ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಸುದ್ದಿ
ಬೆಂಗಳೂರು, ಮೇ 4 : ಕೊರೊನಾ ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಶೀಘ್ರ ನಡೆಸಲು ಅನುವಾಗುವಂತೆ ಎಲ್ಲ ಸಿದ್ದತೆಗಳನ್ನು ಈಗಿನಿಂದಲೇ ಪ್ರಾರಂಭಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪ ನಿರ್ದೇಶಕರೊಂದಿಗೆ ಸಚಿವರು ವಿಡಿಯೋ ಸಂವಾದವನ್ನು ನಡೆಸಿದರು. ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದರು ಎಂದು ಸಚಿವರು ತಿಳಿಸಿದ್ದಾರೆ.
ಕೆಎಸ್ಓಯು: ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ Online ಮೂಲಕ ತರಗತಿ
ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್ ಮೆಂಟ್ ಜಿಲ್ಲೆಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಅಭಿಪ್ರಾಯ ಪಡೆದ ಸಚಿವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿರುವ ಈ ದಿನಮಾನಗಳಲ್ಲಿ ಮಕ್ಕಳ ಮಾನಸಿಕ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಿದ್ಧತೆಯನ್ನು ಜಾರಿಯಲ್ಲಿಡಬೇಕೆಂದು ಸೂಚಿಸಿದರು.