ಕೆಎಸ್ಆರ್ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಸೆ. 03: ರಾಜ್ಯ ರಸ್ತೆ ಸಾರಿಗೆ ನಿಗಮ ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ ಎಂಬ ಆಪಾದನೆಗಳಿವೆ. ಸಾರಿಗೆ ನಿಗಮವನ್ನು ನಷ್ಟದಿಂದ ಲಾಭದತ್ತ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮ ಸಾಕಷ್ಟು ಸೇವೆ ಒದಗಿಸುತ್ತದೆ. ಜೊತೆಗೆ ಖಾಸಗಿ ಸಾರಿಗೆ ಸಂಸ್ಥೆಗಳಿಗಿಂತ ಹೆಚ್ಚಿನ ಜನರು ಸರ್ಕಾರಿ ಸಾರಿಗೆಯಲ್ಲಿಯೇ ಸಂಚಾರ ಮಾಡುತ್ತಾರೆ. ಆದರೂ ಸಾರಿಗೆ ನಿಗಮವು ಯಾಕೆ ನಷ್ಟದಲ್ಲಿರುತ್ತದೆ ಎಂಬುದು ಪ್ರಯಾಣಿಕರು ಹಾಗೂ ಸಾರ್ವಜನಿಕರ ಪ್ರಶ್ನೆ.
ಇದೀಗ ಸಾರ್ವಜನಿಕರ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಥಾಪನೆಯಾಗಿ 60 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
"ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಜೊತೆಗೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿಯನ್ನೂ ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟಿದ್ದಾರೆ.
ಸಾರಿಗೆ ನಿಗಮದ ಪುನಃಶ್ಚೇತನಕ್ಕೆ ಕ್ರಮ!
ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು. ಕೆ.ಎಸ್.ಆರ್.ಟಿ.ಸಿ. ಗೆ ತನ್ನದೇ ಅಂತರ್ಗತವಾದ ಶಕ್ತಿ ಇದೆ; ವಿಸ್ತಾರವಿದೆ; ಜಾಲವಿದೆ. ಇವುಗಳನ್ನು ಹೆಚ್ಚಿಸುವುದು ಹೇಗೆ ಎಂಬ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.
ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ!
ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನಿಗಮವನ್ನು ಲಾಭದತ್ತ ಒಯ್ಯಲು ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆ ಅಗತ್ಯವಿದೆ. ಜೊತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ. ಅದರೊಂದಿಗೆ ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ಹೇಳುವ ಮೂಲಕ ಸಿಎಂ ಬೊಮ್ಮಾಯಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ಕೆ.ಎಸ್.ಆರ್.ಟಿ.ಸಿ.ಯೊಂದಿಗೆ ಜನತೆ ಭಾವನಾತ್ಮಕ ಬಾಂಧವ್ಯ ಬೆಸೆದಿದ್ದಾರೆ. ಬಸ್ ಎಂದರೆ ಹಲವು ಅರ್ಥಗಳನ್ನು ಧ್ವನಿಸುತ್ತದೆ- ಪ್ರಯಾಣ, ಜೀವನದ ಪ್ರಯಾಣ, ಎಲ್ಲರಿಗೂ ಸ್ಥಳಾವಕಾಶ ಒದಗಿಸುವ ಸಮಾನತೆಯ ಪರಿಕಲ್ಪನೆ, ನಿರಂತರ ಚಾಲನಾ ಶಕ್ತಿ ಮೊದಲಾದ ವಿಚಾರಗಳು ನಮ್ಮಲ್ಲಿ ಸುಳಿಯುತ್ತದೆ. ಸರ್ಕಾರದಲ್ಲಿ ನಿರಂತರ ಚಲನಶೀಲತೆ ಹೊಂದಿರುವ ಇಲಾಖೆ ಸಾರಿಗೆ ಇಲಾಖೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.
ಹೊಸ ಬಸ್ ಖರೀದಿ ಪ್ರಕಟಿಸಿದ ಸಿಎಂ ಬೊಮ್ಮಾಯಿ
ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯಕ್ರಮದಲ್ಲಿ ತಿಳಿಸಿದರು. ಜೊತೆಗೆ ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ ಹೊಂದಿಕೊಳ್ಳುವ ಜೊತೆಗೆ ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆ.ಎಸ್.ಆರ್.ಟಿ.ಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು.
Recommended Video
60 ಚಾಲಕರಿಗೆ ಚಿನ್ನದ ಪದಕ ನೀಡಿ ಗೌರವ
ಕಾರ್ಯಕ್ರಮದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಜೊತೆಗೆ ನೌಕರರು ಮತ್ತು ಕುಟುಂಬದವರ ಅನುಕೂಲಕ್ಕಾಗಿ ಇನ್ಫೋಸಿಸ್ ಸಹಯೋಗದೊಂದಿಗೆ ಡಿಜಿಟಲ್ ಲರ್ನಿಂಗ್ ಕಾರ್ಯಕ್ರಮ ಹಾಗೂ ಆನ್ಲೈನ್ ನಲ್ಲಿ ನೌಕರರ ಕುಂದುಕೊರತೆ ನಿವಾರಣಾ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಸಚಿವರಾದ ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ್, ಆನಂದ್ ಸಿಂಗ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕದ ಛೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮತ್ತಿತರರು ಉಪಸ್ಥಿತರಿದ್ದರು.