ಚುನಾವಣಾ ಕಣದಿಂದ ಹಿಂದೆ ಸರಿದ ಪ್ರಕಾಶ್ ಹುಕ್ಕೇರಿ
ಬೆಂಗಳೂರು. ಮಾ.13 : ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆಯುವುದು ಸಾಮಾನ್ಯ. ಆದರೆ, ಕರ್ನಾಟಕದಲ್ಲಿನ ಸಚಿವರಿಗೆ ಪಕ್ಷ ಟಿಕೆಟ್ ನೀಡುತ್ತೇನೆ ಎಂದು ಹೇಳಿದರೂ ಅವರು ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಮುಜರಾಯಿ, ಸಕ್ಕರೆ ಮತ್ತು ಸಣ್ಣ ಕೈಗಾರಿಗೆ ಸಚಿವ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದ್ದಾರೆ.
ಚಿಕ್ಕೋಡಿಯ ತಮ್ಮ ನಿವಾಸದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಪ್ರಕಾಶ್ ಹುಕ್ಕೇರಿ, ನನ್ನ ಕ್ಷೇತ್ರದ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಅಪೇಕ್ಷೆಗೆ ವಿರುದ್ಧವಾಗಿ ನಾನು ನಡೆದುಕೊಳ್ಳುವುದಿಲ್ಲ. ಆದ್ದರಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದರು. [ಕಾಂಗ್ರೆಸ್ ಟಿಕೆಟ್ ಪಡೆಯುವ ಸಚಿವರು ಇವರು]
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನನ್ನು ಕಣಕ್ಕಿಳಿಸಲು ಪಕ್ಷದ ರಾಜ್ಯ ಚುನಾವಣಾ ಸಮಿತಿ ಹೈಕಮಾಂಡ್ಗೆ ಸೂಚಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ನನ್ನನ್ನು ಲೋಕಸಭೆ ಅಭ್ಯರ್ಥಿಯೆಂದು ಪರಿಗಣಿಸಬಾರದು ಎಂದು ಮನವಿ ಮಾಡುತ್ತೇನೆ ಎಂದು ಹುಕ್ಕೇರಿ ತಿಳಿಸಿದರು.
ನಾನೂ ಸ್ವತಃ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಿಗೆ ದೂರವಾಣಿ ಮೂಲಕ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಂಭವನೀಯ ಅಭ್ಯರ್ಥಿಗಳಾದ ಲಕ್ಷ್ಮಣರಾವ ಚಿಂಗಳೆ, ಎ.ಬಿ.ಪಾಟೀಲ, ಗಣೇಶ ಹುಕ್ಕೇರಿ ಇವರಲ್ಲಿ ಯಾರಿಗೆ ಪಕ್ಷ ಟಿಕೆಟ್ ನೀಡಿದರೂ, ನಾನು ಬೆಂಬಲ ನೀಡಿ ಅವರ ಗೆಲುವಿಗೆ ಸಹಕಾರ ನೀಡುತ್ತೇನೆ ಎಂದು ಹುಕ್ಕೇರಿ ಹೇಳಿದರು. [ಕರ್ನಾಟಕದ ಇತರ ಚುನಾವಣಾ ಸುದ್ದಿಗಳು]
ಸ್ಪರ್ಧೆಯಿಂದ ಹಿಂದೆ ಸರಿದ ಹುಕ್ಕೇರಿ
ಚಿಕ್ಕೋಡಿ ಕ್ಷೇತ್ರದಿಂದ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮುಜರಾಯಿ, ಸಕ್ಕರೆ ಮತ್ತು ಸಣ್ಣ ಕೈಗಾರಿಗೆ ಸಚಿವ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದ್ದಾರೆ. ಚಿಕ್ಕೋಡಿಯ ತಮ್ಮ ನಿವಾಸದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಪ್ರಕಾಶ್ ಹುಕ್ಕೇರಿ, ನನ್ನ ಕ್ಷೇತ್ರದ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಅಪೇಕ್ಷೆಗೆ ವಿರುದ್ಧವಾಗಿ ನಾನು ನಡೆದುಕೊಳ್ಳುವುದಿಲ್ಲ. ಆದ್ದರಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದೇನೆ ಎಂದು ಹುಕ್ಕೇರಿ ತಿಳಿಸಿದ್ದಾರೆ.
ಜೆಡಿಎಸ್ ನತ್ತ ಜಾಫರ್ ಶರೀಫ್
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅಲ್ಪಸಂಖ್ಯಾತರ ಪ್ರಭಾವಿ ಮುಖಂಡ ಸಿ.ಕೆ.ಜಾಫರ್ ಷರೀಫ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಫರೀಫ್ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಅಸಮಾಧಾನಗೊಂಡಿರುವ ಷರೀಫ್ ಜೆಡಿಎಸ್ ಸೇರಲು ಗೌಡರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಟಿಕೆಟ್ ನನಗೆ ಖಚಿತ
ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗುವುದು ಖಚಿತ ಎಂದು ಕ್ಷೇತ್ರದ ಹಾಲಿ ಸಂಸದ ಜಿಎಸ್ ಬಸವರಾಜು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜ್ನಾಥ್ ಸಿಂಗ್ ಅವರಿಗೆ ನಾನು ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಸಮಪರ್ಕವಾಗಿ ಉತ್ತರ ನೀಡಿದ್ದೇನೆ. ನನ್ನ ಉತ್ತರಕ್ಕೆ ಅವರು ತೃಪ್ತರಾಗಿದ್ದಾರೆ ಎಂದು ತಿಳಿಸಿದರು.
ಸದಾನಂದ ಗೌಡರು ಗರಂ
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಸಿಎಂ ಡಿವಿ ಸದಾನಂದ ಗೌಡರು ಚುನಾವಣಾಧಿಕಾರಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಚುನಾವಣಾ ಅಧಿಸೂಚನೆ ಜಾರಿಗೂ ಮುನ್ನವೇ ನೀತಿ ಸಂಹಿತೆ ಹೆಸರಲ್ಲಿ ಡಿ.ವಿ.ಸದಾನಂದಗೌಡ ಅವರ ಖಾಸಗಿ ವಾಹನ ವಶಪಡಿಸಿಕೊಂಡಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪಕ್ಷದ ನಾಯಕರು ದೂರು ನೀಡಿದ್ದಾರೆ.
ದೇವೇಗೌಡರು ಪ್ರಧಾನಿಯಾಗುತ್ತಾರೆ
ಕರ್ನಾಟಕದಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಸಂಸದರನ್ನು ಗೆಲ್ಲಿಸಿದರೆ ದೇವೇಗೌಡರು ಮತ್ತೂಮ್ಮೆ ಈ ದೇಶದ ಪ್ರಧಾನಿಯಾಗುತ್ತಾರೆ. ಈ ಕುರಿತು ತೃತೀಯ ರಂಗದ ಮುಖಂಡರು ಸಮ್ಮತಿ ಸೂಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಬುಧವಾರ ಚುನಾವಣಾ ಪ್ರಚಾರ ಕೈಗೊಂಡ ಅವರು, ಬೆಂ.ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.