ಕೊರೊನಾ ಸಂಕಷ್ಟದಲ್ಲೂ ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು, ಜೂ. 18: ಕೊರೊನಾ ವೈರಸ್ನಿಂದಾಗಿನ ಕಳೆದ ಒಂದೂವರೆ ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರಕ್ಕೂ ತೀವ್ರ ಹಿನ್ನಡೆಯಾಗಿದೆ. ಒಂದೆಡೆ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದ್ದು, ಮತ್ತೊಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ವೇತನ ಪಾವತಿಯಾಗಿಲ್ಲ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಶಿಕ್ಷಕರ ಸ್ಥಿತಿ ಬೀದಿಗೆ ಬಿದ್ದಂತಾಗಿದೆ. ನಾಡಿನಾದ್ಯಂತ ಶಿಕ್ಷಕರು ಜೀವನೋಪಾಯಕ್ಕಾಗಿ ತಾತ್ಕಾಲಿಕವಾಗಿ ತಮ್ಮ ವೃತ್ತಿಯನ್ನೇ ಬದಲಿಸಿದ್ದಾರೆ. ಜೀವನೋಪಾಯಕ್ಕಾಗಿ ತರಕಾರಿ ಮಾರಾಟ ಮಾಡುವುದು ಸೇರಿದಂತೆ ಹಲವು ಕೆಲಸಗಳನ್ನು ಶಿಕ್ಷಕರು ಮಾಡುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಕೊರೊನಾ ಸಂಕಷ್ಟ ಕಾಲದಲ್ಲಿಯೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಶಿಕ್ಷಕರ ಬಹುದಿನದ ಬೇಡಿಕೆಯನ್ನು ಶಿಕ್ಷಣ ಸಚಿವರು ಈಡೇರಿಸಲು ಮುಂದಾಗಿದ್ದಾರೆ.

ಬೇಡಿಕೆ ಈಡೇರಿಸಿದ ಸುರೇಶ್ ಕುಮಾರ್!
""ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ"" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
""ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ"" ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೈಹಿಕ ಶಿಕ್ಷಕರಿಗೆ ಪದೋನ್ನತಿ
"2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, ಐದು ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ" ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
"ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಜೂನ್ 21ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ತಮ್ಮ ಇಚ್ಛಾನುಸಾರ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ" ಎಂದು ಅವರು ತಿಳಿಸಿದ್ದಾರೆ.

ಬಹುದಿನಗಳ ಬಡ್ತಿ ಬೇಡಿಕೆ
""ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು. ಈಗ ಆ ಪ್ರಕ್ರಿಯೆ ಮುಗಿದಿದ್ದು, ಮುಂಬಡ್ತಿ ಹೊಂದಲಿರುವ ದೈಹಿಕ ಶಿಕ್ಷಣ ಪರಿವೀಕ್ಷಕರು ಇಲಾಖೆಯಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಗುಣಮಟ್ಟದ ಶಿಕ್ಷಣದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಬೇಕು"" ಎಂದು ಸುರೇಶ್ ಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಮಕ್ಕಳಿಗೆ ಕೆನೆಭರಿತ ಹಾಲಿನ ಪುಡಿ
ಇದೇ ಸಂದರ್ಭದಲ್ಲಿ ಮತ್ತೊಂದೆ ಯೋಜನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ""ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಶಯದಂತೆ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೋಷಕಾಂಶದ ಆಹಾರವನ್ನು ಒದಗಿಸುವ ಭಾಗವಾಗಿ ಜೂನ್, ಜುಲೈ 2021ರ ಮಾಹೆಗಳಿಗೆ ಕೆನೆಭರಿತ ಹಾಲಿನ ಪುಡಿಯನ್ನು ವಿತರಿಸಲು ತೀರ್ಮಾನಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಇಂದು (ಜೂ. 18) 16,371 ಲಕ್ಷ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ"" ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.












Click it and Unblock the Notifications