‘ಸಂಸದ ತೇಜಸ್ವಿ ಸೂರ್ಯಗೆ ಮಾನ, ಮರ್ಯಾದಿ ಇದ್ದರೆ..’ ಸಿದ್ದರಾಮಯ್ಯ ಫುಲ್ ಗರಂ!
ಸಿಎಂ ಸಿದ್ದರಾಮಯ್ಯ ಇಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೆಂಡಾಮಂಡಲರಾಗಿ, ಆಕ್ರೋಶ ಹೊರಹಾಕಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಸುಳ್ಳು ಮಾತನಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ದಿವಂಗತ ಕ್ಯಾಪ್ಟನ್ ಪ್ರಾಂಜಲ್ ಪರಿಹಾರದ ಬಗ್ಗೆ, ಕೆಲ ದಿನದಿಂದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿರುದ್ಧ ಮಾತನಾಡುತ್ತಿದ್ದ ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಅದರಲ್ಲೂ ತೇಜಸ್ವಿ ಸೂರ್ಯಗೆ ಸಿದ್ದು ಗುದ್ದು ಕೊಟ್ಟಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ಇಂದು ಸಂಸದ ತೇಜಸ್ವಿ ಸೂರ್ಯ ಬಗ್ಗೆ ಹೇಳಿಕೆ ನೀಡಿದ್ದು 'ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆ ತುಂಡರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ಗಮನಕ್ಕೆ ಬಂತು.

ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿ ಇರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನಿಡಲು ಬದ್ಧವಾಗಿರುವುದನ್ನ ತಿಳಿಸಿದ್ದೇನೆ' ಎಂದಿದ್ದಾರೆ ಸಿಎಂ. ಹಾಗೇ ಇನ್ನೂ ಮಹತ್ವದ ಮಾಹಿತಿ ತಿಳಿಸಿದ್ದಾರೆ ಸಿದ್ದರಾಮಯ್ಯ.
1 ಕೋಟಿ ರೂಪಾಯಿ ಪರಿಹಾರಕ್ಕೂ...
'ಪರಿಹಾರ ನಿಡಲು ಬದ್ಧವಾಗಿ ಇರುವುದನ್ನ ತಿಳಿಸಿದ್ದು ಮಾತ್ರವಲ್ಲ ಬೇರೆ ಯಾವುದೇ ರಾಜ್ಯ ಹುತಾತ್ಮ ಯೋಧರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದ್ರೆ ಅಷ್ಟೇ ಮೊತ್ತ ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್ ಅನ್ನು ಹುತಾತ್ಮ ಪ್ರಾಂಜಲ್ರ ಕುಟುಂಬಕ್ಕೆ ನೀಡಿದ್ದಾರೆ' ಎಂದು ಹೇಳಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು. ಈ ಮೂಲಕ ತಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಲೀಡರ್ಸ್ ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಗರಂ ಆಗಿದ್ದರು.
'ಸ್ವಲ್ಪ ಮಾನ, ಮರ್ಯಾದೆ ಇದ್ದರೆ'
ಇಷ್ಟೇ ಅಲ್ಲದೆ ತಮ್ಮ ಹೇಳಿಕೆಯನ್ನ ಮುಂದುವರಿಸಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಯನ್ನ ಕೂಡ ನೀಡಿದ್ದು, 'ಪತ್ರಕರ್ತರ ಮುಂದೆ ನಾನು ನೀಡಿದ ಹೇಳಿಕೆ ಪೂರ್ಣ ವಿಡಿಯೋ ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ವಿಡಿಯೋ ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ & ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ - ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ.' ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ
ಹಾಗೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡುತ್ತಾ, 'ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ.' ಎಂದಿದ್ದಾರೆ.
'ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ'
ಹಾಗೇ 'ಆದರೆ ಈ @BJP4Karnataka ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ.' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟುದಿನ ಬಿಜೆಪಿ ನಾಯಕರು ಮಾಡಿದ್ದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದು, ಸವಾಲು ಕೂಡ ಹಾಕಿದ್ದಾರೆ.












Click it and Unblock the Notifications