ಕೋಲಾರದಿಂದ ಕಣಕ್ಕಿಳಿಯದ ಸಿದ್ದರಾಮಯ್ಯ ವದಂತಿ ಬೆನ್ನಲ್ಲೇ ಕ್ಷೇತ್ರದಲ್ಲಿ ಶುರುವಾದ ಗುಂಪುಗಾರಿಕೆ
ಕೋಲಾರ ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ. ಒಂದು ಮಾಜಿ ರೈಲ್ವೆ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಇನ್ನೊಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ.
ಕೋಲಾರ, ಮಾರ್ಚ್. 21: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಿರಲು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂಬ ವದಂರತಿ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಭುಗಿಲೆದ್ದಿದೆ.
ಪಕ್ಷದ ಮೂಲಗಳ ಪ್ರಕಾರ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರತಿಕೂಲ ಪರಿಸ್ಥಿತಿಯನ್ನು ಸಮೀಕ್ಷಾ ವರದಿ ತೋರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಹುಟ್ಟೂರು ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಚಾಮುಂಡೇಶ್ವರಿಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನುಭವಿಸಿ, ಬಾದಾಮಿಯಿಂದ 1,500 ಮತಗಳಿಂದ ಗೆದ್ದಿದ್ದರು.

ಕೋಲಾರದಲ್ಲಿ ಟಿಕೆಟ್ಗಾಗಿ ಹೆಚ್ಚಾದ ಒತ್ತಡ
ಕೋಲಾರ ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ. ಒಂದು ಮಾಜಿ ರೈಲ್ವೆ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಇನ್ನೊಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ. ಸಿದ್ದರಾಮಯ್ಯ ಅವರು ಬೇರೆ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ ನಂತರ, ಕೋಲಾರದಿಂದ ಟಿಕೆಟ್ಗಾಗಿ ಎರಡೂ ಬಣಗಳ ಅನೇಕ ಅಭ್ಯರ್ಥಿಗಳು ನಾಯಕರ ಮೇಲೆ ಒತ್ತಡ ಹಾಕಲು ಪ್ರಯತ್ನಿಸುತ್ತಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಎ.ಶ್ರೀನಿವಾಸ್, ಎಲ್.ಎ.ಮಂಜುನಾಥ್, ಬ್ಯಾಲಹಳ್ಳಿ ಗೋವಿಂದಗೌಡ, ಊರುಬಾಗಿಲು ಶ್ರೀನಿವಾಸ್, ಚಿಕರಾಯಪ್ಪ, ಕೊತ್ತೂರು ಮಂಜುನಾಥ್, ವಿ.ಆರ್.ಸುದರ್ಶನ್ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಈಗ ಸಿದ್ದರಾಮಯ್ಯ ವಾರು ಇಲ್ಲಿಂದ ಸ್ಪರ್ಧಿಸುವುದಿಲ್ಲ ಎಂಬ ಸೂಚನೆ ಬೆನ್ನಲ್ಲೆ ಟಿಕೆಟ್ ಆಕಾಂಕ್ಷಿಗಳಲ್ಲಿ ಆಸೆ ಮತ್ತೆ ಚಿಗುರಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ ಅಭ್ಯರ್ಥಿ?
ಇದನ್ನು ಗಮನಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎರಡೂ ಬಣಗಳಲ್ಲಿ ಗುರುತಿಸಿಕೊಳ್ಳುವ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ. ಶಿವಕುಮಾರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರಿಗೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ನಡುವೆ ಸಿದ್ದರಾಮಯ್ಯ ಮುಂಬರುವ ಚುನಾವಣೆಗೆ ಸುರಕ್ಷಿತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಕುರುಬ, ಮುಸ್ಲಿಂ ಹಾಗೂ ಹಿಂದುಳಿದ ವರ್ಗದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿತ್ತು. ಮೂಲಗಳ ಪ್ರಕಾರ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಆಂತರಿಕ ಸಮೀಕ್ಷೆಯ ವರದಿಯ ನಂತರ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರ ಹುಟ್ಟೂರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ವರದಿ ಪ್ರಕಾರ ಕೋಲಾರದಲ್ಲಿ ಎರಡೂ ಬಣಗಳ ಘರ್ಷಣೆಯಿಂದ ಸಿದ್ದರಾಮಯ್ಯ ಸೋಲಬಹುದು. ಆದರೆ ತಮ್ಮ ಪುತ್ರ ಹಾಗೂ ವರುಣಾ ಶಾಸಕ ಯತೀಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆ ಚಿಂತನೆ ನಡೆಸಿರುವ ಸಿದ್ದರಾಮಯ್ಯ ಅವರು ಸುರಕ್ಷಿತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ವರುಣಾದಿಂದ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಂದೆಗಾಗಿ ವರುಣಾ ಬಿಟ್ಟುಕೊಡಲು ಸಿದ್ಧ ಎಂದ ಯತೀಂದ್ರ
ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಹಿಂದೇಟು ಹಾಕಿರುವುದು ಕೋಲಾರದ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಮತ್ತೊಂದೆಡೆ, ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಕ್ಷೇತ್ರ ಸಿಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸೋಲುವ ಭಯದಲ್ಲಿ ಸಿದ್ದರಾಮಯ್ಯ ಕ್ಷೇತ್ರ ಹುಡುಕುತ್ತಿದ್ದಾರೆ. ಅವರಿಗೆ ರಾಜ್ಯದಲ್ಲಿ ಯಾವುದೇ ಕ್ಷೇತ್ರವಿಲ್ಲ. ಎಲ್ಲಿ ನಿಂತರೂ ಸೋಲುತ್ತಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಬೇರೆ ಸ್ಥಾನದಿಂದ ಸ್ಪರ್ಧಿಸುವಂತೆ ತಂದೆಗೆ ಹೈಕಮಾಂಡ್ ಸೂಚನೆ ನೀಡಿದ್ದು ನಿಜ. ಇದರ ಹಿಂದಿನ ಕಾರಣ ಏನು ಎಂಬುದು ಗೊತ್ತಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸೋಮವಾರ ಟಿ ನರಸೀಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ನಾವು ಕೋಲಾರದಲ್ಲಿ ಎರಡು ಬಾರಿ ಸಮೀಕ್ಷೆಯನ್ನೂ ನಡೆಸಿದ್ದೇವೆ, ಆದರೆ ಎರಡೂ ಸಮೀಕ್ಷೆಗಳು ಮತ್ತೊಂದು ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಗೆಲುವನ್ನು ಖಚಿತಪಡಿಸಿವೆ. ಸಿದ್ದರಾಮಯ್ಯ ಅವರು ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸುತ್ತಾರೆ. ತಂದೆಗಾಗಿ ವರುಣಾ ಬಿಟ್ಟುಕೊಡಲು ಸಿದ್ಧ, ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯಗೆ ಕ್ಷೇತ್ರ ಸಿಗದಿರುವುದು ನಿಜಕ್ಕೂ ಶೋಚನೀಯ!
ಸೋಮವಾರ ಕೋಲಾರದಲ್ಲಿ ಒಕ್ಕಲಿಗ, ದಲಿತ ಮತ್ತು ಮುಸ್ಲಿಂ ಮುಖಂಡರ ಸಭೆ ನಡೆಸಿ, ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯಿಸಲು ನಾಯಕರು ಮಾರ್ಚ್ 21 ರಂದು 10,000 ಬೆಂಬಲಿಗರೊಂದಿಗೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ.
ಇನ್ನು, "ಸಿದ್ದರಾಮಯ್ಯ ಅವರು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಸಾವಿರಾರು ಸಹಾನುಭೂತಿಗಳು ಮತ್ತು ಬೆಂಬಲಿಗರನ್ನು ಹೊಂದಿದ್ದಾರೆ. ಅವರು ಅಲ್ಲಿಂದ ಸ್ಪರ್ಧಿಸಿದರೆ ಖಂಡಿತ ಗೆಲ್ಲುತ್ತಾರೆ ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 'ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದ್ದರೂ ದೌರ್ಭಾಗ್ಯದ ನಾಯಕನಿಗೆ ಕ್ಷೇತ್ರ ಸಿಗದಿರುವುದು ನಿಜಕ್ಕೂ ಶೋಚನೀಯ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಆದರೆ ಅಂತಹ ಪರಿಸ್ಥಿತಿ ಅವರಿಗೆ ಬರಬಾರದಿತ್ತು ಎಂದು ರಾಜ್ಯ ಘಟಕದ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸೋಮವಾರ ರಾಯಚೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ರಾಜ್ಯದಲ್ಲಿ 200ಕ್ಕೂ ಹೆಚ್ಚು ಕ್ಷೇತ್ರಗಳಿದ್ದರೂ ಸಿದ್ದರಾಮಯ್ಯ ಅವರಿಗೆ ಒಂದೇ ಒಂದೂ ಕ್ಷೇತ್ರ ಸಿಗಲಿಲ್ಲ ಎಂದಿದ್ದಾರೆ.
ಆದರೆ, ಸಿದ್ದರಾಮಯ್ಯ ಅವರು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂಬ ವರದಿಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಲ್ಲಗಳೆದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ರಾಜ್ಯದ ಜನಪ್ರಿಯ ನಾಯಕರು ಮತ್ತು ಅವರು ಯಾವುದೇ ಕ್ಷೇತ್ರದಿಂದ ಗೆಲ್ಲುತ್ತಾರೆ. ಹಲವು ಕ್ಷೇತ್ರಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನಿಸುತ್ತಿದ್ದು, ಪಕ್ಷ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.












Click it and Unblock the Notifications