ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಗ್ಗೆ ಕಿವಿಗೊಡಬೇಡಿ: ಬಿ.ಸಿ. ನಾಗೇಶ್
ಬೆಂಗಳೂರು, ಏ. 08: ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇದಕ್ಕೆ ಯಾರೂ ಮಹತ್ವ ಕೊಡಬೇಡಿ. ಇದರಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಗಾಬರಿಗೆ ಒಳಗಾಗುತ್ತಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
Recommended Video
ಬೆಂಗಳೂರು ನಗರದ ಪ್ರತಿಷ್ಠಿತ ಏಳು ಶಾಲೆಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದ ಘಟನೆ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿ ಇ ಮೇಲ್ ಮಾಡಿದ್ದಾರೆ. ಇದೊಂದು ಹುಸಿ ಬಾಂಬ್ ಬೆದರಿಕೆ. ಇದಕ್ಕೆ ಮಹತ್ವ ಕೊಡಬಾರದು. ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಭೀತಿಗೆ ಒಳಗಾಗುತ್ತಾರೆ. ಬೆದರಿಕೆ ಇ-ಮೇಲ್ ಅನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತದೆ. ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮ ಕೂಡ ಜರುಗಿಸಲಾಗುತ್ತದೆ. ಈ ಹುಸಿ ಬಾಂಬ್ ಬೆದರಿಕೆಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಈ ಹಿಂದೆ ಕೂಡ ಇದೇ ರೀತಿ ಶಾಲೆಗೆ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿತ್ತು. ಪೊಲೀಸರು ತನಿಖೆ ನಡೆಸಿದಾಗ ಪರೀಕ್ಷೆಗೆ ತಯಾರಿ ನಡೆಸದ ವಿದ್ಯಾರ್ಥಿ ಬೆದರಿಕೆ ಹಾಕಿ ಸಿಕ್ಕಿಬಿದ್ದಿದ್ದ. ವಿಚಾರಣೆ ವೇಳೆ ಪರೀಕ್ಷೆಗೆ ತಯಾರಿ ಆಗಿರದ ಹಿನ್ನೆಲೆಯಲ್ಲಿಬೆದರಿಕೆ ಹಾಕಿದ್ದಾಗಿ ಹೇಳಿದ್ದ. ಪರೀಕ್ಷೆಗೆ ಸಿದ್ಧವಾಗದೇ ಇರುವರು ಇಂತಹ ಕೆಲಸ ಮಾಡುತ್ತಾರೆ. ಇಂತಹ ಹುಸಿ ಬಾಂಬ್ ಬೆದರಿಕೆಗಳಿಗೆ ಕಿವಿಕೊಡಬೇಡಿ ಎಂದು ಮನವಿ ಮಾಡಿದರು.
ಕೋವಿಡ್ ನಿಂದಾಗಿ ಎರಡು ವರ್ಷ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ನಿರೀಕ್ಷೆಗೂ ಮೀರಿ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಕಡೆ ಸುಗಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದರು.