ಶಿರಾ ಉಪ ಚುನಾವಣೆ ಖಚಿತ; ಆರ್. ಆರ್. ನಗರ, ಮಸ್ಕಿಗೆ ಕಾನೂನು ಅಡ್ಡಿ!
ಬೆಂಗಳೂರು, ಸೆಪ್ಟೆಂಬರ್ 10: ಕೇಂದ್ರ ಚುನಾವಣಾ ಆಯೋಗ ಬಿಹಾರ ಉಪ ಚುನಾವಣೆ ದಿನಾಂಕವನ್ನು ಶೀಘ್ರದಲ್ಲಿಯೇ ಘೋಷಣೆ ಮಾಡಲಿದೆ. ಬಿಹಾರದ ಜೊತೆ ಹಲವು ವಿಧಾನಸಭೆ, ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗಲಿದೆ. ಇದರಲ್ಲಿ ಕರ್ನಾಟಕವೂ ಸೇರಿದೆ.
ಕರ್ನಾಟಕದಲ್ಲಿ ರಾಜರಾಜೇಶ್ವರಿ ನಗರ, ಮಸ್ಕಿ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಬೇಕಿದೆ. ಚುನಾವಣಾ ಆಯೋಗ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದೆ.
ಆರ್. ಆರ್. ನಗರ ಮತ್ತು ಮಸ್ಕಿ ಕ್ಷೇತ್ರದ ಉಪ ಚುನಾವಣೆಗೆ ಇರುವ ಕಾನೂನು ತೊಡಕುಗಳು ಇನ್ನೂ ನಿವಾರಣೆಯಾಗಿಲ್ಲ. ಆದ್ದರಿಂದ, ಶಿರಾ ಜೊತೆಗೆ ಉಳಿದ ಎರಡು ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯುವುದು ಇನ್ನೂ ಖಚಿತವಾಗಿಲ್ಲ.
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸತ್ಯ ನಾರಾಯಣ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ರಾಜಕೀಯ ಪಕ್ಷಗಳು ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಕ್ಷೇತ್ರ ಯಾರ ಪಾಲಾಗಲಿದೆ ಎಂದು ಕಾದು ನೋಡಬೇಕಿದೆ.

ಚುನಾವಣಾಧಿಕಾರಿಗಳ ಹೇಳಿಕೆ
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಧಿಕಾರಿಗಳಿಗೆ ಕೋವಿಡ್ ಸಂದರ್ಭದಲ್ಲಿ ಚುನಾವಣೆ ನಡೆಸಲು ಬೇಕಾದ ತರಬೇತಿ ನೀಡಲಾಗಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಕ್ಕೂ ವರದಿ ಸಲ್ಲಿಸಲಾಗಿದೆ" ಎಂದು ಹೇಳಿದ್ದಾರೆ.

ಆರ್. ಆರ್. ನಗರ ಕ್ಷೇತ್ರ
ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾಗಿತ್ತು. ಚುನಾವಣಾ ಅಕ್ರಮ ನಡೆದಿದೆ ಎಂದು ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ಇನ್ನು ಹೈಕೋರ್ಟ್ನಲ್ಲಿ ಬಾಕಿ ಇದೆ. 2ನೇ ಅತಿ ಹೆಚ್ಚು ಮತ ಪಡೆದಿರುವ ತಮ್ಮ ಆಯ್ಕೆಯನ್ನು ಘೋಷಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ನಲ್ಲಿದೆ.

ಮಸ್ಕಿ ಕ್ಷೇತ್ರದ ಉಪ ಚುನಾವಣೆ
ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಆಯ್ಕೆ ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸವನಗೌಡ ತುರವೀಹಾಳ ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯನ್ನು ವಾಪಸ್ ಪಡೆಯಲು ಅವರು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ರಾಘವೇಂದ್ರ ಎಂಬುವರು ಆಕ್ಷೇಪಣೆ ಹಾಕಿದ್ದಾರೆ. ಈ ಅರ್ಜಿಗಳು ಇತ್ಯರ್ಥವಾಗುವ ತನಕ ಉಪ ಚುನಾವಣೆ ನಡೆಯುವುದಿಲ್ಲ.
Recommended Video

ಅಕ್ಟೋಬರ್ನಲ್ಲಿ ಘೋಷಣೆ
ಕೇಂದ್ರ ಚುನಾವಣಾ ಆಯೋಗ ಅಕ್ಟೋಬರ್ 15ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ. ಇದರ ಜೊತೆ ದೇಶದ 65 ವಿಧಾನಸಭಾ ಕ್ಷೇತ್ರ, 1 ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕವೂ ಘೋಷಣೆಯಾಗಲಿದೆ.












Click it and Unblock the Notifications