ಸಿಎಂ ಸ್ಥಾನ ಮಕ್ಕಳಾಟವಲ್ಲ, ಸಿದ್ದುಗೆ ಈಶ್ವರಪ್ಪ ಪಾಠ!
ಕೊಪ್ಪಳ, ನ.11 : ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ಮಸೂದೆಯನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆ ಎಂಬುದು ಮಕ್ಕಳಾಟವಲ್ಲ ಅದು ಜವಾಬ್ದಾರಿಯುತ ಹುದ್ದೆ, ಅದನ್ನು ಮರೆತು ಹಿಂದುಗಳ ಭಾವನೆಗೆ ಧಕ್ಕೆ ತರುವಂತಹ ಇಂತಹ ಕಾನೂನು ರೂಪಿಸಲಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಸೋಮವಾರ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತೆ ಸಿದ್ಧಪಡಿಸಿರುವ ರಾಜ್ಯ ಸರ್ಕಾರದ ಮೂಢನಂಬಿಕೆ ನಿಷೇಧ ಮಸೂದೆ 2013ನ್ನು ಜಾರಿಗೊಳಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದರು. ತಮ್ಮ ವಿರೋಧದ ನಡುವೆಯೂ ಕಾಯ್ದೆ ಜಾರಿಯಾದರೆ, ಸಿಎಂ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದರು.

ಮುಖ್ಯಮಂತ್ರಿ ಸ್ಥಾನವೆಂಬುದು ಮಕ್ಕಳಾಟವಲ್ಲ, ಜವಾಬ್ದಾರಿಯುತ ಹುದ್ದೆ ಎಂಬುದನ್ನು ಮರೆತಿರುವ ಸಿದ್ದರಾಮಯ್ಯ, ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗುವಂತೆ ಸಿದ್ಧಪಡಿಸಲಾಗಿರುವ ಮೂಢನಂಬಿಕೆ ನಿಷೇಧ ಮಸೂದೆಯನ್ನು ವಿರೋಧದ ನಡುವೆಯೂ ಜಾರಿಗೊಳಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ-ಮುಸ್ಲಿಂರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ, ಶಾದಿ ಭಾಗ್ಯ ಯೋಜನೆ ಜಾರಿಗೊಳಿಸಿ ಅಲ್ಪಸಂಖ್ಯಾತರನ್ನು ಓಲೈಸುವ ಮೂಲಕ ಸಮಾಜವನ್ನು ಒಡೆಯುವ ಕೆಲಸದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು. ಶಾದಿ ಭಾಗ್ಯ ಯೋಜನೆ ರಾಜ್ಯದ ಎಲ್ಲಾ ಸಮುದಾಯಕ್ಕೂ ವಿಸ್ತರಿಸಬೇಕು. ಯೋಜನೆಯ ಹೆಸರನ್ನು ಶಾದಿ ಭಾಗ್ಯ ಬದಲು ಕಲ್ಯಾಣ ಭಾಗ್ಯ ಎಂದು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ 2013ರನ್ನು ಮಂಡಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ. ಸದನದವೊಳಗೆ ಮತ್ತು ಹೊರಗೆ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ನಡೆಸಲಿದೆ ಎಂದು ಈಶ್ವರಪ್ಪ ಹೇಳಿದರು. (ಮೂಢನಂಬಿಕೆ ಮಸೂದೆ : ಸಿಎಂ, ಸಚಿವರ ಗೊಂದಲ)
ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಈಶ್ವರಪ್ಪ, ಬಿಜೆಪಿಗೆ ಯಡಿಯೂರಪ್ಪ ಸೇರಿದಂತೆ ಎಲ್ಲರೂ ಅನಿವಾರ್ಯ, 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications