ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಮಂಡ್ಯ, ಸೆಪ್ಟೆಂಬರ್ 13: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ಕರ್ನಾಟಕಕ್ಕೆ ಆದೇಶ ನೀಡಿದ ಕೆಲವೇ ಗಂಟೆಗಳ ಬಳಿಕ ಮಂಡ್ಯದಲ್ಲಿ ರೈತ ಸಂಘಗಳು ಸೇರಿದಂತೆ ವಿವಿಧ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿವೆ.
ತಮಿಳುನಾಡಿಗೆ ನೀರು ಬಿಡಬಾರದು ಎಂದು ರೈತರು ಮತ್ತು ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತಿವೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿರುವ ಸಿಡಬ್ಲ್ಯುಆರ್ಸಿ ಆದೇಶವನ್ನು ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ಭಿಕ್ಷೆ ಬೇಡುವ ಮೂಲಕ ವಿಶಿಷ್ಟ ಪ್ರತಿಭಟನೆ ನಡೆಸಿದರು.

ಸಿಡಬ್ಲ್ಯುಆರ್ಸಿ ಆದೇಶದ ವಿರುದ್ಧ ಇಂದು ಮಂಡ್ಯದಲ್ಲಿ ಹಾಗೂ ಶ್ರೀರಂಗಪಟ್ಟಣದ ಕೆಆರ್ಎಸ್ ಅಣೆಕಟ್ಟೆ ಬಳಿ ಹಲವು ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಏತನ್ಮಧ್ಯೆ, ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯದಲ್ಲಿ ಇಲ್ಲ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಈ ಕುರಿತು ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ತುರ್ತು ಸಭೆ ಕರೆದು ಚರ್ಚಿಸಿದ್ದಾರೆ. 124.80 ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 97.74 ಅಡಿಗೆ ಕುಸಿದಿದೆ. ಒಳಹರಿವು ಕೂಡ ಕಡಿಮೆಯಾಗಿದ್ದು, ಬುಧವಾರದ ವೇಳೆಗೆ 2,741 ರಷ್ಟಿದೆ ಎಂದು ತಿಳಿದು ಬಂದಿದೆ.
ತಮಿಳುನಾಡು ಲೋಕೋಪಯೋಗಿ ಇಲಾಖೆ ಸಚಿವ ಇವಿ ವೇಲು ಅವರು ಸಿಡಬ್ಲ್ಯುಆರ್ಸಿ ಆದೇಶಿಸಿದ 5,000 ಕ್ಯೂಸೆಕ್ ನೀರು ಸಾಕಾಗುವುದಿಲ್ಲ ಮತ್ತು ರಾಜ್ಯವು ಸುಪ್ರೀಂ ಕೋರ್ಟ್ನಲ್ಲಿ ಆದೇಶವನ್ನು ಪ್ರಶ್ನಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. 2018ರ ಆದೇಶದಂತೆ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ಕರ್ನಾಟಕಕ್ಕೆ ಮಂಗಳವಾರ ಆದೇಶ ನೀಡಿದೆ. ಸಿಡಬ್ಲ್ಯುಆರ್ಸಿ ಇದೇ ಆಗಸ್ಟ್ 28ರಂದು ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರ ಅನುಪಾಲನಾ ವರದಿ ಸಲ್ಲಿಸಿತ್ತು.
ಸಿಡಬ್ಲ್ಯುಆರ್ಸಿ ಸಭೆ ಮಂಗಳವಾರ ನಡೆದಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಎರಡೂ ಕಡೆಯ ಮಾತುಗಳನ್ನು ಆಲಿಸಿ, ನೆಲದ ಪರಿಸ್ಥಿತಿಯನ್ನು ಗಮನಿಸಿದ ಸಮಿತಿಯು ತಮಿಳುನಾಡಿಗೆ ಹೆಚ್ಚಿನ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿತು.
ಆಗಸ್ಟ್ 28 ರಂದು, ಕರ್ನಾಟಕದ ವಿರೋಧದ ನಡುವೆ, CWRC ತಮಿಳುನಾಡಿಗೆ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಆದೇಶ ನೀಡಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಿಡಬ್ಲ್ಯುಆರ್ಸಿ ಆದೇಶವನ್ನು ಎತ್ತಿ ಹಿಡಿದಿತ್ತು. ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘಗಳು ಶ್ರೀರಂಗಪಟ್ಟಣದಲ್ಲಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದವು.












Click it and Unblock the Notifications