ಕರ್ನಾಟಕದ ಚುನಾವಣೆ ಸುದ್ದಿಗಳ ತುಣುಕು ನೋಟ
ಬೆಂಗಳೂರು. ಮಾ.11 : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಣ ನಿಧಾನವಾಗಿ ರಂಗೇರುತ್ತಿದೆ. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣೆ ಅಧಿಸೂಚನೆ ಪ್ರಕಟವಾದ ಮರುದಿನ ಮಾ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಕರ್ನಾಟಕದಲ್ಲಿನ ಲೋಕಸಭೆ ಚುನಾವಣೆ ಅಧಿಸೂಚನೆ ಮಾರ್ಚ್ 19ರ ಬುಧವಾರ ಪ್ರಕಟವಾಗಲಿದೆ. ಅದರ ಮರುದಿನ ಅಂದರೆ, ಮಾ.20ರ ಗುರುವಾರ ಬಿ.ಎಸ್.ಯಡಿಯೂರಪ್ಪ ನಾಮಪತ್ರ ಸಲ್ಲಿಸಲಿದ್ದಾರೆ. ಗುರುವಾರ ಯಡಿಯೂರಪ್ಪ ಅವರಿಗೆ ಶುಭದಿನವಾಗಿದ್ದು, ಆ ದಿನವನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ. [ಲೋಕಸಭೆ ಚುನಾವಣೆ ವೇಳಾಪಟ್ಟಿ]
ಗುರುವಾರ ಬೆಳಗ್ಗೆ ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪಾದಯಾತ್ರೆಯಲ್ಲಿ ಆಗಮಿಸುವ ಯಡಿಯೂರಪ್ಪ ಅವರು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರದಲ್ಲಿ ಅಂತಿಮವಾಗಿ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಇದರ ನಡುವೆಯೇ ನಾಮಪತ್ರ ಸಲ್ಲಿಸುವ ದಿನಾಂಕ ಪ್ರಕಟಿಸಿ ಯಡಿಯೂರಪ್ಪ ಅಧಿಕೃತವಾಗಿ ಚುನಾವಣೆ ಕಣಕ್ಕೆ ಧುಮುಕಿದ್ದಾರೆ. [ಕರ್ನಾಟಕದ ಇತರ ಚುನಾವಣಾ ಸುದ್ದಿಗಳು]
ಮಾ.20ರಂದು ಬಿಎಸ್ವೈ ನಾಮಪತ್ರ
ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಲ್ಲಾ ಪಕ್ಷಗಳಿಗಿಂತ ಮೊದಲು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 19ರಂದ ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಮಾ.20ರ ಗುರುವಾರ ಯಡಿಯೂರಪ್ಪ ನಾಮತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳ ಹೆಸರನ್ನು ಇನ್ನೂ ಅಂತಿಮಗೊಳಿಸಿಲ್ಲ, ಆದರೆ, ಯಡಿಯೂರಪ್ಪ ತಮ್ಮ ನಾಮಪತ್ರ ಸಲ್ಲಿಸುವ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಮಹಿಮಾ ಬೆದರಿಕಗೆ ಜಗ್ಗಲ್ಲ
ಮಾಜಿ ಸಿಎಂ ಜೆ.ಎಚ್. ಪಟೇಲರ ಪುತ್ರ, ಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ನಾಯಕರಿಗೆ ಹಾಕುತ್ತಿರುವ ಬೆದರಿಕೆಗೆ ತಾವು ಬಗ್ಗುವುದಿಲ್ಲ. ಅವರು ಇಚ್ಛೆ ಇದ್ದರೆ ಪಕ್ಷದಲ್ಲಿ ಇರಬಹುದು. ಇಲ್ಲವೇ ಬಿಡಬಹುದು ಎಂದು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಹಿಮಾ ಪಟೇಲ್ ಅವರಿಗೆ ಪಕ್ಷ ಟಿಕೆಟ್ ನೀಡದೆ, ಶಾಮನೂರು ಶಿವಶಂಕರಪ್ಪ ಪುತ್ರ ಎಸ್ಎಸ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದೆ. ಆದ್ದರಿಂದ ಪಟೇಲ್ ಪಕ್ಷ ತೊರೆಯುವ ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ ಅವರು ಪಕ್ಷ ಬಿಡುವುದಾದದರೆ ಬಿಡಲಿ ಎಂದು ಶಾಮನೂರು ಹೇಳಿದ್ದಾರೆ.
ಚಿತ್ರದುರ್ಗದ ಟಿಕೆಟ್ ವಿವಾದ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಹೊರಗಿನವರಿಗೆ ನೀಡಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸೋಮವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರಿಗೆ ಈ ಕುರಿತು ಕಾರ್ಯರ್ತರು ಮನವಿ ಸಲ್ಲಿಸಿದರು. ಸ್ಥಳೀಯರಿಗೆ ಟಿಕೆಟ್ ತಪ್ಪಿಸಲು ಆಂಜನೇಯ ಮುಂದಾಗಿದ್ದಾರೆ ಎಂದು ಕೆಲವು ಕಾರ್ಯಕರ್ತರು ಆರೋಪಿಸಿದರು. ಈ ಕುರಿತು ಹೇಳಿಕೆ ನೀಡಿರುವ ಆಂಜನೇಯ "ಟಿಕೆಟ್ ನನ್ನ ಜೇಬಿನಲ್ಲಿಲ್ಲ. ನಾನಿನ್ನೂ ನನ್ನ ಚುನಾವಣೆ ದಣಿವಿನಿಂದ ಸುಧಾರಿಸಿಕೊಳ್ಳುತ್ತಿದ್ದೇನೆ. ನಾನು ಖಂಡಿತ ಯಾರಿಗೂ ಟಿಕೆಟ್ ನೀಡಿ ಎಂದು ತಿಳಿಸಿಲ್ಲ" ಎಂದು ಸ್ಪಷ್ಟಪಡಿಸಿದರು.
ಶಿವರಾಮಗೌಡ ಮನವೊಲಿಸುತ್ತೇವೆ
ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಶಿವರಾಮಗೌಡ ಮನವೊಲಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬಿಜೆಪಿ ಕ್ಷೇತ್ರದಲ್ಲಿ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಶಿವರಾಮಗೌಡ ಮುನಿಸಿಕೊಂಡಿದ್ದಾರೆ. ಕರಡಿ ಸಂಗಣ್ಣ ಅವರಿಗೆ ಟಿಕೆಟ್ ನೀಡಿರುವುದು ಪಕ್ಷದ ರಾಷ್ಟ್ರೀಯ ಚುನಾವಣಾ ಸಮಿತಿ ನಿರ್ಧಾರ. ಅದರಲ್ಲಿ ರಾಜ್ಯ ಸಮಿತಿಯ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಪಪಡಿಸಿದ ಜೋಶಿ ಗೌಡರ ಮನವೊಲಿಸಲಾಗುವುದು ಎಂದು ತಿಳಿಸಿದ್ದಾರೆ.
24ರಂದು ಜೋಶಿ ನಾಮಪತ್ರ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಮಾ.24ರ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕ್ಷೇತ್ರದ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.