ಚುನಾವಣಾ ಪ್ರಚಾರ : ಮಹತ್ವದ ಸಭೆ ಕರೆದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಮಾರ್ಚ್ 19 : ಚುನಾವಣಾ ಪ್ರಚಾರದ ಕುರಿತು ಸಭೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಸಭೆ ಕರೆದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಒಟ್ಟಾಗಿ ಪ್ರಚಾರ ನಡೆಸಲಿದ್ದಾರೆ.
ಸೋಮವಾರ ತಡರಾತ್ರಿ ತನಕ ಪದ್ಮನಾಭನಗರದ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಸರಣಿ ಸಭೆಗಳು ನಡೆದವು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಹ ದೇವೇಗೌಡರ ಮನೆಗೆ ಭೇಟಿ ನೀಡಿದ್ದರು.
ಸಭೆಯ ಬಳಿಕ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಇಂದು ರಾತ್ರಿ 9 ಗಂಟೆಗೆ ಸಭೆ ನಡೆಯಬೇಕಿತ್ತು. ಆದರೆ, ದೇವೇಗೌಡರಿಗೆ ಬೇರೆ ಕಾರ್ಯಕ್ರಮಗಳಿತ್ತು. ನಾನು ಚಿಕ್ಕಮಗಳೂರು ಕಾರ್ಯಕರ್ತರ ಸಭೆಯಲ್ಲಿದ್ದೆ. ಆದ್ದರಿಂದ, ತಡವಾಯಿತು' ಎಂದರು.

'ಮಂಗಳವಾರ ಬೆಳಗ್ಗೆ 11ಗಂಟೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಪರಮೇಶ್ವರ ಅವರ ಜೊತೆಗೆ ಸಭೆ ನಡೆಸಲಿದ್ದೇನೆ. ಮುಂದಿನ ಚುನಾವಣಾ ಪ್ರಚಾರಕ್ಕೆ ನಾವೆಲ್ಲರೂ ಒಟ್ಟಾಗಿ ಹೋಗುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ' ಎಂದರು.
'ಸಣ್ಣ-ಪುಟ್ಟ ಸಮಸ್ಯೆಗಳಿಗೆ ಯಾವುದೇ ಅವಕಾಶ ಕೊಡದೇ. ಒಟ್ಟಾಗಿ ಒಂದೇ ಧ್ವನಿಯಲ್ಲಿ ನಾವು ಯಾವ ರೀತಿ ಹೋಗಬೇಕು ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನವನ್ನು ಕೈಗೊಳ್ಳಲಿದ್ದೇವೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
'ಸೀಟು ಹಂಚಿಕೆ ಬಗ್ಗೆ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆ ಹರಿಸುವ ಶಕ್ತಿ ಎರಡೂ ಪಕ್ಷಗಳಿಗೆ ಇದೆ' ಎಂದು ಕುಮಾರಸ್ವಾಮಿ ಹೇಳಿದರು. ಆದರೆ, ದೇವೇಗೌಡರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬ ಗುಟ್ಟನ್ನು ಅವರು ಬಿಟ್ಟುಕೊಡಲಿಲ್ಲ.











Click it and Unblock the Notifications