Breaking; ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ಗೆ ತಡೆ
ಶಿಕ್ಷಕರ ಸ್ಥಳ ನಿಯುಕ್ತಿಗೆ ಜನವರಿ 24ರಂದು ನಡೆಸಲಾಗುತ್ತಿದ್ದ ಕೌನ್ಸಿಲಿಂಗ್ ಸ್ಥಗಿತಗೊಳಿಸಲಾಗಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ಜನವರಿ 24; ಕರ್ನಾಟಕದಲ್ಲಿ ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ಜನವರಿ 24ರಂದು ನಡೆದ ಎಲ್ಲಾ ಪ್ರಕ್ರಿಯೆ ರದ್ದುಗೊಳಿಸಲು ಆದೇಶ ನೀಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. 24/1/2023ರಂದು ಕೌನ್ಸಿಲಿಂಗ್ ಮೂಲಕ ಹೆಚ್ಚುವರಿ ಶಿಕ್ಷಕರುಗಳಿಗೆ ಸ್ಥಳ ನಿಯುಕ್ತಿಗೊಳಿಸಲಾಗುತ್ತಿತ್ತು.
ಈ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚುವರಿ ಶಿಕ್ಷಕರ ಪಟ್ಟಿಯಲ್ಲಿ ನ್ಯೂನ್ಯತೆಗಳಿದ್ದರೂ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವುದು ಸಚಿವರ ಗಮನಕ್ಕೆ ಬಂದಿತ್ತು.

ಸಚಿವರು ಈ ಹಿನ್ನಲೆಯಲ್ಲಿ ಕೌನ್ಸಿಲಿಂಗ್ಗೆ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆ ಕುರಿತ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಕಡತದಲ್ಲಿ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸದರಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಮತ್ತು ಇಂದಿನ ದಿನದ ಎಲ್ಲಾ ಪ್ರಕ್ರಿಯೆ ರದ್ದುಗೊಳಿಸುವಂತೆ ಸಚಿವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ಗೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಆನ್ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಲಾಗುತ್ತಿತ್ತು. ಜನವರಿ 25ರಂದು ಪ್ರೌಢಶಾಲಾ ಶಿಕ್ಷಕರ ಕೌನ್ಸಿಲಿಂಗ್ ನಡೆಯಲಿದೆ.
ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಹಲವು ಜಿಲ್ಲೆಗಳಲ್ಲಿ ವಿರೋಧ ವ್ಯಕ್ತವಾಗಿದೆ. ಶಿಕ್ಷಕರನ್ನು ವರ್ಗಾವಣೆ ಮಾಡಬಾರದು ಎಂದು ಪೋಷಕರು ಪ್ರತಿಭಟನೆ ನಡೆಸಿದ್ದರು. ಇದರ ನಡುವೆಯೇ ಮಂಗಳವಾರ ಕೌನ್ಸಿಲಿಂಗ್ ನಡೆದಿತ್ತು. ಅದರಲ್ಲಿ ತಾಂತ್ರಿಕ ದೋಷಗಳು ಕಂಡು ಬಂದಿದ್ದು, ಸಚಿವರು ಇಡೀ ದಿನದ ಪ್ರಕ್ರಿಯೆ ರದ್ದುಗೊಳಿಸಿದ್ದಾರೆ.
ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆಯ ಮಾಹಿತಿಯನ್ನು ಶಿಕ್ಷಣ ಇಲಾಖೆ ಶೀಘ್ರದಲ್ಲಿಯೇ ಪ್ರಕಟಿಸುವ ನಿರೀಕ್ಷೆ ಇದೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಆರಂಭವಾದರೆ ಕೌನ್ಸಿಲಿಂಗ್ ಪ್ರಕ್ರಿಯೆಯೂ ವಿಳಂಬವಾಗುವ ನಿರೀಕ್ಷೆ ಇದೆ.












Click it and Unblock the Notifications