ಶಾಲಾ ಮಕ್ಕಳಿಗೆ ಇಂದಿನಿಂದ ಕೋವಿಡ್ ಲಸಿಕೆ ಅಭಿಯಾನ
ಬೆಂಗಳೂರು, ಜ. 03: ಕೋವಿಡ್ 19 ಜತೆ ಬದುಕುವುದು ಅನಿವಾರ್ಯ. 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಇಂದಿನಿಂದ ನೀಡಾಗುತ್ತಿದ್ದು, ಪೋಷಕರು ಧೈರ್ಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನವಿ ಮಾಡಿದ್ದಾರೆ.
ದೇಶದಲ್ಲಿ ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಜ. 03 ರಿಂದ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಮನವಿ ಮಾಡಿರುವ ಶಿಕ್ಷಣ ಸಚಿವರು, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಂದೇಶ ರವಾನಿಸಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗುತ್ತಿರುವ ಶಿಕ್ಷಣ ಸಚಿವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ ಸೋಂಕಿನೊಂದಿಗೆ ಬದುಕುವುದು ಅನಿವಾರ್ಯ. ಆದರೆ ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ನೀಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಈಗಾಗಲೇ ದೇಶದಲ್ಲಿ 145 ಕೋಟಿ ಮಂದಿಗೆ ಎರಡನೇ ಡೋಸ್ ಕೊಡಲಾಗುತ್ತಿದೆ. ಇದರ ಜತೆಗೆ ದೇಶದಲ್ಲಿ ಶಾಲಾ ಮಕ್ಕಳಿಗೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಕೊಡುವ ಅಭಿಯಾನ ಇಂದಿನಿಂದ ಆರಂಭವಾಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಹಕಾರ ನೀಡಿದ್ದಾರೆ.
ಎಲ್ಲಾ ತಾಲೂಕಿನಲ್ಲಿ ಇಂದಿನಿಂದ ಮಕ್ಕಳಿಗೆ ಲಸಿಕೆ ಕೊಡುವ ಅಭಿಯಾನ ಪ್ರಾರಂಭವಾಗಿದೆ. ಎಲ್ಲರಿಗೂ ಸಿದ್ಧ ಲಸಿಕೆ ನೀಡಲಾಗುತ್ತಿದೆ. ಪೋಷಕರು ಇದಕ್ಕೆ ಕೈ ಜೋಡಿಸಬೇಕು. ಮುಂದಿನ ದಿನಗಳಲ್ಲಿ ಯಾವೊಂದು ಮಗುವಿನ ಓದಿಗೆ ತೊಂದರೆ ಆಗಬಾರದು. ಒಬ್ಬ ಶಿಕ್ಷಣ ಮಂತ್ರಿಯಾಗಿ ನಾನು ಮನವಿ ಮಾಡುತ್ತಿದ್ದೇನೆ. ಯಾವುದೇ ಆತಂಕಕ್ಕೆ ಒಗಾಗದೇ ಲಸಿಕೆ ಕೊಡಿಸಿ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೇ ಶಿಕ್ಷಣ ಕೊಡುವ ಪ್ರಯತ್ನಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೊರೊನಾ ಸೋಂಕಿನ ಮೂರನೇ ಅಲೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಸಾಮಾಜಿಕ ಅಂತರ ಕಾಪಾಡಬೇಕು. ಜತೆಗೆ ಮಾಸ್ಕ್ನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲಾ ಕಟ್ಟು ನಿಟ್ಟಿನ ನಿಯಮಗಳನ್ನು ಪಾಲನೆ ಮಾಡುವ ಜತೆಗೆ, ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಈ ಮೂಲಕ ಮೂರನೇ ಅಲೆಯಿಂದ ಪಾರಾಗುವ ಪ್ರಯತ್ನ ಮಾಡೋಣ ಎಂದು ಶಿಕ್ಷಣ ಸಚಿವರು ಕೋರಿದ್ದಾರೆ.
ಕೊರೊನಾ ಸೋಂಕುನಿಂದ ಚಿಕಿತ್ಸೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಎರಡು ದಿನದ ಹಿಂದೆ ಪರೀಕ್ಷೆಗೆ ಒಳಪಟ್ಟಿದ್ದ ಅವರಿಗೆ ಕೋವಿಡ್ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನಿಂದ ಮಕ್ಕಳಿಗೆ ಕೊರೊನಾ ಲಸಿಕೆ ಕೊಡುವ ಅಭಿಯಾನ ದೇಶದಲ್ಲಿ ಚಾಲನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲಾ ಮಕ್ಕಳಿಗೆ ಲಸಿಕೆ ಕೊಡುವ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ ಮಾಡಿದ್ದಾರೆ.