ಕೇಂದ್ರದಿಂದಲೇ ಜಾತಿ ಜನಗಣತಿ: ಈಶ್ವರ ಖಂಡ್ರೆ ಹೇಳಿದ್ದೇನು?
ಬೀದರ್, ಮೇ 01: ಕೇಂದ್ರ ಸರ್ಕಾರ ಜಾತಿ ಗಣತಿಗಷ್ಟೇ ಸೀಮಿತವಾಗದೆ, ಯಾವುದೇ ಜಾತಿ ಜನಾಂಗಕ್ಕೆ ಅನ್ಯಾಯವಾಗದ ರೀತಿಯಲ್ಲಿ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯ ಸಮೀಕ್ಷೆಯನ್ನೂ ನಡೆಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವೇ ಜಾತಿ ಗಣತಿ ಮಾಡುವ ಘೋಷಣೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆ ವೇಳೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲೇ ಜಾತಿ ಗಣತಿ ನಡೆಸುವ ಆಶ್ವಾಸನೆ ನೀಡಿತ್ತು. ಕೇಂದ್ರ ಸರ್ಕಾರ ಈಗ ನಮ್ಮ ನಿಲುವನ್ನು ಬೆಂಬಲಿಸಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕೇವಲ ಜಾತಿಗಳ ತಲೆ ಎಣಿಕೆ ಮಾಡಿದರೆ ಸಾಲದು, ದೇಶದ ಎಲ್ಲ ಜಾತಿಯ ಜನರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಪರಿಸ್ಥಿತಿಯ ನಿಖರ ಸಮೀಕ್ಷೆ ನಡೆಸಬೇಕು. ಆಗ ಮಾತ್ರ ಸರ್ವರಿಗೂ ನ್ಯಾಯ ಸಿಗಲು ಸಾಧ್ಯ ಎಂದು ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ ಜಾತಿಯ ಜನಗಣತಿ ಮೊದಲ ಬಾರಿಗೆ 1931ರಲ್ಲಿ ನಡೆದಿತ್ತು. ಅದೇ ಮೊದಲ ಮತ್ತು ಅದೇ ಕಡೆಯ ಜಾತಿ ಗಣತಿಯೂ ಆಗಿತ್ತು. ಅದಾದ ನಂತರ ಕಾಂಗ್ರೆಸ್ ಪಕ್ಷ ಜಾತಿಗಣತಿಯ ಅಗತ್ಯವನ್ನು ಪ್ರತಿಪಾದಿಸಿತ್ತು ಎಂದು ಹೇಳಿದರು.
ಇಂದು ಸಮ ಸಮಾಜದ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ಆಶಯದಂತೆ ಎಲ್ಲ ಜನ - ಜಾತಿ ಸಮುದಾಯದ ದುರ್ಬಲರಿಗೆ, ಹಿಂದುಳಿದವರಿಗೆ ಸಮಾನ ಅವಕಾಶ ದೊರಕಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ನಿಲುವಾಗಿದೆ. ಸರ್ಕಾರದ ಯೋಜನೆಗಳ ಪ್ರಯೋಜನ ಎಲ್ಲ ವಂಚಿತರಿಗೂ ಲಭ್ಯವಾಗಬೇಕು ಮತ್ತು ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರದ ಯೋಜನೆಗಳನ್ನು ರೂಪಿಸಬೇಕು ಇದಕ್ಕೆ ಜಾತಿಗಣತಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಆಧಾರದಲ್ಲಿ ನಡೆದಾಗ ಮಾತ್ರ ಸಾಧ್ಯವಾಗುತ್ತದೆ ಎಂದರು.
1931ರ ನಂತರ ಭಾರತದಾದ್ಯಂತ ಈವರೆಗೆ ಜಾತಿವಾರು - ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಸರ್ಕಾರದ ಸೌಲಭ್ಯಗಳು ಸಮಪರ್ಕವಾಗಿ ಹಂಚಿಕೆ ಆಗುತ್ತಿಲ್ಲ. ಅರ್ಹ ಫಲಾನುಭವಿಗಳನ್ನು ಗುರುತಿಸಲು, ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ ಅವರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮೇಲೆತ್ತಲು ಆಗುತ್ತಿಲ್ಲ. ಹೀಗಾಗಿ ಜಾತಿ ಗಣತಿ ಇಂದಿನ ಅಗತ್ಯವಾಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.
ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತತ್ ಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಸರ್ವ ಜನಾಂಗಕ್ಕೂ ಲೇಸು ಬಯಸಿದ ಸಮ ಸಮಾಜದ ನಿರ್ಮಾತೃ ವಿಶ್ವಗುರು ಬಸವಣ್ಣನವರು ಮತ್ತು ವಂಚಿತರಿಗೆ, ಶೋಷಿತರಿಗೆ, ದುರ್ಬಲರಿಗೆ ಸಂವಿಧಾನದ ಮೂಲಕ ಧ್ವನಿ ನೀಡಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಸಂದರ್ಭದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯುತ್ತಿರುವ ಬಗ್ಗೆ ನೋವು ವ್ಯಕ್ತಪಡಿಸಿದ್ದಾರೆ.
ಜಯಂತಿ ಆಚರಣೆ, ಸಾರ್ವಜನಿಕ ಕಾರ್ಯಕ್ರಮ ಸೇರಿ ಯಾವುದೇ ಸಂದರ್ಭದಲ್ಲಿ ಯಾವುದೇ ಜನಾಂಗೀಯ ಹಲ್ಲೆ ನಡೆದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗದಂತೆ ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಆಡಳಿತ ಮುಂಜಾಗರೂಕತಾ ಕ್ರಮ ಕೈಗೊಳ್ಳಬೇಕು. ಮುಗ್ಧ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಮತ್ತು ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು, ಮರು ಕಳಿಸಿದರೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯನ್ನೇ ಹೊಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಖುಂದವಂದಪೂರ ಘಟನೆಯನ್ನು ಖಂಡಿಸಿರುವ ಸಚಿವರು, ಬೀದರ್ ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಜಿಲ್ಲೆಯಲ್ಲಿ ಯಾರೂ ಶಾಂತಿ ಕದಡಬಾರದು. ಕೆಲವು ಅಹಿತಕರ ಘಟನೆಗಳಿಂದಲೇ ದ್ವೇಷ ಹೆಚ್ಚಾಗಿ, ಸೌಹಾರ್ದತೆಗೆ ಭಂಗ ಬರುತ್ತದೆ. ಒಂದು ಕಿಡಿಯನ್ನು ನಿರ್ಲಕ್ಷಿಸಿದರೆ ಅದು ಬೆಂಕಿಯ ಜ್ವಾಲೆ ಆಗುತ್ತದೆ. ಹೀಗಾಗಿ ವೈಯಕ್ತಿಕ ವಿಚಾರಗಳನ್ನು ಸಾರ್ವತ್ರೀಕರಣ ಮಾಡದಂತೆ ಮತ್ತು ಸೋದರರಂತೆ ಬಾಳುವಂತೆ ಜಿಲ್ಲೆಯ ಎಲ್ಲ ಜನತೆಗೆ ಅದರಲ್ಲೂ ಖುಂದವಂದಪೂರದ ಜನತೆಗೆ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.












Click it and Unblock the Notifications