ಮೋದಿ ಉದ್ಘಾಟಿಸಿದ್ದು ಯಾರ ಯೋಜನೆ? ಬಿಜೆಪಿ ನಾಯಕರನ್ನು ಪ್ರಶ್ನಿಸಿದ ಕುಮಾರಸ್ವಾಮಿ

ಬೆಂಗಳೂರು, ಜೂ. 21: ರಾಜ್ಯ ಬಿಜೆಪಿ ನಾಯಕರಿಗೆ ತಮ್ಮ ಮುಖ ಜನರಿಗೆ ತೋರಿಸುವ ಯೋಗ್ಯತೆ ಇಲ್ಲ. ಯಾರೋ ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, "ಉಪ ನಗರ ರೈಲು ಯೋಜನೆ ನನ್ನ ಸರ್ಕಾರದ್ದು. ಆರು ವರ್ಷದ ಹಿಂದಿನ ಯೋಜನೆ. ನಲವತ್ತು ವರ್ಷದ ಹಿಂದಿನ ಯೋಜನೆ ನಲವತ್ತು ತಿಂಗಳಲ್ಲಿ ಮಾಡಿದ್ವಿ ಎಂದು ಬಿಜೆಪಿಯವರು ಹೇಳಿಕೊಳ್ಳುತ್ತಿದ್ದಾರೆ. ಎಲಿವೇಟೆಡ್ ಕಾರಿಡಾರ್ ನನ್ನ ಸರ್ಕಾರದ ಅವಧಿಯಲ್ಲಿ ಆಗಿದ್ದು. ಹೊರ ವರ್ತುಲ ರಿಂಗ್ ರೋಡ್ ಯೋಜನೆಗೆ 2019 ರಲ್ಲಿ ನನ್ನ ಸರ್ಕಾರವೇ ಅನುಮೋದನೆ ನೀಡಿತ್ತು. ನರೇಂದ್ರ ಮೋದಿ ಉದ್ಘಾಟಿಸಿದ ಯಾವ ಕಾರ್ಯಕ್ರಮಗಳು ಅವರದ್ದಲ್ಲ. 2019 ರಲ್ಲಿಯೇ ಉಪನಗರ ರೈಲು ಯೋಜನೆಗೆ ಬಜೆಟ್ ನಲ್ಲಿ ಹಣ ಮೀಸಲಿಡಲಾಗಿತ್ತು," ಎಂದು ಟೀಕೆ ಮಾಡಿದ್ದಾರೆ.

ಬಿಜೆಪಿ ನಾಯಕರಿಗೆ ಎಚ್‌ಡಿಕೆ ಕೇಳಿದ ಪ್ರಶ್ನೆ

ಬಿಜೆಪಿ ನಾಯಕರಿಗೆ ಎಚ್‌ಡಿಕೆ ಕೇಳಿದ ಪ್ರಶ್ನೆ

ರಾಜ್ಯಕ್ಕೆ ಎರಡು ದಿನ ಪ್ರಧಾನ ಮಂತ್ರಿಗಳು ಬಂದಿದ್ದರು. ಅವರ ಆಗಮನದ ಹಿನ್ನೆಲೆಯಲ್ಲಿ ಪ್ರೊಗ್ರೆಸ್ ರಿಪೋರ್ಟ್ ಅನ್ನು ಕೊಡಲಾಗಿದೆ. 33 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿದರು ಎಂದು ಹೇಳುತ್ತಿದ್ದಾರೆ. ಮೋದಿ ಅವರು ತಾವೇ ರೂಪಿಸಿದ ಹೊಸ ಯೋಜನೆಗಳಿಗೆ ಚಾಲನೆ ನೀಡಿದರೋ ಅಥವಾ ಹಿಂದಿನ ಸರಕಾರಗಳು ರೂಪಿಸಿದ್ದ ಯೋಜನೆಗಳಿಗೆ ಚಾಲನೆ ನೀಡಿದರೋ ಎಂಬುದನ್ನು ಬಿಜೆಪಿ ನಾಯಕರು ಜನರಿಗೆ ತಿಳಿಸಬೇಕು ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬೆಂಗಳೂರು ತಮ್ಮಿಂದಲೇ ಬೆಳಕು ಕಾಣುತ್ತಿದೆ ಇದೆ ಅನ್ನುವ ಹಾಗಿತ್ತು ಮೋದಿ ಅವರ ಭಾಷಣ. ಉಪನಗರ ರೈಲು ಬಗ್ಗೆ ಪ್ರಧಾನಿಗಳು ಮಾತನಾಡಿದ್ದಾರೆ. 2018ರಲ್ಲಿ ಅಧಿಕಾರಕ್ಕೆ ಬರುವವರೆಗೆ ಈ ಯೋಜನೆ ಧೂಳು ಕುಡಿಯುತ್ತಿತ್ತು. ನಾನು 14 ತಿಂಗಳು ಸಿಎಂ ಆಗಿದ್ದಾಗ ರೇಲ್ವೆ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. 23000 ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಸಿದ್ಧಪಡಿಸಿ, 2018ರಲ್ಲಿ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ದೆಹಲಿಗೆ ಹೋಗಿದ್ದೆ. ತಕ್ಷಣ ಅಡಿಗಲ್ಲು ಹಾಕಿ ಎಂದು ನಾನು ಅಂದಿನ ರೇಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದೆ. ಆ ನಂತರ ಕೃಷ್ಣಾ ಕಚೇರಿಯಲ್ಲಿ ಅಂದಿನ ರೇಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನೇ ಆಹ್ವಾನಿಸಿ ಚರ್ಚೆ ಮಾಡಿದ್ದೆ. ಮಾಧ್ಯಮಗಳಲ್ಲೂ ಈ ವಿಷಯ ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮೋದಿ ಉದ್ಘಾಟಿಸಿದ್ದು ನನ್ನ ಸರ್ಕಾರದ ಯೋಜನೆ:

ಮೋದಿ ಉದ್ಘಾಟಿಸಿದ್ದು ನನ್ನ ಸರ್ಕಾರದ ಯೋಜನೆ:

ಆಗ, ಲೋಕಸಭೆ ಚುನಾವಣೆಗೂ ಮುನ್ನ ಉಪನಗರ ರೈಲು ಯೋಜನೆಗೆ ಶಂಕುಸ್ಥಾಪನೆ ಮಾಡುತ್ತೇನೆ ಅಂದಿದ್ದೆ ನಾನು. 2019ರಲ್ಲಿಯೇ ಈ ಬಗ್ಗೆ ಖುದ್ದು ಮಾಧ್ಯಮಗಳ ಮುಂದೆ ಹೇಳಿದ್ದೆ. ಆದರೆ ಬಿಜೆಪಿಯವರು ಬೇಕೆಂದೇ ಅಡಿಗಲ್ಲು ಹಾಕಲು ಒಪ್ಪಿಗೆ ನೀಡಲಿಲ್ಲ. ಅವರ ಬದಲು ಕಾಂಗ್ರೆಸ್ ಜತೆ ಸರಕಾರ ಮಾಡಿದೆ ಎನ್ನುವ ಸಿಟ್ಟು ಅವರಿಗಿತ್ತು. ಆ ನಂತರ ಆಪರೇಶನ್ ಕಮಲದ ಮೂಲಕ ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ತೆಗೆದು ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರಲಾಯಿತು. ಆಮೇಲೆ ಮೂರು ವರ್ಷ ಉಪನಗರ ರೈಲು ಯೋಜನೆಯನ್ನು ಬಾಕಿ ಇಟ್ಟರು . ಇದು ನಲವತ್ತು ವರ್ಷದಿಂದ ನನೆಗುದಿಗೆ ಬಿದ್ದಿರುವ ಯೋಜನೆ ಅಲ್ಲ ಎಂದು ಎಚ್‌ಡಿಕೆ ಸ್ಪಷ್ಟಪಡಿಸಿದರು.

ಕಾಲಮಿತಿಯಲ್ಲಿ ಉಪನಗರ ರೈಲು ಯೋಜನೆ ಮುಗಿಸಲು ನಾನು ಸಂಪುಟದ ಒಪ್ಪಿಗೆ ತೆಗೆದುಕೊಂಡಿದ್ದೆ. ಅದಕ್ಕೆ ಕೇಂದ್ರ ಸರಕಾರ 19 ಷರತ್ತುಗಳನ್ನು ವಿಧಿಸಿತ್ತು. ಆ ಷರತ್ತುಗಳನ್ನು ನನ್ನ ಸರಕಾರ ಪೂರೈಸಿತ್ತು. ಆದರೆ, ಈಗ ಚುನಾವಣೆ ಬರುತ್ತಿದೆ ಎನ್ನುವ ಕಾರಣಕ್ಕೆ ಬಂದು ಯೋಜನೆಗೆ ಚಾಲನೆ ಕೊಟ್ಟಿದ್ದು ಕೇವಲ ಚುನಾವಣೆ ಗಿಮಿಕ್ ಅಷ್ಟೇ. ಎಲ್ಲಾ ಸತ್ಯಗಳನ್ನು ಜನರ ಮುಂದೆ ಇಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಮೋದಿ ಮುಂದಿಟ್ಟುಕೊಂಡು ರಾಜಕಾರಣ

ಮೋದಿ ಮುಂದಿಟ್ಟುಕೊಂಡು ರಾಜಕಾರಣ

ಪ್ರಧಾನಮಂತ್ರಿಗಳು ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾದಾಗ ಬರಲಿಲ್ಲ, ಯಾವುದೇ ಸಂಕಷ್ಟದ ಸಮಯದಲ್ಲೂ ಮೋದಿ ಬರಲಿಲ್ಲ. ಪ್ರತಿಯೊಂದು ವಿಷಯದಲ್ಲೂ ರಾಜ್ಯದ ಬಗ್ಗೆ ಮೋದಿ ಅವರು ಮಲತಾಯಿ ಧೋರಣೆ ನೀತಿ ಅನುಸರಿಸಿದರು. ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಗೆ ಜನರ ಮುಂದೆ ಹೋಗಲು ಮುಖ ಇಲ್ಲ. ಹಾಗಾಗಿ ಮೋದಿಯವರನ್ನು ಮುಂದೆ ಇಟ್ಟುಕೊಂಡ ಹೋಗುತ್ತಿದ್ದಾರೆ. ಇದು ಮೊದಲ ಕಾರ್ಯಕ್ರಮ ಎಂದು ಕುಮಾರಸ್ವಾಮಿ ವ್ಯಂಗ್ಯಮಾಡಿದರು.

ಬೆಂಗಳೂರಿನ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ

ಬೆಂಗಳೂರಿನ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ

ನಲವತ್ತು ತಿಂಗಳಲ್ಲಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿರುವ ಇವರು, ಬಜೆಟ್ ನಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರ ಮೀಸಲಿಟ್ಟ ಹಣದ ಮೊತ್ತ ಕೇವಲ ಒಂದು ಸಾವಿರ ಕೋಟಿ ರೂಪಾಯಿ ಮಾತ್ರ. ಆಗ ಅರುಣ್ ಜೇಟ್ಲಿ ಅವರು ಕೇಂದ್ರ ವಿತ್ತ ಸಚಿವರಾಗಿದ್ದರು. ಸುಮಾರು 15000 ಕೋಟಿ ರೂಪಾಯಿ ಯೋಜನೆಯಾದ ಇದಕ್ಕೆ ಈಗ 415 ಕೋಟಿ ರೂಪಾಯಿ ಇಟ್ಟಿದ್ದಾರೆ. ಬೆಂಗಳೂರು ನಗರದಿಂದ ಜಿಎಸ್ ಟಿ, ತೈಲ ಮತ್ತಿತರೆ ತೆರಿಗೆಗಳ ಮೂಲ ಅಪಾರ ಹಣಕಾಸು ಸಂಪನ್ಮೂಲವನ್ನು ಕೇಂದ್ರ ಸರಕಾರ ಸಂಗ್ರಹ ಮಾಡುತ್ತಿದೆ. ಆದರೆ, ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಮೋದಿ ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ. ನಮ್ಮ ತೆರಿಗೆ ಹಣವನ್ನು ಪಡೆದು ಕೇಂದ್ರವು ನಮಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ದೂರಿದರು.

ಮಹಾರಾಷ್ಟ್ರದಲ್ಲಿ ಈಗ ಶುರುವಾಗಿದೆ:

ಮಹಾರಾಷ್ಟ್ರದಲ್ಲಿ ಈಗ ಶುರುವಾಗಿದೆ:

ಕರ್ನಾಟಕದಲ್ಲಿ ಹುಟ್ಟುಹಾಕಿದ ಆಪರೇಶನ್ ಕಮಲ ಎಂಬ ಅನೈತಿಕ ಮತ್ತು ಅನಿಷ್ಠ ರಾಜಕಾರಣವನ್ನು ಬಿಜೆಪಿ ರಾಷ್ಟ್ರೀಕರಣ ಮಾಡಿ, ಇಡೀ ದೇಶಕ್ಕೆ ಅನ್ವಯವಾಗುವಂತೆ ಮಾಡುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಈಗಾಗಲೇ ಹಲವಾರು ರಾಜ್ಯಗಳಲ್ಲಿ ಆಪರೇಶನ್ ಕಮಲದ ಮೂಲಕ ಬಿಜೆಪಿ ಅಕ್ರಮವಾಗಿ ಅಧಿಕಾರಕ್ಕೆ ಬಂದಿದೆ. ಮಧ್ಯಪ್ರದೇಶದಲ್ಲಿಯೂ ಇಂಥದ್ದೇ ಅಡ್ಡದಾರಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ರಾಜಸ್ತಾನದಲ್ಲಿಯೂ ಇದು ಆಗಬೇಕಿತ್ತು, ಆದರೆ ಆಗಲಿಲ್ಲ. ಮಹಾರಾಷ್ಟ್ರದಲ್ಲಿ ಈಗ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+