ಈ ವರ್ಷದಿಂದ ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಹೆಚ್ಚಳ..!
ಬೆಂಗಳೂರು, ಜೂನ್ 22: ಮುಂದಿನ ಶೈಕ್ಷಣಿಕ ವರ್ಷದಿಂದ ಇಂಜಿನಿಯರ್ ಕಾಲೇಜುಗಳು ನಡೆಸುವ ಕಾಮೆಡ್ ಕೆ ಪರೀಕ್ಷೆಯನ್ನು ರದ್ದು ಪಡಿಸಲು ಸರ್ಕಾರ ನಿರ್ಧಾರವನ್ನು ಮಾಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ನಡೆಸಿದ ಖಾಸಗಿ ಕಾಲೇಜುಗಳ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಇನ್ನು ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಮಾತ್ರವೇ ಒಪ್ಪಿಗೆ ನೀಡಿಲಾಗಿದೆ.
ತಾನು ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರಕಾರ ನಡೆಸಿವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಇಟಿ ವ್ಯವಸ್ಥೆಯಡಿಗೆ ವಾಪಸ್ ಬರಲು ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಆಸಕ್ತಿ ತೋರಿದೆ. ಈ ಸಂಬಂಧ ಒಪ್ಪಂದ ಆದ ಮೇಲೆ ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಯಥಾಸ್ಥಿತಿಯಲ್ಲಿದ್ದ ಎಂಜಿನಿಯರಿಂಗ್ ಶಿಕ್ಷಣ ಶುಲ್ಕವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೊರೆಯಾಗದಂತೆ ಕೇವಲ ಶೇ.10ರಷ್ಟು ಮಾತ್ರ ಹೆಚ್ಚಿಸಲು ನಿರ್ಧರಿಸಲಾಗಿದೆ. ಶೇ.25ರಷ್ಟು ಶುಲ್ಕ ಏರಿಕೆ ಮಾಡಬೇಕೆಂಬ ಕ್ಯುಪೇಕಾ ಬೇಡಿಕೆ ಕಾರ್ಯ ಸಾಧುವಲ್ಲ ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಧಿಕ ಶುಲ್ಕ ಪಡೆದರೆ ಕಾಲೇಜು ವಿರುದ್ದ ಕ್ರಮ
ಕ್ಯುಪೇಕಾ ಪ್ರತಿನಿಧಿಗಳ ಜತೆ ವಿಕಾಸಸೌಧದಲ್ಲಿ ಬುಧವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಶುಲ್ಕ ಹೆಚ್ಚಳವು ಖಾಸಗಿ ಕಾಲೇಜುಗಳಲ್ಲಿ ಇರುವ ಸರಕಾರಿ ಎಂಜಿನಿಯರಿಂಗ್ ಸೀಟುಗಳಿಗೆ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದನ್ನು ಮೀರಿ ಹೆಚ್ಚಿನ ಶುಲ್ಕ ವಸೂಲು ಮಾಡಿದರೆ ಅಂತಹ ಕಾಲೇಜುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕೆ ಕ್ಯುಪೇಕಾ ಪ್ರತಿನಿಧಿಗಳು ಕೂಡ ಒಪ್ಪಿಕೊಂಡಿದ್ದಾರೆ' ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಖಾಸಗಿ ಕಾಲೇಜುಗಳ ಜೊತೆ ಒಪ್ಪಂದ
ಖಾಸಗಿ ಕಾಲೇಜುಗಳು ದುಬಾರಿ ಶುಲ್ಕದ ಮ್ಯಾನೇಜ್ಮೆಂಟ್ ಸೀಟುಗಳಿಗಾಗಿ ತಾವೇ ನಡೆಸುತ್ತಿರುವ ಕಾಮೆಡ್-ಕೆ ಪರೀಕ್ಷೆಯನ್ನು ನಿಲ್ಲಿಸುವ ಸುಳಿವು ನೀಡಿವೆ. ಇದರ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲಾಗುವುದು. ಇದನ್ನು ಆಧರಿಸಿ, ಕ್ಯುಪೇಕಾ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅವರು ವಿವರಿಸಿದರು.
ಕಾಮೆಡ್-ಕೆ ಸ್ಥಗಿತಗೊಂಡರೆ ಸಿಇಟಿ ಮೂಲಕ ಆಯ್ಕೆ
ಸಿಇಟಿಯನ್ನು ಅಖಿಲ ಭಾರತ ವ್ಯಾಪ್ತಿಯಲ್ಲಿ ನಡೆಸಲಿದೆ. ಇದರಲ್ಲಿ ವಿದ್ಯಾರ್ಥಿಗಳು ಪಡೆಯುವ ರ್ಯಾಂಕಿಂಗ್ ಆಧರಿಸಿ, ಈಗಿನಂತೆಯೇ ಸೀಟು ಹಂಚಲಾಗುವುದು. ಇದರಿಂದ ಈಗ ಆಗುತ್ತಿರುವ ಗೊಂದಲ ಮತ್ತು ಅಪವ್ಯಯ ಎರಡೂ ನಿವಾರಣೆ ಆಗಲಿವೆ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಶೀಘ್ರವೇ ಕಾಮೆಡ್ ಕೆ ಬಗ್ಗೆ ತೀರ್ಮಾನ
ವೃತ್ತಿಪರ ಶಿಕ್ಷಣಕ್ಕಾಗಿ ಖಾಸಗಿ ಕಾಲೇಜುಗಳು ಪ್ರತ್ಯೇಕ ಕಾಮೆಡ್ ಕೆ( CET) ಪರೀಕ್ಷೆಗಳನ್ನು ನಡೆಸುತ್ತಿವೆ. ಈ ವರೀಕ್ಷೆಯನ್ನು ರದ್ದು ಪಡಿಸಿ ಒಂದೇ ಪರೀಕ್ಷೆಯನ್ನು ನಡೆಸಲು ಖಾಸಗಿ ಕಾಲೇಜುಗಳು ಒಪ್ಪಿಗೆಯನ್ನು ನೀಡಿದೆ. ಖಾಸಗಿ ಕಾಲೇಜುಗಳ ಜೊತೆ ಒಪ್ಪಂದ ಮಾಡಿಕೊಂಡು ಮುಂದೆ ಹೇಗೆ ಪರೀಕ್ಷೆಯನ್ನು ನಡೆಸಬೇಕೆಂದು ತೀರ್ಮಾಸಲಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವಿ ಡಾ. ಸಿಎನ್ ಅಶ್ವಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕ್ಯುಪೇಕಾ ಅಧ್ಯಕ್ಷರೂ ಆದ ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರ ಪದಾಧಿಕಾರಿಗಳು ಇದ್ದರು.