆ. ಇದರಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಾಲೆಷ್ಟು? ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು.
ಸರ್ಕಾರಿ ಕಾಮಗಾರಿಗಳಲ್ಲಿ 40% ಕಮಿಷನ್ ನೀಡಬೇಕಾಗುತ್ತದೆ, ಇಲ್ಲದೆ ಇದ್ದರೆ ಬಿಲ್ ಪಾಸ್ ಮಾಡುತ್ತಿಲ್ಲ ಎಂದು ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಧೈರ್ಯದಿಂದ ಬಹಿರಂಗವಾಗಿಯೇ ಆರೋಪ ಮಾಡುತ್ತಿರುವುದು ನಾವಲ್ಲ, ರಾಜ್ಯದ ಸರ್ಕಾರಿ ಗುತ್ತಿಗೆದಾರರ ಸಂಘದವರು. ರಾಜ್ಯದ ಗುತ್ತಿಗೆದಾರರ ಸಂಘ, ಶಿಕ್ಷಣ ಸಂಸ್ಥೆಗಳ ಒಕ್ಕೂಟ ಪ್ರಧಾನ ಮಂತ್ರಿಗೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆಯುತ್ತಿದ್ದಾರೆ. ರಾಜ್ಯದ ಹೈಕೋರ್ಟ್ ಒಂದಲ್ಲ ಎರಡಲ್ಲ ಹಲವು ಬಾರಿ ನೇರವಾಗಿ ಭ್ರಷ್ಟಾಚಾರಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇನ್ನು ಯಾವ ಸಾಕ್ಷಿ ಬೇಕು ಎಂದು ಸಿದ್ದರಾಮಯ್ಯ ಕೇಳಿದ್ದರು.

ಪಿಎಸ್ಐ ನೇಮಕಾತಿಯ ಹಗರಣ
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಅವರ ಪಕ್ಷದ ಶಾಸಕರು, ಸಚಿವರೇ ಸಾಕ್ಷಿ ನೀಡುತ್ತಿದ್ದಾರೆ. ಇವರನ್ನು ಸಾಲಾಗಿ ವೇದಿಕೆಯಲ್ಲಿ ನಿಲ್ಲಿಸಿ ಜನಸ್ಪಂದನ ಮಾಡಿದರೆ ಕಾರ್ಯಕ್ರಮ ಯಶಸ್ವಿಯಾಗಬಹುದು. ಬೇಕಿದ್ದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರನ್ನೂ ಕರೆಸಿ. ಪಿಎಸ್ಐ ನೇಮಕಾತಿಯ ಹಗರಣ ಈಗ ರಾಷ್ಟ್ರೀಯ ಸುದ್ದಿಯಾಗಿದೆ. ಈ ಹಗರಣದಲ್ಲಿ ಸಚಿವರು, ಮಾಜಿ ಸಚಿವರು ಮತ್ತು ಅವರ ಮಕ್ಕಳು ಸೇರಿದ ಹಾಗೆ ಎಲ್ಲರೂ ಭಾಗಿಯಾಗಿದ್ದಾರೆ. ಇದರಿಂದ ಉದ್ಯೋಗ ವಂಚಿತರಾದ 54,000 ಯುವಜನರಿಂದ ಜನಸ್ಪಂದನ ಸರ್ಕಾರ ನಡೆಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು.

ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು
ಅದಕ್ಕೆ ಸರಣಿ ಟ್ವೀಟ್ ಮೂಲಕ ಟ್ವೀಟ್ ಮಾಡಿರುವ ಸಚಿವ ನಾಗೇಶ್, ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಎಂದು ಕೇಳಿದ್ದಾರೆ.

ಮಕ್ಕಳ ಬಗ್ಗೆ ನಿಮಗೆ ಕಾಳಜಿ ಇಲ್ಲವೇ
2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ನಿಮಗೆ ಕಾಳಜಿ ಇಲ್ಲವೇ ಸಿದ್ದರಾಮಯ್ಯನವರೇ ? ಎಂದು ಅವರು ಪ್ರಶ್ನಿಸಿದ್ದಾರೆ.

ಅಕ್ರಮದಲ್ಲಿ ಸಿದ್ದರಾಮಯ್ಯ ಅವರ ಪಾಲೆಷ್ಟು?
ಖಾಸಗಿ ಶಾಲೆ ಪ್ರಥಮ ಮಾನ್ಯತೆ & ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್ಲೈನ್ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯ ಅವರ ಪಾಲೆಷ್ಟು? ಎಂದು ಅವರು ಟೀಕಿಸಿದ್ದಾರೆ.












Click it and Unblock the Notifications