ಲೋಕಸಭೆ ಚುನಾವಣೆ; ಪ್ರಚಾರಕ್ಕೂ ಬಂತು ಮಾರ್ಗಸೂಚಿ
ಬೆಂಗಳೂರು, ಮಾರ್ಚ್ 18: ಲೋಕಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಎರಡು ಹಂತದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.
ಲೋಕಸಭೆ ಚುನಾವಣೆ ಪ್ರಚಾರ ಕಾವು ಪಡೆದಿದೆ. ಚುನಾವಣಾ ಪ್ರಚಾರ ನಡೆಸುವ ರಾಜಕೀಯ ಪಕ್ಷಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಸಭೆಯನ್ನು ನಡೆಸಿ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಿದೆ. ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ.
ಅನುಮತಿ ಪಡೆಯುವುದು ಕಡ್ಡಾಯ: ರಾಜಕೀಯ ಪಕ್ಷಗಳು ಅನುಮತಿಗಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು 'ಸುವಿಧಾ ಆಪ್' ಪರಿಚಯಿಸಿದ್ದು, ಈ ಆಪ್ ಮೂಲಕ ಅಥವಾ ಖುದ್ದಾಗಿ ಎಆರ್ಓ ಕಚೇರಿಗೆ ಭೇಟಿ ನೀಡಿ ಅನುಮತಿ ಪಡೆಯಬಹುದಾಗಿದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕು. ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ರಾಜಕೀಯ ಪಕ್ಷಗಳಿಗೆ ತಿಳಿಸಲಾಗಿದೆ.
ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಯಾವುದೇ ಸಭೆಗೆ ಸಂಬಂಧಿಸಿದಂತೆ ಧ್ವನಿವರ್ಧಕಗಳು ಅಥವಾ ಇತರೆ ಯಾವುದೇ ಸೌಲಭ್ಯವನ್ನು ಬಳಸಲು ಅನುಮತಿ ಅಥವಾ ಪರವಾನಿಗಿ ಪಡೆಯಬೇಕಾದರೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅಂತಹ ಅನುಮತಿ ಮತ್ತು ಪರವಾನಿಗೆ ಪಡೆಯಬೇಕು. ಮೆರವಣಿಗೆಯನ್ನು ಆಯೋಜಿಸುವ ಪಕ್ಷ ಅಥವಾ ಅಭ್ಯರ್ಥಿಯು ಮೆರವಣಿಗೆ ಪ್ರಾರಂಭವಾಗುವ ಸಮಯ ಮತ್ತು ಸ್ಥಳ, ಅನುಸರಿಸಬೇಕಾದ ಮಾರ್ಗ ಮತ್ತು ಮೆರವಣಿಗೆ ಕೊನೆಗೊಳ್ಳುವ ಸಮಯ ಮತ್ತು ಸ್ಥಳವನ್ನು ಮುಂಚಿತವಾಗಿ ನಿರ್ಧರಿಸಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು.
ಒಮ್ಮೆ ಅನುಮತಿ ಪಡೆದ ಮೇಲೆ ಯಾವುದೇ ಕಾರಣಕ್ಕೂ ಮಾರ್ಗವನ್ನಾಗಲಿ ಅಥವಾ ಕಾರ್ಯಕ್ರಮವನ್ನಾಗಲಿ ಬದಲಾಯಿಸುವಂತಿಲ್ಲ. ಸ್ಥಳೀಯ ಪೊಲೀಸ್ ಮತ್ತು ಚುನಾವಣಾ ಸಿಬ್ಬಂದಿ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ರಾಜಕೀಯ ಪಕ್ಷಗಳು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಭಿನ್ನಾಭಿಪ್ರಾಯ ಹೆಚ್ಚಿಸುವಂತಹ ಅಥವಾ ಪರಸ್ಪರ ದ್ವೇಷವನ್ನು ಉಂಟು ಮಾಡುವ ಅಥವಾ ವಿವಿಧ ಜಾತಿಗಳು ಮತ್ತು ಸಮುದಾಯಗಳ ನಡುವೆ ಧಾರ್ಮಿಕ ಅಥವಾ ಭಾಷಿಕ ನಡುವೆ ಉದ್ವಿಘ್ನತೆಯನ್ನು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ತೊಡಗಬಾರದು ಎಂದು ನಿರ್ದೇಶಿಸಲಾಗಿದೆ.
ಚುನಾವಣಾ ಭಾಷಣ ಅಥವಾ ಸುದ್ದಿಗೋಷ್ಠಿಯಲ್ಲಿ ಪರಸ್ಪರ ದ್ವೇಷವನ್ನು ಉಂಟು ಮಾಡುವ ಅಥವಾ ವಿವಿಧ ಜಾತಿಗಳು ಮತ್ತು ಸಮುದಾಯಗಳ ನಡುವೆ ಧಾರ್ಮಿಕ ಅಥವಾ ಭಾಷಿಕ ನಡುವೆ ಉದ್ವಿಘ್ನತೆಯನ್ನು ಉಂಟು ಮಾಡುವ ಹೇಳಿಕೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಮತಗಳನ್ನು ಪಡೆಯಲು ಜಾತಿ ಅಥವಾ ಕೋಮು ಭಾವನೆಗಳ ಆಧಾರದ ಮೇಲೆ ಮನವಿ ಮಾಡಬಾರದು. ಮಸೀದಿ, ಚರ್ಚ್, ದೇವಾಲಯಗಳು ಅಥವಾ ಇತರೆ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕಾಗಿ ವೇದಿಕೆಯಾಗಿ ಬಳಸಬಾರದು ಎನ್ನುವ ನಿಯಮಗಳನ್ನು ಎಲ್ಲ ರಾಜಕೀಯ ಪಕ್ಷಗಳು ಪಾಲನೆ ಮಾಡಬೇಕು.












Click it and Unblock the Notifications