ಸಚಿವ ಸ್ಥಾನಕ್ಕೆ ಅಬಕಾರಿ ಸಚಿವ ನಾಗೇಶ್ ರಾಜೀನಾಮೆ ನಿಶ್ಚಿತ?
ಬೆಂಗಳೂರು, ಜ. 13: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಎಚ್. ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡುವುದು ಖಚಿತವಾಗಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸಿಎಂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ತಾವು ರಾಜೀನಾಮೆ ಕೊಡುವ ವಿಚಾರವನ್ನು ನಾಗೇಶ್ ಅವರು ಕೂಡ ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ ಎಂಬ ಮಾಹಿತಿಯಿದೆ.
ಇಂದು ಬೆಳಗ್ಗೆ ಮತ್ತೊಮ್ಮೆ ಸಿಎಂ ಯಡಿಯೂರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಾಗೇಶ್ ಅವರಿಗೆ ಸೂಚಿಸುವ ಸಾಧ್ಯತೆಯಿದೆ. ಸಚಿವ ನಾಗೇಶ್ ಅವರಿಗೆ ಮುಂದೆ ಮತ್ತೊಮ್ಮೆ ಅವಕಾಶ ನೀಡುವ ಭರವಸೆಯನ್ನು ಯಡಿಯೂರಪ್ಪ ಕೊಟ್ಟಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ನಾಗೇಶ್ ಅವರು ರಾಜೀನಾಮೆ ಕೊಡಲು ನಿರಾಕರಿಸಿದಲ್ಲಿ ಸಚಿವ ಸ್ಥಾನದಿಂದ ವಜಾ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುವ ಸಾಧ್ಯತೆಯೂ ಕೂಡ ಇದೆ ಎಂದು ಹೇಳಲಾಗುತ್ತಿದೆ.
ಇಲ್ಲಿದೆ ಪ್ರಮಾಣವಚನ ಸ್ವೀಕರಿಸುವವರ ಅಂತಿಮ ಪಟ್ಟಿ, ಮುನಿರತ್ನ ಬಗ್ಗೆ ಇನ್ನೂ ತೀರ್ಮಾನವಿಲ್ಲ?
ನಾಗೇಶ್ ಅವರ ರಾಜೀನಾಮೆ ಪಡೆಯುವಂತೆ ಬಿಜೆಪಿ ಹೈಕಮಾಂಡ್ ನಿರ್ದೇಶನ ನೀಡಿದೆ. ಹೀಗಾಗಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಅವರು ತಯಾರಿಲ್ಲ. ಇದೇ ಹಿನ್ನೆಲೆಯಲ್ಲಿ ನಾಗೇಶ್ ರಾಜೀನಾಮೆ ಪಡೆಯಲು ಸಿಎಂ ಯಡಿಯೂರಪ್ಪ ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.