Family Politics: ಕುಟುಂಬವಾದದಲ್ಲಿ ಮುಳುಗಿದ ಕರ್ನಾಟಕ ರಾಜಕಾರಣ: ಮೂರು ಪಕ್ಷಗಳಲ್ಲಿದ್ದಾರೆ ಫಲಾನುಭವಿಗಳು- ಯಾರು ತಿಳಿಯಿರಿ
ಬೆಂಗಳೂರು, ಏಪ್ರಿಲ್ 21: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಕಳೆದ ಚುನಾವಣೆಗಳಂತೆ ಈ ಬಾರಿಯೂ ರಾಜಕೀಯ ಪಕ್ಷಗಳು ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಹಲವು ಪ್ರಮುಖ ರಾಜಕೀಯ ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ.
ರಕ್ತವು ನೀರಿಗಿಂತ ಗಾಢವಾಗಿವೆ ಎಂಬುದನ್ನು ಕರ್ನಾಟಕ ರಾಜಕಾರಣ ಮತ್ತೊಮ್ಮೆ ಸಾಬೀತು ಮಾಡಿದೆ. ಚುನಾವಣಾ ರಾಜಕಾರಣದಿಂದ ನಿವೃತ್ತಿ ಹೊಂದಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ತಮ್ಮ ಮಗ ಬಿ ವೈ ವಿಜಯೇಂದ್ರ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪನವರ ಇನ್ನೊಬ್ಬ ಮಗ ಬಿ ವೈ ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸಂಸದರಾಗಿದ್ದಾರೆ.

ಕಾಂಗ್ರೆಸ್ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರ ಚುನಾವಣೆಯಲ್ಲಿ ತಮ್ಮ ಪುತ್ರ ಯತೀಂದ್ರ ಅವರಿಗೆ ವರುಣಾ ಕ್ಷೇತ್ರವನ್ನು ನೀಡಿದ್ದರು. ಈ ವರ್ಷ, ವರುಣಾ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನ ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ಕ್ಷೇತ್ರಕ್ಕೆ ಬೆಂಗಳೂರು ಗ್ರಾಮೀಣ ಲೋಕಸಭಾ ಸದಸ್ಯರಾದ, ಸಹೋದರ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ರಾಜ್ಯದ ಮೂರನೇ ಪ್ರಮುಖ ಪಕ್ಷವಾದ ಜೆಡಿಎಸ್, ಪ್ರಾಯೋಗಿಕವಾಗಿ ಕುಟುಂಬ ಆಧಾರಿತ ಪಕ್ಷದ ಪರಿಕಲ್ಪನೆಯನ್ನು ಸಾಕಾರಗೊಳಿಸುವತ್ತ ಮುನ್ನುಗುತ್ತಿದೆ. ಎಚ್.ಡಿ.ದೇವೇಗೌಡರು ಅಲ್ಪಾವಧಿಗೆ ದೇಶದ ಪ್ರಧಾನಿಯಾಗಿದ್ದಾಗಲೂ ರಾಜ್ಯ ರಾಜಕಾರಣದ ಮೇಲೆ ಕಣ್ಣಿಟ್ಟಿದ್ದರು. ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.

ಕುಮಾರಸ್ವಾಮಿ ಅವರು 2018ರಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡನ್ನೂ ಗೆದ್ದಿದ್ದರು. ನಂತರ ಅವರ ಪತ್ನಿ ಅನಿತಾ ಅವರು ರಾಮನಗರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
ಕುಮಾರಸ್ವಾಮಿ ಈ ಬಾರಿ ಚನ್ನಪಟ್ಟಣದಲ್ಲಿ ಕಣಕ್ಕಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಸೋತಿದ್ದ ಅವರ ಪುತ್ರ ನಿಖಿಲ್ಗೆ ರಾಮನಗರದಲ್ಲಿ ಸ್ಪರ್ಧಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ.
ಈ ವರ್ಷ ಕುಮಾರಸ್ವಾಮಿ ಅವರ ಅಣ್ಣ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರಾಜಕೀಯ ಮಹತ್ವಾಕಾಂಕ್ಷೆ ಮುಂದಿಟ್ಟಿದ್ದರು. ಅವರು ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಲು ಬಯಸಿದ್ದರು. ಆದರೆ, ಹಾಸನ ಟಿಕೆಟ್ ಅನ್ನು ಸ್ವರೂಪ್ ಅವರಿಗೆ ನೀಡಲಾಯಿತು. ರೇವಣ್ಣ ಅವರು ಪ್ರಸ್ತುತ ಹೊಳೆನರಸೀಪುರದಿಂದ ಸ್ಪರ್ಧಿಸುತ್ತಿದ್ದಾರೆ.
ರೇವಣ್ಣ ಪುತ್ರ ಪ್ರಜ್ವಲ್ ಸದ್ಯ ಜೆಡಿಎಸ್ನಿಂದ ಏಕೈಕ ಸಂಸದರಾಗಿದ್ದಾರೆ. 2019ರಲ್ಲಿ ಅವರ ಅಜ್ಜ ದೇವೇಗೌಡರು ತಮ್ಮ ಸುರಕ್ಷಿತ ಹಾಸನ ಕ್ಷೇತ್ರವನ್ನು ಪ್ರಜ್ವಲ್ಗೆ ಬಿಟ್ಟುಕೊಟ್ಟರು. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸಿ ಸೋತಿದ್ದರು. ಪ್ರಜ್ವಲ್ ಅವರ ಕಿರಿಯ ಸಹೋದರ ಸೂರಜ್ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.
ಮಾಜಿ ಕಾಂಗ್ರೆಸ್ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನ ಬಿಟಿಎಂ ಲೇಔಟ್ನಿಂದ ಗೆಲುವು ಸಾಧಿಸಿದ್ದಾರೆ. ಅವರ ಪುತ್ರಿ ಸೌಮ್ಯ ರೆಡ್ಡಿ ಅವರು ಪಕ್ಕದ ಜಯನಗರದಿಂದ ಕಣಕ್ಕಿಳಿದಿದ್ದಾರೆ. ಈ ಎರಡೂ ಕ್ಷೇತ್ರಗಳು ದಕ್ಷಿಣ ಬೆಂಗಳೂರಿನಲ್ಲಿ ಬರುತ್ತವೆ.

ಕಾಂಗ್ರೆಸ್ ನಾಯಕರಾದ ಎಂ ಕೃಷ್ಣಪ್ಪ ಮತ್ತು ಅವರ ಮಗ ಪ್ರಿಯಾಕೃಷ್ಣ ಅವರು ಈ ಭಾರಿ ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದಾರೆ. ತಂದೆ ವಿಜಯನಗರದಿಂದ ಹಾಗೂ ಪ್ರಿಯಾಕೃಷ್ಣ ಅವರು ಗೋವಿಂದರಾಜ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬದಿಂದ ಬಿಜೆಪಿ ಅಭ್ಯರ್ಥಿಯಾಗಿ ಕುಮಾರ್ ಬಂಗಾರಪ್ಪ ಸ್ಪರ್ಧಿಸಲಿದ್ದಾರೆ. ಅವರು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಕಣಕ್ಕಿಳಿಯಲಿದ್ದಾರೆ. 2018 ರಲ್ಲಿ ಮಧು ಬಂಗಾರಪ್ಪ ಕುಮಾರ್ ವಿರುದ್ಧ ನಿಂತು ಸೋಲು ಕಂಡಿದ್ದರು. ಇಬ್ಬರೂ ರಾಜ್ಯದ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರರು.
ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವಾ ಕುಮಟಾದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಮೂಲಕ ತಮ್ಮ ಕುಟುಂಬದ ಸುದೀರ್ಘ ರಾಜಕೀಯ ಸಂಪ್ರದಾಯವನ್ನು ಜೀವಂತವಾಗಿರಿಸಿಕೊಳ್ಳಲಿದ್ದಾರೆ.
ಕೊಪ್ಪಳದಲ್ಲಿ ಬಿಜೆಪಿಯ ಹಾಲಿ ಸಂಸದ ಕರಡಿ ಸಂಗಣ್ಣ ಅವರ ಸೊಸೆ ಮಂಜುಳಾ ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಅವರ ಪತ್ನಿಗೆ ಬೆಂಗಳೂರಿನ ಮಹದೇವಪುರ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಪಕ್ಷದ ಇನ್ನೊಬ್ಬ ನಾಯಕ ಆನಂದ್ ಸಿಂಗ್ ಅವರು ಪ್ರತಿನಿಧಿಸುವ ವಿಜಯನಗರದಿಂದ ಸ್ಪರ್ಧಿಸುವುದಿಲ್ಲ. ಆದರೆ, ಬಿಜೆಪಿ ಅವರ ಮಗ ಸಿದ್ಧಾರ್ಥಗೆ ಟಿಕೆಟ್ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ಆರ್ ಬೊಮ್ಮಾಯಿ ಅವರ ಪುತ್ರರೂ ಹೌದು. ಇನ್ನು ಬೆಳಗಾವಿಯಲ್ಲಿ ಜಾರಕಿಹೊಳಿ, ಕತ್ತಿ, ಹೆಬ್ಬಾಳ್ಕರ್, ಜೊಲ್ಲೆ, ಕೌಜಲಗಿ, ಮಾಮನಿ ಕುಟುಂಬಗಳ ಸದಸ್ಯರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.












Click it and Unblock the Notifications