Karnataka Election: ಪಂಚರಾಜ್ಯಗಳ ಜೊತೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ ದಿನಾಂಕ ಘೋಷಣೆ
Karnataka Elections 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೇ ವೇಳೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕಗಳನ್ನು ಘೋಷಣೆ ಮಾಡಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭಾ ಚುನಾವಣೆ 2026 ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಘೋಷಣೆಯೊಂದಿಗೆ ಆಯಾ ರಾಜ್ಯಗಳಲ್ಲಿ ತಕ್ಷಣದಿಂದಲೇ 'ಮಾದರಿ ನೀತಿ ಸಂಹಿತೆ' ಜಾರಿಗೆ ಬಂದಿದೆ.

ಕರ್ನಾಟಕದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ
ಇದೇ ವೇಳೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡು ಕ್ಷೇತ್ರಗಳ ಉಪಚುನಾಚಣೆ ದಿನಾಂಕಗಳನ್ನು ಘೋಷಿಸಿದೆ. ರಾಜ್ಯ ರಾಜಕಾರಣದಲ್ಲಿ ಈ ಘೋಷಣೆ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ತೆರವಾಗಿದ್ದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.
ಕ್ಷೇತ್ರ, ಮತದಾನ, ಫಲಿತಾಂಶ ದಿನಾಂಕಗಳ ವಿವರ
ದಾವಣಗೆರೆ ದಕ್ಷಿಣ - ಏಪ್ರಿಲ್ 9
ಬಾಗಲಕೋಟೆ - ಏಪ್ರಿಲ್ 9
ಫಲಿತಾಂಶ - ಮೇ 4, 2026
ದೇಶದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಕರ್ನಾಟಕದ ಎರಡು ಉಪಚುನಾವಣೆಗಳ ಫಲಿತಾಂಶಗಳು ಮೇ 4ರಂದು ಪ್ರಕಟವಾಗಲಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಹಂತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದ್ದು, ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಭದ್ರತಾ ಪಡೆಗಳ ನಿಯೋಜನೆ ಮತ್ತು ಕಟ್ಟುನಿಟ್ಟಿನ ನಿಗಾ ಇರಿಸಲು ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ದಾವಣಗೆರೆ ದಕ್ಷಿಣದಲ್ಲಿ ಟಿಕೆಟ್ ಪೈಪೋಟಿ
ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಅಧಿಕೃತ ದಿನಾಂಕಗಳನ್ನು ಘೋಷಿಸಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಕ್ಕೆ ಈಗ ಚುನಾವಣೆ ಅನಿವಾರ್ಯವಾಗಿದೆ.
ರಾಜಕೀಯ ಪಕ್ಷಗಳಲ್ಲಿ ಗೊಂದಲದ ವಾತಾವರಣ:
ಚುನಾವಣಾ ಆಯೋಗದ ಈ ದಿಢೀರ್ ಘೋಷಣೆಯು ಕಾಂಗ್ರೆಸ್ ಮತ್ತು ಬಿಜೆಪಿ ಪಾಳಯದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇನ್ನೂ ಅಂತಿಮ ಹಂತ ತಲುಪದಿರುವುದು ರಾಜಕೀಯ ವಲಯದಲ್ಲಿ ತಲ್ಲಣಕ್ಕೆ ಕಾರಣವಾಗಿದೆ.
ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಪೈಪೋಟಿ
ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಚಿವ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಸೇರಿದಂತೆ ಅಬ್ದುಲ್ ಜಬ್ಬಾರ್ ಸಾಬ್, ಸೈಯದ್ ಸೈಫುಲ್ಲಾ ಮತ್ತು ಖಾಲಿದ್ ಮಹಮ್ಮದ್ ಅವರಂತಹ ನಾಯಕರು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ. ವಿಶೇಷವಾಗಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಮತದಾರರು, ಸಾಮಾಜಿಕ ನ್ಯಾಯದ ಆಧಾರದ ಮೇಲೆ ತಮ್ಮ ಸಮುದಾಯದವರಿಗೇ ಈ ಬಾರಿ ಟಿಕೆಟ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.
ಮತ್ತೊಂದೆಡೆ, ಬಿಜೆಪಿಯಲ್ಲೂ ಟಿಕೆಟ್ ಆಕಾಂಕ್ಷಿಗಳ ದಂಡೇ ಇದೆ. ಯಶವಂತರಾವ್ ಜಾದವ್, ಅಜಯ್ ಕುಮಾರ್ ಮತ್ತು ಶ್ರೀನಿವಾಸ್ ದಾಸಕರಿಯಪ್ಪ ಅವರಂತಹ ಹೆಸರುಗಳು ಮುಂಚೂಣಿಯಲ್ಲಿದ್ದರೂ, ಪಕ್ಷ ಯಾರಿಗೆ ಮಣೆ ಹಾಕಲಿದೆ ಎಂಬುದು ಈಗಿನ ದೊಡ್ಡ ಪ್ರಶ್ನೆಯಾಗಿದೆ. ಒಟ್ಟಾರೆಯಾಗಿ ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆ, ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಅಂತಲೇ ಹೇಳಬಹುದು
ಮಾಜಿ ಸಚಿವರಾದ ಎಚ್.ವೈ.ಮೇಟಿ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಭಾರತೀಯ ಚುನಾವಣಾ ಆಯೋಗವು ಚುನಾಚಣೆ ದಿನಾಂಕವನ್ನು ಘೋಷಣೆ ಮಾಡಿದೆ. ಇಂದು ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಎಚ್.ವೈ.ಮೇಟಿ ಪ್ರತಿನಿಧಿಸುತ್ತಿದ್ದ ಬಾಗಲಕೋಟೆ ಮತ್ತು ಡಾ.ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸುತ್ತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾಚಣೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಎರಡು ಕ್ಷೇತ್ರಗಳಿಗೂ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications