ಶುಕ್ರವಾರ ಈಶ್ವರಪ್ಪ, ಬೊಮ್ಮಾಯಿ ಭೇಟಿ; ಸಿಎಂ ಕಾರ್ಯಕ್ರಮ ಪಟ್ಟಿ
ಬೆಂಗಳೂರು, ಏಪ್ರಿಲ್ 14; ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಶುಕ್ರವಾರ ಭೇಟಿ ಮಾಡಿ ಅವರು ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಶಿವಮೊಗ್ಗದಲ್ಲಿದ್ದ ಸಚಿವ ಕೆ. ಎಸ್. ಈಶ್ವರಪ್ಪ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ತೀರ್ಮಾನ ಘೋಷಣೆ ಮಾಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಈಶ್ವರಪ್ಪ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸಿದ್ದವು.
ಬುಧವಾರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿಕೆ ಕೊಟ್ಟಿದ್ದ ಈಶ್ವರಪ್ಪ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಈಗ ಪ್ರತಿಪಕ್ಷಗಳು ಅವರನ್ನು ಬಂಧಿಸುವ ತನಕ ಹೋರಾಟ ಮಾಡುತ್ತೇವೆ ಎಂದು ಘೋಷಣೆ ಮಾಡಿವೆ.
ಶುಕ್ರವಾರ ಸಚಿವ ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಹಾಗಾದರೆ ಶುಕ್ರವಾರ ಮುಖ್ಯಮಂತ್ರಿಗಳ ಕಾರ್ಯಕ್ರಮವೇನು?, ಎಷ್ಟು ಹೊತ್ತಿಗೆ ಈಶ್ವರಪ್ಪ ಭೇಟಿ ಮಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಗದಗ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗದಗ ಪ್ರವಾಸ ಕೈಗೊಂಡಿದ್ದಾರೆ. ಗದಗ ಪ್ರವಾಸದ ಬಳಿಕ ಅವರು ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಹೂಡಬೇಕಿತ್ತು. ಆದರೆ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆ ಪಡೆಯುವುದಕ್ಕಾಗಿಯೇ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಶಿವಮೊಗ್ಗದಲ್ಲಿರುವ ಈಶ್ವರಪ್ಪ ಅವರು ಸಹ ಬೆಳಗ್ಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.

6 ಗಂಟೆ ಬಳಿಕ ಸಿಎಂ ಆಗಮನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಹುಬ್ಬಳ್ಳಿಗೆ ತೆರಳಲಿದ್ದಾರೆ. ಅಲ್ಲಿಂದ ಗದಗದಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಾರೆ. ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ ಆಗುವುದು ಸಂಜೆ 6 ಗಂಟೆಯ ಸುಮಾರಿಗೆ. ಈಶ್ವರಪ್ಪ ಭೇಟಿಗೆ 6.30 ರ ಸುಮಾರಿಗೆ ಸಮಯ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಮರಳಿದ ಬಳಿಕ ಈಶ್ವರಪ್ಪ ಎಲ್ಲಿ ಭೇಟಿಯಾಗಲಿದ್ದಾರೆ? ಎಂಬುದು ತಿಳಿಯಲಿದೆ.

ರಾಜ್ಯಪಾಲರಿಗೆ ಕಳಿಸಬೇಕು
ಸಚಿವ ಸಂಪುಟದ ಸದಸ್ಯರು ಮೊದಲು ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡಬೇಕು. ಅದನ್ನು ಅವರು ಪರಿಶೀಲಿಸಿ ಅಂಗೀಕಾರಕ್ಕಾಗಿ ರಾಜ್ಯಪಾಲರಿಗೆ ಕಳಿಸುತ್ತಾರೆ. ಅಂತಿಮವಾಗಿ ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಾರೆ.
2021ರ ಜುಲೈನಲ್ಲಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಆಗಸ್ಟ್ನಲ್ಲಿ ಸಂಪುಟ ವಿಸ್ತರಣೆ ಮಾಡಿದ್ದರು. ಶಿವಮೊಗ್ಗ ನಗರದ ಶಾಸಕ ಕೆ. ಎಸ್. ಈಶ್ವರಪ್ಪರನ್ನು ಸಂಪುಟಕ್ಕೆ ಸೇರಿಸಿಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ನೀಡಿದ್ದರು. ಬಸವರಾಜ ಬೊಮ್ಮಾಯಿ ಸಂಪುಟದ ಮೊದಲ ಸಚಿವರು ಈಗ ರಾಜೀನಾಮೆ ನೀಡುತ್ತಿದ್ದಾರೆ.

ಹೊಸಪೇಟೆಯಲ್ಲಿ ಕಾರ್ಯಕಾರಣಿ
ಶನಿವಾರದಿಂದ ಎರಡು ದಿನಗಳ ಕಾಲ ರಾಜ್ಯದ ನೂತನ ಜಿಲ್ಲೆಯಾದ ವಿಜಯನಗರದ ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ಶುಕ್ರವಾರ ಗದಗ ಪ್ರವಾಸದ ಬಳಿಕ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿ ಶನಿವಾರ ಹೊಸಪೇಟೆಗೆ ತೆರಳಬೇಕಿತ್ತು. ಆದರೆ ಈಶ್ವರಪ್ಪ ರಾಜೀನಾಮೆ ಸ್ವೀಕಾರ ಮಾಡಲು ಅವರು ಶುಕ್ರವಾರ ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಏಪ್ರಿಲ್ 16, 17ರಂದು ನಡೆಯುವ ಬಿಜೆಪಿ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಣಿ ಸಭೆಗೂ ಮುನ್ನವೇ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಈಶ್ವರಪ್ಪ ಬಂಧಿಸಬೇಕು
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈಶ್ವರಪ್ಪ ರಾಜೀನಾಮೆ ಘೋಷಣೆ ಬಳಿಕ ಮಾತನಾಡಿ, "ರಾಜೀನಾಮೆ ನಮ್ಮ ಹೋರಾಟದ ಮುಖ್ಯ ಉದ್ದೇಶವಲ್ಲ. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ -13 ರಡಿ ಪ್ರಕರಣ ದಾಖಲು ಮಾಡಬೇಕು, ಈಗ ಅವರ ಮೇಲೆ ಸೆಕ್ಷನ್ 306, ಸೆಕ್ಷನ್ 34 ರಡಿ ಕೇಸ್ ದಾಖಲಾಗಿದೆ. ಇದರಲ್ಲಿ ಈಶ್ವರಪ್ಪ ಅವರೇ ಮೊದಲ ಆರೋಪಿ ಆಗಿದ್ದಾರೆ. ಇದೊಂದು ಅಮಾನವೀಯ ಅಪರಾಧ, ಇಂತಹಾ ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಸಿಕ್ಕ ಕೂಡಲೆ ಬಂಧನ ಮಾಡಬೇಕು ಎಂದು ಕಾನೂನು ಹೇಳುತ್ತದೆ, ಹಾಗಾಗಿ ಈ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು" ಎಂದು ಒತ್ತಾಯಿಸಿದ್ದಾರೆ.












Click it and Unblock the Notifications