ಬಿಜೆಪಿ ಸರ್ಕಾರದ ಶಾಲಾ ಪಠ್ಯಕ್ರಮ ತೆಗೆದುಹಾಕಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಆಗ್ರಹ
ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು ಮತ್ತು ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.
ಕೇಂದ್ರದ 'ರಾಷ್ಟ್ರೀಯ ಶಿಕ್ಷಣ ನೀತಿ-2020'ಯನ್ನು (ಎನ್ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ 'ರಾಜ್ಯ ಶಿಕ್ಷಣ ನೀತಿ' ರೂಪಿಸಿ ಜಾರಿಗೊಳಿಸಬೇಕೆಂದು ಕೂಡ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಇದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಕೂಡ ಬರೆಯಲಾಗಿದೆ.

ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ ಪತ್ರ ಬರೆದಿದ್ದು, " ಈ ಮೊದಲು ಆಡಳಿತ ನಡೆಸಿದ್ದ ಬಿಜೆಪಿ ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಆಗುವವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಪರಿಷ್ಕೃತ ಪಠ್ಯವನ್ನು ಕೈಬಿಟ್ಟು, 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನು ಮುಂದುವರೆಸಬೇಕು, ಮತ್ತು ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ತ ಮತ್ತು ಸಮಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು" ಎಂದು ಒತ್ತಾಯಿಸಿದೆ.
ಸೂಕ್ತ ಕ್ರಮಕ್ಕೆ ಆಗ್ರಹ
ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಅಸಂವಿಧಾನಿಕವಾಗಿದ್ದು, ವಿಧಾನಸಭೆಯಲ್ಲಿ ನಡೆಯುವ ಮೊದಲ ಅಧಿವೇಶನದಲ್ಲೇ ಇದನ್ನು ತಿರಸ್ಕರಿಸುವಂತೆ ಆಗ್ರಹಿಸಲಾಗಿದೆ.ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ತರಲು ಹೊಸ ಶಿಕ್ಷಣ ನೀತಿ ರೂಪಿಸಲು ಒತ್ತಾಯಿಸಲಾಗಿದೆ.
ಈಗಾಗಲೇ ಮುದ್ರಣಗೊಂಡಿರುವ ಕನ್ನಡ ಮತ್ತು ಇತಿಹಾಸ ಪುಸ್ತಕಗಳನ್ನು ಸ್ಥಗಿತಗೊಳಿಸಬೇಕು. ಸರಿಯಾದ ಆದೇಶ ಕೂಡ ಇಲ್ಲದೆ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಪಠ್ಯಪರಿಷ್ಕರಣೆ ಹೆಸರಿನಲ್ಲಿ ರಾಜ್ಯ ದ ಖಜಾನೆಗೆ ಕೋಟ್ಯಂತರ ನಷ್ಟ ಉಂಟು ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಆ ಹಣವನ್ನು ವಸೂಲು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಜೊತೆಗೆ ರಾಜ್ಯದಲ್ಲಿ 15 ಸಾವಿರ ಶಿಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು, ಜೂನ್ 15ರ ಒಳಗಾಗಿ ಅತಿಥಿ ಶಿಕ್ಷರನ್ನು ನೇಮಿಸಬೇಕು. ವಿದ್ಯಾರ್ಥಿಗಳ ಪಠ್ಯಪುಸ್ತಕ, ಶೂ, ಸಮವಸ್ತ್ರ, ಬಸ್ ಪಾಸ್ಗಳನ್ನು ಸರಿಯಾದ ಸಮಯಕ್ಕೆ ಸಿಗುವಂತೆ ಕ್ರಮ ತೆಗೆದುಕೊಳ್ಳಬೇಕು ಮತ್ತು ರಾಜ್ಯ ಬಜೆಟ್ನಲ್ಲಿ ಶಿಕ್ಷಣಕ್ಕಾಗಿ ಶೇ.20 ರಷ್ಟು ಮೀಸಲಿಡಬೇಕು ಎಂದು ಒತ್ತಾಯಿಸಲಾಗಿದೆ.












Click it and Unblock the Notifications