ರಾಜ್ಯದಲ್ಲಿ 9 ಮತ್ತು 10 ನೇ ಕ್ಲಾಸ್ ಶಾಲೆ ಆರಂಭ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?
ಬೆಂಗಳೂರು, ಆ. 23: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ 9 ನೇ ತರಗತಿಯ ಭೌತಿಕ ತರಗತಿಗಳು ರಾಜ್ಯದಲ್ಲಿ ಪ್ರಾರಂಭವಾಗಿವೆ. ನಗರ ಪ್ರದೇಶಕ್ಕಿಂತಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನಗರ ಪ್ರದೇಶದಲ್ಲಿ ಶೇ. 70 ರಷ್ಟು ಮಕ್ಕಳು ಶಾಲೆಗಳಿಗೆ ಬಂದಿರುವುದು ಸಂತಸ ತಂದಿದೆ. ಕೊರೊನಾ ಸೋಂಕಿನ ಸಾಧಕ ಬಾಧಕಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಇವತ್ತು ಶಾಲೆಗಳ ಭೌತಿಕ ತರಗತಿ ಪ್ರಾರಂಭ ಹಾಗೂ ಪಠ್ಯ ಪುಸ್ತಕಗಳ ಕೊರತೆ ಕುರಿತು "ಒನ್ಇಂಡಿಯಾ ಕನ್ನಡ" ಜತೆ ಮಾತನಾಡಿದ ಶಿಕ್ಷಣ ಸಚಿವರು, ರಾಜ್ಯದಲ್ಲಿ ಹತ್ತನೇ ತರಗತಿ ಮತ್ತು 9 ನೇ ತರಗತಿಯ ಭೌತಿಕ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಲು ಸೂಚಿಸಲಾಗಿದೆ. ಶಾಲೆ ಆರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅವರು ಹೇಳಿದರು.
ಶೀಘ್ರದಲ್ಲಿ ತೀರ್ಮಾನ ಮಾಡ್ತೇವೆ: ರಾಜ್ಯದಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಗಳ ಶಾಲೆ ಆರಂಭಿಸುವ ಪ್ರಸ್ತಾವನೆ ಇದೆ. ಈಗ ತೆಗೆದಿರುವ ಭೌತಿಕ ತರಗತಿಗಳು, ವಸ್ತುಸ್ಥಿತಿ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ವರದಿ ಆಧಾರಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಕೊರೊನಾ ಸೋಂಕಿನ ಬಗ್ಗೆ ಮುಂದಿನ ಬೆಳವಣಿಗೆ ನೋಡಿಕೊಂಡು ಸೆಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾನವಾಗಲಿದೆ. ನಮಗೆ ಮಕ್ಕಳ ಆರೋಗ್ಯವೂ ಮುಖ್ಯ. ಜತೆಗೆ ಅವರ ವಿದ್ಯಾಭ್ಯಾಸವೂ ಮುಖ್ಯ. ಹೀಗಾಗಿ ಎರಡರ ಬಗ್ಗೆ ನಮ್ಮ ಸರ್ಕಾರ ಒತ್ತು ಕಾಳಜಿ ವಹಿಸಿದೆ. ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡದೇ ಹಂತ ಹಂತವಾಗಿ ಶಾಲೆ ತೆರೆಯುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಬಿ.ಸಿ. ನಾಗೇಶ್ ತಿಳಿಸಿದರು.

ಪಠ್ಯ ಪುಸ್ತಕ ಸಮಸ್ಯೆ ಬಗೆ ಹರಿಸುತ್ತೇವೆ:
ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯ ಪುಸ್ತಕ ಕೊರತೆ ಎದುರಾಗದಂತೆ ಪೂರೈಕೆ ಮಾಡಲು ಸೂಚಿಸಲಾಗಿದೆ. ಇರುವ ಪಠ್ಯ ಪುಸ್ತಕಗಳನ್ನು ಶೇ. 50 ರಷ್ಟು ಗ್ರಾಮೀಣ ಭಾಗಕ್ಕೆ ಸರಬರಾಜು ಮಾಡಲಾಗಿದೆ. ಶೇ. 70 ರಷ್ಟು ಪುಸ್ತಕಗಳನ್ನು ನಗರ ಪ್ರದೇಶದ ಶಾಲೆಗಳಿಗೆ ವಿತರಿಸಲು ಸೂಚಿಸಿಲಾಗಿದೆ. ಅಗತ್ಯ ಇರುವ ಪುಸ್ತಕಗಳನ್ನು ಇನ್ನೊಂದು ತಿಂಗಳಲ್ಲಿ ವಿತರಣೆ ಮಾಡುವಂತೆ ಎಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪಠ್ಯ ಪುಸ್ತಕ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ವಿತರಣೆ ಮಾಡಲು ಕ್ರಮ ಜರುಗಿಸಲಾಗುವುದು ಎಂದು ಅವರು ಇದೇ ವೇಳೆ ಹೇಳಿದರು. ಕೊರೊನಾ ಸೋಂಕಿನಿಂದ ಪಠ್ಯ ಪುಸ್ತಕ ಮುದ್ರಣಕ್ಕೆ ತೊಂದರೆಯಾಗಿತ್ತು. ಶೇ. 30 ರಷ್ಟು ಪಠ್ಯ ಪುಸ್ತಕಗಳನ್ನು ಪಠ್ಯ ಪುಸ್ತಕ ಸಂಘ ಪೂರೈಕೆ ಮಾಡಿತ್ತು. ಇದೀಗ ಶಾಲೆಗಳು ಆರಂಭದ ಮುನ್ಸೂಚನೆ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಪಠ್ಯ ಪುಸ್ತಕ ವಿತರಣೆಗೆ ತೊಡಕಾಗಲಿದೆ.

ಪದವಿ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ. ಪ್ರಾಥಮಿಕ ಶಾಲಾ ಹಂತದಿಂದ ರಾಷ್ಟ್ರೀಯ ಶೀಕ್ಷಣ ನೀತಿಯನ್ನು ಅನುಷ್ಠಾನ ಮಾಡಲು ಪೂರ್ವ ತಯಾರಿ ನಡೆಸುತ್ತಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಪ್ರಾಥಮಿಕ ಶಾಲಾ ಹಂತದಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಈಗಾಗಲೇ ತೀರ್ಮಾನಿಸಿದ್ದೇವೆ. ಅದಕ್ಕೆ ಬೇಕಾದ ತಯಾರಿ ನಡೆದಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ಶಾಲೆ ಆಡಳಿತ ಮಂಡಳಿಗಳಿಗೆ ಮನವಿ: ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕೊರೊನಾ ಮಾರ್ಗಸೂಚಿಯನ್ನು ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲಿಸಬೇಕು. ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಉಲ್ಲಂಘನೆ ಮಾಡಬಾರದು. ಯಾರಾದರೂ ಉಲ್ಲಂಘನೆ ಮಾಡಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.












Click it and Unblock the Notifications