ಸೆ.13ರಿಂದ ಅಧಿವೇಶನ; ಮೊದಲ ದಿನ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 10; ಕರ್ನಾಟಕ ವಿಧಾನಸಭೆ ಅಧಿವೇಶನ ಸೋಮವಾರ ಆರಂಭವಾಗಲಿದೆ. ಮೊದಲ ದಿನವೇ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿದ್ದಾರೆ. ಪ್ರತಿ ಜಿಲ್ಲೆಯಿಂದ ನೂರಾರು ರೈತರು ಬೆಂಗಳೂರಿಗೆ ಬರಲಿದ್ದು, ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಸೆಪ್ಟೆಂಬರ್ 13ರ ಸೋಮವಾರದಿಂದ ಸೆಪ್ಟೆಂಬರ್ 24ರ ತನಕ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ಅಪರೂಪದ ಕೆಂಪು ಬೆಂಡೆ ಬೆಳೆದ ಭೋಪಾಲದ ರೈತ; ಹುಬ್ಬೇರಿಸಲಿದೆ ಇದರ ಬೆಲೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕೃಷಿ ನೀತಿಗಳನ್ನು ಕೈ ಬಿಡಬೇಕು. ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ವಿಧಾನಸೌಧಕ್ಕೆ ರೈತ ಸಂಘದ ಸದಸ್ಯರು ಮುತ್ತಿಗೆ ಹಾಕಲಿದ್ದಾರೆ.
ಬಿಸಿಲುನಾಡಿಗೆ ಬಂತು ಶುಂಠಿ, ಲಾಭದ ನಿರೀಕ್ಷೆಯಲ್ಲಿ ರೈತ!
ರೈತ ಸಂಘದ ಗೌರವಾಧ್ಯಕ್ಷ ಎಚ್. ಆರ್. ಬಸವರಾಜಪ್ಪ ಈ ಕುರಿತು ಮಾತನಾಡಿದ್ದು, "ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡುತ್ತೇವೆ" ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 27ರಂದು ಭಾರತ್ ಬಂದ್; ಕಾಂಗ್ರೆಸ್ ಬೆಂಬಲ
"ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ವಿವಿಧ ಜಿಲ್ಲೆಗಳಿಂದ ನೂರಾರು ರೈತರು ಆಗಮಿಸಲಿದ್ದಾರೆ. ಎಲ್ಲರೂ ಒಟ್ಟಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ" ಎಂದು ಎಚ್. ಆರ್. ಬಸವರಾಜಪ್ಪ ತಿಳಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸುಪ್ರೀಂಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.
ರೈತರ ಕೃಷಿ ಉತ್ಪನ್ನಗಳಿಗೆ ಸರ್ಕಾರ ಸಮರ್ಪಕ ಬೆಲೆಯನ್ನು ನಿಗದಿ ಮಾಡಬೇಕು. ಪಂಪ್ಸೆಟ್ಗಳಿಗೆ ಉಚಿತವಾಗಿ ನೀಡುವ ವಿದ್ಯುತ್ ಸ್ಥಗಿತಗೊಳಿಸಲಿ. ಆದರೆ ರೈತರಿಗೆ ಸರಿಯಾದ ಬೆಲೆ ನೀಡದೆ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟರೆ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದರು.
ಸರ್ಕಾರ ಡಾ. ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಬೆಂಬಲ ಬೆಲೆ ನೀಡುವ ಕುರಿತು ಕಾನೂನು ಚೌಕಟ್ಟಿನಲ್ಲಿ ಖಾತ್ರಿ ಪಡಿಸಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಸರ್ಕಾರ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ ಕಾಯ್ದೆ, ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗಳನ್ನು ತಡೆಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಈ ಅಧಿವೇಶನದಲ್ಲಿಯೇ ಚರ್ಚೆ ನಡೆಯಬೇಕು ಎಂಬು ರೈತರು ಪಟ್ಟು ಹಿಡಿದಿದ್ದಾರೆ.
ಮೊದಲ ಅಧಿವೇಶನ; ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶವಿದಾಗಿದೆ. ಮುಖ್ಯಮಂತ್ರಿಗಳು ಬದಲಾವಣೆಗೊಂಡು, ಹೊಸ ಸಚಿವ ಸಂಪುಟ ರಚನೆಯಾಗಿದೆ.
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನದ ಪೂರ್ವ ಸಿದ್ಧತೆಗಳ ಕುರಿತಂತೆ ಎಲ್ಲಾ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅಧಿವೇಶನವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲಾ ತಯಾರಿಯನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ರೈತರ ಸಮಸ್ಯೆ, ರಾಜ್ಯದ ಕಾನೂನು ಸುವ್ಯವಸ್ಥೆ, ಮಳೆಯಿಂದ ಆದ ಹಾನಿ, ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿದ್ದು, ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಕುರಿತು ಶಾಸಕರ ಜೊತೆ ಚರ್ಚೆಯನ್ನು ನಡೆಸಿದ್ದಾರೆ.
Recommended Video
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಸೋಮವಾರದಿಂದ ಆರಂಭವಾಗುವ ಅಧಿವೇಶನ, ಮಂಡನೆ ಮಾಡಲಿರುವ ವಿಧೇಯಕಗಳ ಕುರಿತು ಮಾಹಿತಿಯನ್ನು ನೀಡಿದರು. ವಿಪಕ್ಷಗಳ ತಂತ್ರ, ಅದನ್ನು ಎದುರಿಸುವ ಕುರಿತು ಯಡಿಯೂರಪ್ಪ ಜೊತೆ ಚರ್ಚೆಯನ್ನು ನಡೆಸಿದರು.