‘ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!’
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮಧ್ಯೆ ತಿಕ್ಕಾಟ ತಾರಕಕ್ಕೇರಿದ್ದು ಫುಲ್ ಫೈಟಿಂಗ್ ಶುರುವಾಗಿದೆ. ಅದರಲ್ಲೂ ಎಚ್.ಡಿ.ಕುಮಾರಸ್ವಾಮಿ ಅವರ ಜೆ ಪಿ ನಗರದ ಮನೆಗೆ, ದೀಪಾವಳಿ ಹಬ್ಬಕ್ಕಾಗಿ ದೀಪಾಲಂಕಾರಕ್ಕೆ ನೇರ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪವನ್ನೇ ಅಸ್ತ್ರ ಮಾಡಿಕೊಂಡು 'ಕೈ' ಪಾಳಯ ಈಗ ಹೊಸ ಬಾಂಬ್ ಇಟ್ಟಿದೆ. ಹಾಗಾದರೆ ಕುಮಾರಸ್ವಾಮಿ ಅವರ ಬಗ್ಗೆ ಕರ್ನಾಟಕ ಕಾಂಗ್ರೆಸ್ ಹೇಳಿದ್ದೇನು?
ಪದೇ ಪದೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಆರೋಪ ಮಾಡಿ ಬಡವರ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿವೆ ಅನ್ನೋದು ಕಾಂಗ್ರೆಸ್ ಆರೋಪ. ಹೀಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧವೂ ಕಾಂಗ್ರೆಸ್ ಈ ವಿಚಾರದಲ್ಲಿ ವಾಗ್ದಾಳಿ ನಡೆಸುತ್ತಿತ್ತು. ಇದೀಗ ಕರ್ನಾಟಕದ 'ಕೈ' ಪಾಳಯಕ್ಕೆ ಗಟ್ಟಿಯಾದ ಅಸ್ತ್ರ ಸಿಕ್ಕಂತಾಗಿದ್ದು, ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ 'ವಿದ್ಯುತ್ ಕಳ್ಳತನ' ಆರೋಪ ಹೊರಿಸಿಬಿಟ್ಟಿದೆ ಕರ್ನಾಟಕ ಕಾಂಗ್ರೆಸ್. ಹಾಗಾದ್ರೆ ಅಸಲಿಗೆ ಎಚ್.ಡಿ.ಕುಮಾರಸ್ವಾಮಿ ಅವ್ರ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?

'ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ...'
ಅಂದಹಾಗೆ ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ' ಎಂದು ಕಾಲೆಳೆದಿದೆ ಕಾಂಗ್ರೆಸ್.
ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.
— Karnataka Congress (@INCKarnataka) November 14, 2023
ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… pic.twitter.com/7GKHeRyQuS
'ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆ...'
ತನ್ನ ಸರಣಿ ಟ್ಟೀಟ್ನಲ್ಲಿ ಆರೋಪ ಮುಂದುವರಿಸಿರುವ ಕಾಂಗ್ರೆಸ್, 'ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು "ಬರ" ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ "ಕರ್ನಾಟಕ ಕತ್ತಲಲ್ಲಿದೆ" ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?!' ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದೆ ಕಾಂಗ್ರೆಸ್.

'ರಾಜ್ಯದ ಜನರ "ದಿವಾಳಿ"ಯನ್ನು ಬಯಸುತ್ತಿದ್ದೀರಾ?'
ಇದರ ಜೊತೆಗೆ ಇನ್ನೋಂದು ಗಂಭೀರ ಆರೋಪ ಮಾಡಿರುವ ಎಚ್ಡಿಕೆ, 'ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ "ದಿವಾಳಿ"ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?' ಎಂದು ಕುಹಕದ ಪ್ರಶ್ನೆ ಕೇಳುವ ಮೂಲಕ ಸಂಚಲನ ಸೃಷ್ಟಿಸಿದೆ ಕಾಂಗ್ರೆಸ್.
ಒಟ್ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಗಳ ಜೋರಾಗಿರುವ ಸಮಯದಲ್ಲೇ, ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧವೂ ಕಾಂಗ್ರೆಸ್ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಮೊದಲೇ ಕರ್ನಾಟಕದಲ್ಲಿ ತಿಕ್ಕಾಟ ಜೋರಾಗಿದೆ. ಇನ್ನು ಇದೀಗ ಕರ್ನಾಟಕ ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications