ಕರ್ನಾಟಕದಲ್ಲಿ ಮರುಸೋಂಕಿನ ಪ್ರಕರಣಗಳ ಬಗ್ಗೆ ಎಚ್ಚರಿಕೆ ಗಂಟೆ ಬಾರಿಸಿದ ತಜ್ಞರು
ಬೆಂಗಳೂರು, ಸೆಪ್ಟೆಂಬರ್ 10: ಅಕ್ಟೋಬರ್- ನವೆಂಬರ್ ತಿಂಗಳಿನಲ್ಲಿ ಹಬ್ಬಗಳು ಬರುತ್ತಿದ್ದು, ಕೊರೊನಾ ಮರು ಸೋಂಕಿನ ಪ್ರಕರಣಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರು ಕರೆ ನೀಡಿದ್ದಾರೆ.
Recommended Video
ಜನರನ್ನು ಸೋಂಕಿನಿಂದ ರಕ್ಷಿಸಲು ವರ್ಷಾಂತ್ಯದಲ್ಲಿ ಕೊರೊನಾ ಲಸಿಕೆಯ ಮೂರನೇ ಡೋಸ್ ನೀಡುವ ಕುರಿತು ಸರ್ಕಾರ ಆಲೋಚನೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.
ಈ ವರ್ಷದ ಬೇಸಿಗೆಯಲ್ಲಿ, ಕೊರೊನಾ ಎರಡನೇ ಅಲೆ ಸಂದರ್ಭ ಸೋಂಕಿಗೆ ತುತ್ತಾದವರಲ್ಲಿ ಆರು ತಿಂಗಳ ನಂತರ ದೇಹದಲ್ಲಿನ ಪ್ರತಿಕಾಯಗಳು ಕ್ಷೀಣಿಸುವುದರಿಂದ ಮರು ಸೋಂಕಿಗೆ ಒಳಗಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಪ್ರಪಂಚದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಡೆಲ್ಟಾ ರೂಪಾಂತರದಿಂದಾಗಿ ಸೋಂಕು ವೇಗಗತಿಯಲ್ಲಿ ಹರಡುತ್ತಿದೆ. ಈ ಉಲ್ಬಣ ಭಾರತದಲ್ಲಿ ಕೊರೊನಾ ಮೂರನೇ ಅಲೆ ಸೃಷ್ಟಿಗೆ ಕಾರಣವಾಗಲಿದ್ದು, ಮಕ್ಕಳು ಈ ಬಾರಿ ಸೋಂಕಿಗೆ ತುತ್ತಾಗುವ ಅಪಾಯ ಹೆಚ್ಚಿದೆ ಎಂದು ತಜ್ಞರು ಈ ಮುನ್ನವೇ ಎಚ್ಚರಿಸಿದ್ದಾರೆ.
'ನವೆಂಬರ್ ತಿಂಗಳವರೆಗೂ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮರು ಸೋಂಕಿನ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ' ಎಂದು ರಾಜ್ಯ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್ ಹೇಳಿದ್ದಾರೆ. ಜನರಿಗೆ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಮನದಟ್ಟು ಮಾಡಿ, ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು' ಎಂದು ಅವರು ತಿಳಿಸಿದ್ದಾರೆ.
ಎರಡನೇ ಅಲೆಯಲ್ಲಿ ಸೋಂಕಿಗೆ ತುತ್ತಾದ ಜನಸಂಖ್ಯೆಯ ಬಹುಪಾಲು ಭಾಗ ಮರುಸೋಂಕಿಗೆ ಒಳಗಾಗುವ ಸಾಧ್ಯತೆಯಿರುವುದರಿಂದ ಮುಂಬರುವ ತಿಂಗಳು ಹೆಚ್ಚು ನಿರ್ಣಾಯಕ ಎಂದು ತಿಳಿಸಿದ್ದಾರೆ. ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಸುಮಾರು 16 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಅರ್ಧದಷ್ಟು ಜನರು ಬೆಂಗಳೂರಿನವರಾಗಿದ್ದಾರೆ ಎಂದು ಹೇಳಿದ್ದಾರೆ.

ನವೆಂಬರ್ ವೇಳೆಗೆ ಕೊರೊನಾ ಸಾಂಕ್ರಾಮಿಕದ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ. ಅಲ್ಲಿಯವರೆಗೂ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
ಹಬ್ಬದ ಸಮಯದಲ್ಲಿ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಬೆನ್ನಲ್ಲೇ ತಜ್ಞರು ಈ ಎಚ್ಚರಿಕೆ ರವಾನಿಸಿದ್ದಾರೆ. ಈ ತಿಂಗಳಾಂತ್ಯದವರೆಗೂ ರಾತ್ರಿ ಕರ್ಫ್ಯೂ ನಿರ್ಬಂಧವನ್ನು ಸಿಎಂ ಬಸವರಾಜ ಬೊಮ್ಮಾಯಿ ವಿಸ್ತರಿಸಿದ್ದಾರೆ.
ಕೊರೊನಾ ಮೂರನೇ ಅಲೆ ಎರಡನೇ ಅಲೆಯಷ್ಟು ಮಾರಕವಾಗಿರುವುದಿಲ್ಲ. ಗಮನಾರ್ಹ ಸಂಖ್ಯೆಯ ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ. ಮರುಸೋಂಕಿನ ಪ್ರಕರಣಗಳು ಬಹುತೇಕ ಗಂಭೀರವಾಗಿರುವುದಿಲ್ಲ ಎಂಬ ಸಮಾಧಾನ ಸಂಗತಿಯನ್ನೂ ತಜ್ಞರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಸ್ಥಿತಿಗತಿ:
ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಗುರುವಾರ ಐದಕ್ಕಿಂತ ಕಡಿಮೆ ಸಾವಿನ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.63ರಷ್ಟಿದ್ದು, ಸಾವಿನ ಸಂಖ್ಯೆ ಶೇ 0.37ರಷ್ಟಿದೆ.
ಗುರುವಾರ ರಾಜ್ಯದಲ್ಲಿ 1074 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1136 ಸೋಂಕಿತರು ಗುಣಮುಖರಾಗಿದ್ದಾರೆ. 4 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೂ 37462 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2959164ಕ್ಕೆ ಏರಿಕೆಯಾಗಿದೆ. ಒಟ್ಟು 2904683 ಸೋಂಕಿತರು ಗುಣಮುಖರಾಗಿದ್ದು. 16992 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications