ಕರ್ನಾಟಕದ ಒಂದು ಇಂಚು ಭೂಮಿಯನ್ನ ನಾವು ಬಿಟ್ಟು ಕೊಡಲ್ಲ: ಈಶ್ವರ್ ಖಂಡ್ರೆ
ಬೆಂಗಳೂರು, ನವೆಂಬರ್ 30: ಕರ್ನಾಟಕದ ಒಂದು ಇಂಚು ಭೂಮಿಯನ್ನು ಕೂಡ ಕೂಡಾ ಮಹಾರಾಷ್ಟ್ರಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಕರ್ನಾಟಕ ಹಾಗೂ ಮಹರಾಷ್ಟ್ರ ಗಡಿ ವಿವಾದವನ್ನ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಮೇಲೆ ಕಲ್ಲು ತೂರಾಟ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ತಗೆದುಕೊಳ್ಳಬೇಕು. ಕರ್ನಾಟಕದ ಬಸ್ ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ಮಾಡಿರುವ ವಿಚಾರ ಅತ್ಯಂತ ಗಂಭೀರವಾಗಿದೆ.
ರೌಡಿ ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ಕುರಿತು ಮಾತನಾಡಿ, ಬಿಜೆಪಿಯವರು ಸಮೀಕ್ಷೆಯಲ್ಲಿ ಮೂರನೇ ಸ್ಥಾನಕ್ಕೆ ಹೋಗಿದ್ದಾರೆ. ಹೀಗಾಗಿ ಅವರು ಆತಂಕದಲ್ಲಿದ್ದಾರೆ. ಅದಕ್ಕಾಗಿ ರೌಡಿಗಳನ್ನು ಸಮಾಜ ಘಾತುಕ ಶಕ್ತಿಗಳನ್ನು ಸೇರ್ಪಡೆ ಮಾಡಿಕೊಳ್ತಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿ ಭ್ರಷ್ಟಾಚಾರ ಬಂದಿದೆ. ಜನಾಭಿಪ್ರಾಯ ನೋಡಿಕೊಂಡ ಮೇಲೆ ಏನೇನೋ ಹೇಳ್ತಿದ್ದಾರೆ. ಬಿಜೆಪಿಯಲ್ಲಿ ಇರುವವರೆಲ್ಲ ಮೋಸಗಾರರು ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದವರು. ಅವರು ಅಧಿಕಾರಕ್ಕಾಗಿ ಯಾವ ಕೆಳ ಹಂತಕ್ಕೆ ಬೇಕಾದರೂ ಹೋಗ್ತಾರೆ ಎಂದು ಕಿಡಿಕಾರಿದರು.
ಇನ್ನೂ ಪ್ರತಿಯೊಂದು ವಿಷಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೇನಾಯ್ತು ಅಂತ ಹೇಳೋದು ಸರಿಯಲ್ಲ. ಸಿಟಿ ರವಿ ಸಿದ್ದರಾಮಯ್ಯ ಬಗ್ಗೆ ತೇಜೋವಧೆಯ ಮಾತುಗಳನ್ನಾಡ್ತಾರೆ. ಸಮಾಜದಲ್ಲಿ ಗೊಂದಲ ನಿರ್ಮಾಣ ಮಾಡುವ ಕೆಲಸ ಸ್ವಾರ್ಥಕ್ಕಾಗಿ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮಿಂದ ಯಾರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಮುಳುಗುವ ಹಡಗು, ಅಲ್ಲಿಗೆ ಯಾಕೆ ಹೋಗ್ತಾರೆ? ಈಗ ಬಿಜೆಪಿ ಗೆ ಸೇರ್ಪಡೆ ಆಗಿ ಯಾರಾದ್ರೂ ಸುಸೈಡ್ ಮಾಡ್ಕೋತಾರಾ? ಎಂದು ಪ್ರಶ್ನಿಸಿದ ಅವರು, ಸುಧಾಕರ್ ಅವರನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್ಸು. ಎಂಎಲ್ಎ ಮಾಡಿದ್ದೂ ಕಾಂಗ್ರೆಸ್ ಪಕ್ಷ. ಹೀಗಾಗಿ ರೌಡಿಗಳ ವಿಚಾರದಲ್ಲಿ ಅವರು ಕಾಂಗ್ರೆಸ್ ಬಗ್ಗೆ ಮಾತಾಡ್ತಾರೆ. ಅವರಿಗೆ ಅಭಿನಂದನೆ ಎಂದು ತಿರುಗೇಟು ನೀಡಿದರು.
ಬಿಜೆಪಿಯ ಶಾಸಕರೇ ನಮಗೆ ಅರ್ಜಿ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವುದಕ್ಕೆ ಹಲವಾರು ಮಂದಿ ಕಾಯ್ತಾ ಇದ್ದಾರೆ. ವಲಸೆ ಹೋದವರಲ್ಲಿ ಕೆಲವರು ಸೇರ್ಪಡೆ ಆಗ್ತೀವಿ ಅಂತಿದ್ದಾರೆ. ಆದರೆ ಎಲ್ಲವನ್ನೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಬೇಕಾಗುತ್ತದೆ ಎಂದರು.
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಬಸವರಾಜ ಬೊಮ್ಮಾಯಿ
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾರಾಷ್ಟ್ರದ ಕನಸು ಎಂದಿಗೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇನ್ನೂ ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದಿದ್ದಾರೆ.