ಭಂಡಾರಿ ವಿರುದ್ಧ ಶಿವಮೊಗ್ಗದಲ್ಲಿ ಭುಗಿಲೆದ್ದ ಬಂಡಾಯ
ಬೆಂಗಳೂರು. ಮಾ. 14 : ಶಿವಮೊಗ್ಗ ಕ್ಷೇತ್ರದಲ್ಲಿ ಮಂಜುನಾಥ್ ಭಂಡಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರಿಂದ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿರುವ ಕರ್ನಾಟಕದ 2ನೇ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಂಜುನಾಥ್ ಭಂಡಾರಿ ಅಭ್ಯರ್ಥಿ ಎಂದು ಪ್ರಕಟಿಸಲಾಗಿದೆ. ಇದರಿಂದ ಜಿಲ್ಲಾ ಕಾಂಗ್ರೆಸ್ ಮುಖಂಡರು ಅಸಮಾಧಾನಗೊಂಡಿದ್ದಾರೆ. [ಕಾಂಗ್ರೆಸ್ 2ನೇ ಪಟ್ಟಿ]
ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಸಲ್ಲಿಸಿತ್ತು. ಆದರೆ, ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಚೇರಿ ಮುಂದೆ ಟೈರ್ ಗಳಿಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಪಕ್ಷದ ಬೆಳವಣಿಗೆ ಹಿತದೃಷ್ಠಿಯಿಂದ ಮತ್ತು ಬಿಜೆಪಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡಲು ಕುಮಾರ್ ಬಂಗಾರಪ್ಪ ಅವರು ಉತ್ತಮ ಅಭ್ಯರ್ಥಿ. ಆದ್ದರಿಂದ ಅವರಿಗೆ ಕ್ಷೇತ್ರದ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. [ಕರ್ನಾಟಕದ ಇತರ ಚುನಾವಣಾ ಸುದ್ದಿಗಳು]

ಶಿವಮೊಗ್ಗ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ
ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಮಂಜುನಾಥ್ ಭಂಡಾರಿ ಅವರಿಗೆ ನೀಡಿರುವುದಕ್ಕೆ ವ್ಯಾಪಕರ ವಿರೋಧ ವ್ಯಕ್ತವಾಗಿದೆ. ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಟೈರ್ ಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ನಾವು ಮನವಿ ಸಲ್ಲಿಸಿದ್ದೆವು. ಆದರೆ, ಪಕ್ಷ ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ನೀಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಪಕ್ಷೇತರನಾಗಿ ಬಿದರಿ ಕಣಕ್ಕೆ
ಬಾಗಲಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಸರ್ವಜನಶಕ್ತಿ ಪಕ್ಷದ ಅಧ್ಯಕ್ಷ ಶಂಕರ ಬಿದರಿ ಹೇಳಿದ್ದಾರೆ. ತಮ್ಮ ಸರ್ವಜನಶಕ್ತಿ ಪಕ್ಷ ಇನ್ನು ನೋಂದಣಿಯಾಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಕಾಂಗ್ರೆಸ್, ಬಿಜೆಪಿ ಹೊರತುಪಡಿಸಿ ಇತರ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ತಮಗೆ ಬೆಂಬಲ ನೀಡಬೇಕು ಎಂದು ಬಿದರಿ ಮನವಿ ಮಾಡಿದರು.

ಕಾಗೋಡು ರಾಜಕೀಯ ನಿವೃತ್ತಿ
ಲೋಕಸಭೆ ಚುನಾವಣೆಯಲ್ಲ ಇನ್ನು ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ರಾಜಕೀಯ ಸಾಕಾಗಿ ಹೋಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಶಿವಮೊಗ್ಗದಿಂದ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುವ ಕುರಿತು ಸುದ್ದಿ ಹಬ್ಬಿಸಲಾಗಿದೆ. ಚುನಾವಣಾ ವ್ಯವಸ್ಥೆ ಬದಲಾಗಿದೆ. ಮೊದಲಿನಂತೆ ಇಲ್ಲ. ಆದ್ದರಿಂದ ಮುಂದಿನ ಯಾವ ಚುನಾವಣೆಗೂ ತಾವು ಸ್ಪರ್ಧಿಸುವುದಿಲ್ಲ ಎಂದು ಕಾಗೋಡು ಸ್ಪಷ್ಟಪಡಿಸಿದರು.

ನರೇಂದ್ರ ಮೋದಿ ಯಕ್ಷಗಾನ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕ ಲೋಕಸಭಾ ಚುನಾವಣೆಗೆ ಯಕ್ಷಗಾನದ ಮೂಲಕ ಪ್ರಚಾರ ಮಾಡಲು ಸಿದ್ಧವಾಗಿದೆ. ಯಕ್ಷಗಾನದ ಮೂಲ ಆಶಯ ಇರಿಸಿಕೊಂಡು ತಯಾರಿಸಲಾದ ನರೇಂದ್ರ ಮೋದಿ ಹಾಗೂ ಪಕ್ಷದ ಚುನಾವಣ ಪ್ರಚಾರದ ಧ್ವನಿ ಸುರುಳಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ನರೇಂದ್ರ ಮೋದಿ, ಅಭಿವೃದ್ಧಿ, ದೇಶದ ಭದ್ರತೆ, ನೇತ್ರಾವತಿ ನದಿ ತಿರುವಿನ ಬಗ್ಗೆ ಪಕ್ಷದ ನಿಲುವು ಮುಂತಾದ ವಿಚಾರಗಳನ್ನು ಧ್ವನಿಸುರುಳಿಯಲ್ಲಿ ತಿಳಿಸಲಾಗಿದೆ. ಕಟೀಲು ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಭಾಗವತಿಕೆಯಲ್ಲಿ ಈ ಸಿಡಿ ತಯಾರಾಗಿದ್ದು, ಯಕ್ಷಗಾನ ಕಲಾವಿದ ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿ ಹಾಡುಗಳ ರಚನೆ ಹಾಗೂ ನಿರೂಪಣೆ ಮಾಡಿದ್ದಾರೆ.

ಆಮ್ ಆದ್ಮಿ ಪರವಾಗಿ ಪ್ರಚಾರ ಮಾಡೋಲ್ಲ
ಆಮ್ ಆದ್ಮಿ ಸೇರಿದಂತೆ ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ. ನನ್ನ ಪ್ರಚಾರ ಏನಿದ್ದರೂ ಭ್ರಷ್ಟಾಚಾರದ ವಿರುದ್ಧ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸುತ್ತಿದೆ. ಆ ಪಕ್ಷದ ಅಭ್ಯರ್ಥಿಗಳಲ್ಲಿ ಭ್ರಷ್ಟರಿಲ್ಲ. ಆದ್ದರಿಂದ ಅವರನ್ನು ಬೆಂಬಲಿಸುತ್ತೇನೆ. ಆದರೆ, ಅವರ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದರು.












Click it and Unblock the Notifications