SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು, ಮಾ. 01: ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆ ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಧಾರವಾಡದಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ ಎಂದರು.
ಜೂನ್ 21ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂನ್ 24ರಂದು ಗಣಿತ, ಜೂನ್ 28 ರಂದು ವಿಜ್ಞಾನ, ಜೂನ್ 30 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ 2ರಂದು ದ್ವಿತೀಯ ಭಾಷೆ ಇಂಗ್ಲಿಷ್ ಅಥವಾ ಕನ್ನಡ ಹಾಗೂ ಜುಲೈ 5 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯಾದ್ಯಂತ ಶಿಕ್ಷಣ ಸ್ಪಂದನ
ಬೆಳಗಾವಿ ವಿಭಾಗದಲ್ಲಿ ಶಿಕ್ಷಣ ಸ್ಪಂದನ ಕಡತ ವಿಲೇವಾರಿ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕಡತ ವಿಲೇವಾರಿಗೆ ಚುರುಕು ಮುಟ್ಟಿಸುವ ಉದ್ದೇಶದಿಂದ ಬಜೆಟ್ ಅಧಿವೇಶನ ಮುಗಿದ ಕೂಡಲೇ ಕಲ್ಯಾಣ ಕರ್ನಾಟಕ ಪ್ರದೇಶದ ಭಾಗದಿಂದ ಆರಂಭಿಸಿ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ನಡೆಸಲಾಗುವುದು ಎಂದರು.
ಬೆಳಗಾವಿ ವಿಭಾಗದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಶಿಕ್ಷಕರಿಂದ ಇಂದಿನ ಶಿಕ್ಷಣ ಸ್ಪಂದನಕ್ಕೆ ಒಟ್ಟು 2,940 ಅರ್ಜಿಗಳು ಬಂದಿದ್ದವು ಅವುಗಳಲ್ಲಿ 2,674 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ 266 ಅರ್ಜಿಗಳು ವಿವಿಧ ಹಂತಗಳಲ್ಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 90 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಅವುಗಳಲ್ಲಿ 41 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ ಉಪಹಾರ ಯೋಜನೆ
ಗ್ರಾಮಾಂತರ ಪ್ರದೇಶಗಳಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅತ್ಯಂತ ಅಗತ್ಯವಾಗಿದೆ. ಯೋಜನೆ ಆರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಕೇಳಲಾಗಿದ್ದು, ಅನುಮತಿ ಸಿಕ್ಕ ತಕ್ಷಣ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಅಧಿಕಾರಿಗಳಿಂದ ಶಾಲಾ ದತ್ತು
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಇಲಾಖೆಯ ನಿರ್ದೇಶಕ ಮಟ್ಟದ ಅಧಿಕಾರಿಗಳೂ ಸೇರಿದಂತೆ ಪ್ರತಿಯೊಬ್ಬರೂ ಶಾಲಾ ದತ್ತು ತೆಗೆದುಕೊಳ್ಳಲು ಮುಂದಾಗಬೇಕು. ಅವಶ್ಯಕತೆ ಬಿದ್ದರೆ ದತ್ತು ಪಡೆದ ಶಾಲೆಗಳಲ್ಲಿ ಅಧಿಕಾರಿಗಳು ಮಕ್ಕಳಿಗೆ ಬೋಧಿಸುವ ಕೆಲಸದಲ್ಲಿಯೂ ತೊಡಗಿಸಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
ಶೀಘ್ರದಲ್ಲಿ ಎಲ್ಲ ಶಾಲೆಗಳು ಆರಂಭ
ರಾಜ್ಯದಲ್ಲಿ ಎಲ್ಲ ಶಾಲೆಗಳನ್ನು ಆರಂಭಿಸಲು ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಮ್ಮತಿ ಅಗತ್ಯವಿದೆ. ಶೀಘ್ರದಲ್ಲಿ ಸಭೆ ಸೇರಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದೆಂದರು. ಇದೇ ಏಪ್ರಿಲ್ ಎರಡರಿಂದ ತಾವು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷಾ ಪೂರ್ವ ಸಿದ್ಧತೆಗಳನ್ನು ಸ್ವತಃ ಪರಿಶೀಲಿಸುವುದಾಗಿ ಇದೇ ಸಂದರ್ಭದಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.