ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವ್ಯವಸ್ಥಿತ ಷಡ್ಯಂತ್ರ: ಕೃಷ್ಣ ಬೈರೇಗೌಡ ವಾಗ್ದಾಳಿ
ಮೈಸೂರು, ಆಗಸ್ಟ್ 08: ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವ ಎನ್ ಚಲುವರಾಯಸ್ವಾಮಿ ವಿಚಾರದಲ್ಲಿ ನಾವು ಪತ್ರ ಬರೆದಿಲ್ಲ, ಅದು ನಕಲಿ ಎಂದು ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಮೇಲೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಯುತ್ತಿದ್ದು, ಇದೊಂದು ರಾಜಕೀಯ ಆಟ. ಇದನ್ನು ರಾಜಕೀಯವಾಗಿಯೇ ಫೇಸ್ ಮಾಡುತ್ತೇವೆ ಎಂದು ಹೇಳಿದರು.

ಇನ್ನೂ ಶಾಸಕರ ಪತ್ರವನ್ನು ಸಹ ನಕಲಿ ಮಾಡಿದರು. ಅದಕ್ಕೆ ವ್ಯಾಪಕ ಪ್ರಚಾರ ಕೂಡ ಸಿಕ್ತು. ಈಗ ಅಧಿಕಾರಿಗಳಿಗೆ ತೊಂದರೆಯಾದರೆ ಅವರು ನೇರವಾಗಿ ಲೋಕಾಯುಕ್ತಗೆ ದೂರು ನೀಡಬಹುದು. ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಐಎನ್ಡಿಐಎ ಮೈತ್ರಿಕೂಟ ದಿನೇ ದಿನೇ ಪ್ರಬಲವಾಗುತ್ತಿದೆ. ರಾಹುಲ್ ಗಾಂಧಿ ವಿರುದ್ಧ ತಪ್ಪು ಕೇಸ್ಗಳನ್ನು ಹಾಕಿದರು. ಇದಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರದ ಜನಪ್ರಿಯತೆ ಕುಗ್ಗಿಸಲು ಪ್ರತಿ ನಿತ್ಯ ಒಂದಲ್ಲಾ ಒಂದು ರೀತಿ ಷಡ್ಯಂತ್ರ ನಡೆಯುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಇನ್ನೂ ಕೇಂದ್ರ ಸರ್ಕಾರದ ವಿರುದ್ದ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಕೇವಲ ಶ್ರೀಮಂತರ ಪರ ಕೆಲಸ ಮಾಡುತ್ತಿದ್ದು, ಬಡವರ ಸ್ಥಿತಿ ಕುಗ್ಗುತ್ತಿದೆ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ಪಾಠ ಕಲಿಸುತ್ತಾರೆ. ಅದಲ್ಲದೇ ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಕೊಡುವ ಜೊತೆಗೆ ಅವರ ತಲೆಯ ಮೇಲೆ ಕೂತು ಕೆಲಸ ಮಾಡಿಸುವ ನಿಟ್ಟಿನಲ್ಲಿ ನಾವು ಒತ್ತಡ ಹಾಕುತ್ತೇವೆ ಎಂದು ಹೇಳಿದರು.












Click it and Unblock the Notifications