ಪರಿಸರ ಸ್ನೇಹಿ ಸಾರಿಗೆ ನೀತಿ 2025-30: ಮುಂದಿನ 5 ವರ್ಷಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ
ಬೆಂಗಳೂರು, ಫೆಬ್ರವರಿ 15: ಮೂರು ದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಜಾಗತಿಕ ಹೂಡಿಕೆದಾರರ ಸಮಾವೇಶ ನಿನ್ನೆ (ಫೆಬ್ರವರಿ 14) ಶುಕ್ರವಾರ ಯಶಸ್ವಿಯಾಗಿ ಸಂಪನ್ನಗೊಂಡಿದೆ. 5 ಸಾವಿರಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು, ಕೈಗಾರಿಕಾ ಪರಿಣತರು ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಟ್ಟದ ನೀತಿ ನಿರೂಪಕರು ಸಕ್ರಿಯವಾಗಿ ಪಾಲ್ಗೊಂಡಿದ್ದು, ಬಂಡವಾಳ ಹೂಡಿಕೆಗೆ ಕರ್ನಾಟಕವೇ ಪ್ರಶಸ್ತ ತಾಣ ಎನ್ನುವ ಸಂದೇಶ ಈ ಸಮಾವೇಶದ ಮೂಲಕ ಯಶಸ್ವಿಯಾಗಿದೆ.
ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಬಿಡುಗಡೆ ಬಿಡುಗಡೆ ಮಾಡಿದರು. ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿ ಇದಾಗಿದೆ.

ಈ ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು, ಗೌರಿಬಿದನೂರು, ಧಾರವಾಡ ಮ್ತತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ದೇಶದ ಇ.ವಿ.ವಲಯದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾರ್ಜಿಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ & ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ. ಹೊಸ ನೀತಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಹೈಡ್ರೋಜನ್ ಕೇಂದ್ರಗಳ ಜಾಲದ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಜೊತೆಗೆ ಈಗ ಓಡಾಡುತ್ತಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ರೆಟ್ರೋ-ಫಿಟ್ಟಿಂಗ್ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಬಿಎಂಟಿಸಿ ವ್ಯಾಪ್ತಿಯ ಹೊರಗೆ ಕಡಿಮೆ ದೂರದಲ್ಲಿರುವ ಸೇವೆಗಳಿಗೆ ಇ.ವಿ. ಬಸ್ ಸೇವೆಗಳನ್ನು ಹೆಚ್ಚಿಸಲಾಗುವುದು. ಜೊತೆಗೆ ಇ-ಕಾಮರ್ಸ್ ಮತ್ತು ವಿತರಣಾ ಕಂಪನಿಗಳು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು 2030ರ ವೇಳೆಗೆ ಇ.ವಿ/ಹೈಡ್ರೋಜನ್ ಚಾಲಿತವಾಗಿ ಬದಲಿಸಿಕೊಳ್ಳಲು ಒತ್ತು ಕೊಡಲಾಗಿದೆ. ಅಲ್ಲದೆ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಘನತ್ಯಾಜ್ಯ ನಿರ್ವಹಣೆಗೆ ಇರುವ ವಾಹನಗಳನ್ನು ಕೂಡ ರೂಪಾಂತರಿಸಿ ಕೊಳ್ಳುವಂತೆ ಮಾಡಲಾಗುವುದು. ಖಾಸಗಿ ಕಂಪನಿಗಳು ಮತ್ತು ಶಾಲಾವಾಹನಗಳಿಗೂ ಇದನ್ನು ಅನ್ವಯಿಸಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.












Click it and Unblock the Notifications