ಫೇಸ್ಬುಕ್ ಹ್ಯಾಕ್ ಮಾಡಿ ಅವಹೇಳನಕಾರಿ ಪೋಸ್ಟ್ ಹಿಂದೆ ದೊಡ್ಡ ಜಾಲ?
ಬೆಂಗಳೂರು, ಜೂನ್ 28: ಇತ್ತೀಚಿನ ದಿನಗಳಲ್ಲಿ ಫೇಸ್ಬುಕ್ ಖಾತೆಗಳು ಹ್ಯಾಕ್ ಮಾಡುವುದು ಅದರಿಂದ ಹಣ ಕೇಳುವುದು, ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುವುದು ಹೆಚ್ಚುತ್ತಲೇ ಇದೆ. ಅದರ ಹಿಂದೆ ವ್ಯವಸ್ಥಿತ ಜಾಲವೊಂದು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಇಂಬು ನೀಡುವಂತೆ ಕರ್ನಾಟಕ ಹೈಕೋರ್ಟ್ ಕೂಡ ಅಂತಹದ್ದೊಂದು ಅನುಮಾನವನ್ನು ವ್ಯಕ್ತಪಡಿಸಿದೆ.
ಫೇಸ್ಬುಕ್ ಖಾತೆಗಳನ್ನು ಹ್ಯಾಕ್ ಮಾಡಿ ಅವಹೇಳನಕಾರಿ ಮತ್ತು ನಿಂದನಾತ್ಮಕ ಬರಹಗಳನ್ನು ಬಿತ್ತರಿಸುವ ಪ್ರಕರಣಗಳ ಹಿಂದೆ ದೊಡ್ಡ ಜಾಲವೇ ಕೆಲಸ ಮಾಡುತ್ತಿರುವಂತಿದೆ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಧರ್ಮನಿಂದನೆ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮಂಗಳೂರಿನ ನಿವಾಸಿ ಜನಾರ್ದನ ಸಾಲಿಯಾನ ಶೈಲೇಶ್ ಕುಮಾರ್ ಪ್ರಕರಣಕ್ಕೆ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈತನಕ ಕೈಗೊಂಡಿರುವ ಕ್ರಮಗಳ ಕುರಿತಂತೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.

ಅಲ್ಲದೆ, ನಕಲಿ ಫೇಸ್ಬುಕ್ ಖಾತೆ ತೆರೆದು ಅಭಿಪ್ರಾಯ, ಟೀಕೆ-ಟಿಪ್ಪಣಿ ಬಿತ್ತರಿಸುವಂತಹ ಆರೋಪಗಳ ಬಗ್ಗೆ ಸೈಬರ್ ಪೊಲೀಸರು ಹೆಚ್ಚಿನ ನಿಗಾ ವಹಿಸಿ ಅಪರಾಧಿಗಳನ್ನು ಪತ್ತೆ ಹಚ್ಚಬೇಕು ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತು. ಮಂಗಳೂರಿನ ಬಿಕರ್ನಕಟ್ಟೆ ನಿವಾಸಿಯಾದ ಜನಾರ್ದನ ಸಾಲಿಯಾನ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠವು ಮಂಗಳವಾರ ವಿಚಾರಣೆ ನಡೆಸಿತು.
'ಕೇವಲ ಪತ್ರ ವ್ಯವಹಾರ ನಡೆಸಿದರೆ ಸಾಲದು. ನಮ್ಮ ಪೊಲೀಸರು ಸ್ಕಾಟ್ಲೆಂಡ್ ಮತ್ತು ಮೊಸಾದ್ ಪೊಲೀಸರ ಚಾಣಾಕ್ಷಣತೆ ಹಾಗೂ ಕೌಶಲವನ್ನು ಪ್ರದರ್ಶಿಸಬೇಕು. ಇದು ವಿದೇಶಿ ನೆಲದಲ್ಲಿ ಭಾರತೀಯ ಪ್ರಜೆಯೊಬ್ಬರ ಜೀವ ಅಪಾಯದಲ್ಲಿದೆ ಎಂಬುದಕ್ಕೆ ಉದಾಹರಣೆ. ಹೀಗಾದರೆ ನಾಳೆ ವಿದೇಶಗಳಲ್ಲಿ ಇರುವ ಭಾರತೀಯರ ಪರಿಸ್ಥಿತಿಯೇನು?' ಎಂದು ನ್ಯಾಯಪೀಠ ಖಾರವಾಗಿ ಪ್ರಶ್ನಿಸಿತು.
ಜೀವಕ್ಕೆ ಅಪಾಯವಾಗಬಾರದು: ಸೌದಿ ಅರೇಬಿಯಾ ಭಾರತದ ನೆಚ್ಚಿನ ವಿದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಹೀಗಿರುವಾಗ ಮುಗ್ಧ ಪ್ರಜೆ ಜನಾರ್ದನ ಸಾಲಿಯಾನ ಪ್ರಕರಣವನ್ನು ಕುಲಭೂಷಣ ಪ್ರಕರಣದಲ್ಲಿ ಭಾರತ ತೆಗೆದುಕೊಂಡ ನಿಲುವಿನ ರೀತಿಯಲ್ಲೇ ಪರಿಗಣಿಸಿ ರಾಜತಾಂತ್ರಿಕ ವ್ಯವಹಾರ ನಡೆಯಬೇಕಿದೆ. ಇಂತಹ ಪ್ರಕರಣಗಳಲ್ಲಿ ವಿಯೆನ್ನಾ ಒಪ್ಪಂದದ ಅನುಸಾರ ನಮ್ಮ ವ್ಯವಹಾರಗಳು ಜರುಗಬೇಕು ಎಂದು ಹೇಳಿತು.
ಅಲ್ಲದೆ, ನಮ್ಮ ದೇಶದ ಪ್ರಜೆಯೊಬ್ಬ ವಿದೇಶದಲ್ಲಿ ಅಪಾಯದಲ್ಲಿ ಸಿಲುಕಿದ್ದಾನೆ ಎಂದಾಗ ರಾಜ್ಯದ ಅತ್ಯುನ್ನತ ಕೋರ್ಟ್ ಎನಿಸಿದ ಹೈಕೋರ್ಟ್ ಆ ಕುರಿತು ಕಾಳಜಿ ವಹಿಸಿದೆ ಎಂಬುದು ಅವರ ಗಮನಕ್ಕೂ ಬರಬೇಕು. ಹಾಗಾಗಿ ಜನಾರ್ದನ ಅವರ ಜೀವಕ್ಕೆ ಯಾವುದೇ ಅಪಾಯ ಎದುರಾಗದಂತೆ ನೋಡಿಕೊಳ್ಳಲು ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿ ಎಂದು ಕೇಂದ್ರಕ್ಕೆ ನಿರ್ದೇಶಿಸಿತು.
ಪ್ರಕರಣದ ಹಿನ್ನೆಲೆ: ಮಂಗಳೂರಿನ ಬಿಕರ್ನಕಟ್ಟೆಯ 45 ವರ್ಷದ ಜನಾರ್ದನ ಸಾಲಿಯಾನ ಶೈಲೇಶ್ ಕುಮಾರ್ 25 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕುಬೆರ್ ಎಂಬಲ್ಲಿ ಉದ್ಯೋಗಿಯಾಗಿದ್ದಾರೆ. ಪತ್ನಿ ಮತ್ತು ಮಕ್ಕಳು ಬಿಕರ್ನಕಟ್ಟೆಯಲ್ಲಿ ವಾಸ ಮಾಡುತ್ತಿದ್ದಾರೆ. ಶೈಲೇಶ್ 2019ರಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ (ಎನ್ಆರ್ಸಿ) ಬೆಂಬಲಿಸಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಇದರಿಂದ ಅವರಿಗೆ ಅನಾಮಿಕರಿಂದ ಬೆದರಿಕೆ ಬಂದಿತ್ತು. ಹಾಗಾಗಿ, ಅವರು ತಮ್ಮ ಫೇಸ್ಬುಕ್ ಖಾತೆಯನ್ನು ರದ್ದುಪಡಿಸಿದ್ದರು.
ಶೈಲೇಶ್ ಕುಮಾರ್ ಹೆಸರಿನಲ್ಲಿ 2020ರ ಫೆಬ್ರುವರಿಯಲ್ಲಿ ಅನಾಮಧೇಯ ವ್ಯಕ್ತಿಗಳು ನಕಲಿ ಫೇಸ್ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ, ಅವರ ಧರ್ಮದ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ತಮ್ಮ ಗಮನಕ್ಕೆ ಬಂದಕೂಡಲೇ ಶೈಲೇಶ್ ತಮ್ಮ ಸ್ನೇಹಿತರಿಗೆ ಮತ್ತು ಮಂಗಳೂರಿನ ಸಂಬಂಧಿಕರಿಗೆ ತಿಳಿಸಿದ್ದರು.
ಇದೇ ವೇಳೆ ಸೌದಿ ಪೊಲೀಸರು ಶೈಲೇಶ್ ಅವರನ್ನು ಬಂಧಿಸಿದ್ದರು. ಈ ಕುರಿತಂತೆ ಮಂಗಳೂರಿನಲ್ಲಿ ಪತ್ನಿ ಕವಿತಾ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಮೆಟಾ-ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಅಂತೆಯೇ, ನಿರಪರಾಧಿಯಾದ ನನ್ನ ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸಿ ಎಂದು ಕೋರಿ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದರು. ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.












Click it and Unblock the Notifications