BPL Card: ಬಿಪಿಎಲ್ ಕಾರ್ಡ್ ಎಪಿಎಲ್ಗೆ ಬದಲಾವಣೆ, ಸಮಿತಿ ರಚಿಸಲಿದೆ ಸರ್ಕಾರ
ಬೆಂಗಳೂರು, ಸೆಪ್ಟೆಂಬರ್ 09: ಕರ್ನಾಟಕ ಸರ್ಕಾರ ಅನರ್ಹ ಬಿಪಿಎಲ್ ಕಾರ್ಡುಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಅವರ ಕಾರ್ಡ್ ಅನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗುತ್ತದೆ. ಇದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಲು ಸಹ ಸರ್ಕಾರ ಮುಂದಾಗಿದೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ಸಭೆ ನಡೆಸಿದ್ದ ಮುಖ್ಯಮಂತ್ರಿಗಳು ರಾಜ್ಯದಲ್ಲಿರುವ ಬಿಪಿಎಲ್ ಕಾರ್ಡ್ಗಳ ಸಂಖ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೇ ಹೊಸದಾಗಿ ಬಿಪಿಎಲ್ ಕಾರ್ಡ್ಗಳಿಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವು ವಿಲೇವಾರಿಯಾಗಬೇಕಿದೆ ಎಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.

ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವ ಕುರಿತು ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಕಾರ್ಡ್ ಅನ್ನು ಎಪಿಎಲ್ ಆಗಿ ಪರಿವರ್ತಿಸಲು ಸೂಚನೆ ನೀಡಿದ್ದರು. ಸದ್ಯದ ಮಾಹಿತಿಯಂತೆ ರಾಜ್ಯದಲ್ಲಿ 1.13 ಕೋಟಿ ಬಿಪಿಎಲ್ ಕಾರ್ಡ್ಗಳಿವೆ.
ಸಚಿವರ ಮಾಹಿತಿ: ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಕುರಿತು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 5 ಗ್ಯಾರಂಟಿ ಯೋಜನೆಗಳ ಪೈಕಿ 'ಅನ್ನಭಾಗ್ಯ' ಅಡಿ ಅಕ್ಕಿ ವಿತರಣೆಯನ್ನು ಮಾಡುತ್ತಿದೆ. ಸರ್ಕಾರಿ ಯೋಜನೆ ಪಡೆಯಲು ಕೆಲವು ಅನರ್ಹರು ಬಿಪಿಎಲ್ ಕಾರ್ಡ್ ಮಾಡಿಸಿದ್ದಾರೆ.
ಕೆ. ಎಚ್. ಮುನಿಯಪ್ಪ ಮಾತನಾಡಿ, "ಬಿಪಿಎಲ್ ಕಾರ್ಡ್ ಹೊಂದಿರುವವರ ಮಾನದಂಡಗಳನ್ನು ಅಳೆಯಲಾಗುತ್ತದೆ. ಇದಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪರಿಶೀಲನೆ ನಡೆಸಲು ಮುಂದಾಗಿದೆ. ಇದು ಪೂರ್ಣವಾದ ಬಳಿಕ ಎಷ್ಟು ಬಿಪಿಎಲ್ ಇದೆ, ಅದನ್ನು ಎಪಿಎಲ್ಗೆ ಪರಿವರ್ತನೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಸರ್ಕಾರ ಎಚ್ಚೆತ್ತುಕೊಂಡಿದೆ. ಈಗಾಗಲೇ ನೀತಿ ಆಯೋಗವೂ ಸಹ ಈ ಕುರಿತು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಆದ್ದರಿಂದ ಸರ್ಕಾರ ನಕಲಿ ಬಿಪಿಎಲ್ ಕಾರ್ಡ್ ಪತ್ತೆ ಮಾಡಲು ಮುಂದಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಟ್ಟದಲ್ಲಿಯೇ ಸಮಿತಿಯೊಂದನ್ನು ರಚನೆ ಮಾಡಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಮಾನದಂಡಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ. ವಿವಿಧ ಇಲಾಖೆಗಳ ಸಹಕಾರ ಪಡೆದು, ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಅರ್ಹತೆಗಳನ್ನು ಗುರುತಿಸಲಾಗುತ್ತದೆ. ಬಳಿಕ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗುತ್ತದೆ.
ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಶೇ 50ಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳಿಲ್ಲ. ಆದರೆ ಕರ್ನಾಟಕದಲ್ಲಿ ಶೇ80ರಷ್ಟು ಬಿಪಿಎಲ್ ಕಾರ್ಡ್ಗಳಿವೆ. ಸರ್ಕಾರದಿಂದ ಉಚಿತವಾಗಿ ಸಿಗುವ ಯೋಜನೆಗಳ ಫಲಾನುಭವಿಯಾಗಲು ಹಲವು ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಅನರ್ಹ ಕಾರ್ಡ್ ಗುರುತಿಸುವ ಕೆಲಸ ಆರಂಭವಾಗಲಿದೆ.
ಸದ್ಯ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಮಾನದಂಡಗಳಲ್ಲಿ ಆದಾಯ ತೆರಿಗೆ ಪಾವತಿ ಮಾಡುತ್ತಿರಬಾರದು, ವಾರ್ಷಿಕ ಆದಾಯ 1,20,000 ರೂ.ಗಳಿಗಿಂತ ಹೆಚ್ಚಿರಬಾರದು, ನಾಲ್ಕು ಚಕ್ರದ ಸ್ವಂತ ವಾಹನ ಇರಬಾರದು ಎಂಬ ಮಾನದಂಡಗಳಿವೆ. ಆದರೆ ಮಾಹಿತಿಗಳ ಪ್ರಕಾರ ಕೆಲವು ಸರ್ಕಾರಿ ನೌಕರರು ಸಹ ಬಿಪಿಎಲ್ ಹೊಂದಿದ್ದಾರೆ.












Click it and Unblock the Notifications