ಜಾರಕಿಹೊಳಿ ಬ್ರದರ್ಸ್ ಬಂಡಾಯ ಶಮನ : ಯಾರು, ಏನು ಹೇಳಿದರು?
Recommended Video

ಬೆಂಗಳೂರು, ಸೆಪ್ಟೆಂಬರ್ 18 : ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಬಂಡಾಯ ಶಮನವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸತೀಶ್ ಜಾರಕಿಹೊಳಿ ಜೊತೆ ಸಂಧಾನ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆಳಿಗೆ ತಡೆ ಬಿದ್ದಿದೆ.
ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದ್ದು ನಿಜ. ಆದರೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ' ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಭೇಟಿ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ' ನಮ್ಮ ಬೇಡಿಕೆಯನ್ನು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇವೆ. ಹಂತ-ಹಂತವಾಗಿ ಎಲ್ಲಾ ಸಮಸ್ಯೆ ಬಗೆಹರಿಯಲಿದೆ' ಎಂದು ಹೇಳಿದರು.
ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, 'ಯಾರು ವಿಲನ್ ಎಂದು ರಾಜ್ಯದ ಜನರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದವರೇ ವಿಲನ್ ರೀತಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಂದಲೇ ಸರ್ಕಾರ ಬೀಳುತ್ತದೆ. ಬಳಿಕ ನಾವು ಸರ್ಕಾರ ರಚನೆ ಮಾಡುತ್ತೇವೆ' ಎಂದು ತಿಳಿಸಿದರು.

ಪಕ್ಷದ ಶಾಸಕರು ಶಿಸ್ತಿನ ಸಿಪಾಯಿಗಳು
ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬುದು ಮಾಧ್ಯಮಗಳ ಸೃಷ್ಟಿ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರ ಬೀಳಿಸಲು ಬಿಜೆಪಿ ಪ್ಲಾನ್ ಮಾಡಿತ್ತು ಅಂತ ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಇದಕ್ಕಿಂತ ದಾಖಲೆ ಇನ್ನೇನು ಬೇಕು. ಬಿಜೆಪಿ ಲಜ್ಜೆಗೆಟ್ಟು ಮಾನ ಮಾರ್ಯಾದೆ ಬಿಟ್ಟು ಸರ್ಕಾರ ರಚನೆ ಮಾಡುವ ಪ್ರಯತ್ನ ನಡೆಸಿದೆ' ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಎಚ್.ಡಿ.ಕುಮಾರಸ್ವಾಮಿ ಭೇಟಿ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಸರ್ಕಾರದ ಮಟ್ಟದಲ್ಲಿ ಕೆಲಸಗಳು ಆಗುತ್ತಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಬೆಳಗಾವಿ ರಾಜಕಾರಣದ ಬಗ್ಗೆ ಅಸಮಾಧಾನವಿತ್ತು ಈಗ ಎಲ್ಲಾ ಸಮಸ್ಯೆ ಬಗೆಹರಿದಿದೆ. ಬಳ್ಳಾರಿಗೆ ಒಂದು ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವೆ. ಆದರೆ, ಇದು ಇನ್ನೂ ಅಂತಿಮವಾಗಿಲ್ಲ' ಎಂದು ಹೇಳಿದರು.

ಒಬ್ಬರಿಂದ ರಾಜೀನಾಮೆ ಕೊಡಿಸಲಿ
'ಬಿಜೆಪಿ ಅವರಿಗೆ ತಾಕತ್ ಇದ್ರೆ ಒಬ್ಬ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಲಿ. ಯಾವೊಬ್ಬ ಕಾಂಗ್ರೆಸ್ ಶಾಸಕನು ಬಿಜೆಪಿಗೆ ಹೋಗಲ್ಲ. ನಾವು ಮುಂಬೈಗೂ ಹೋಗುತ್ತಿಲ್ಲ. ರಮೇಶ್ ಜಾರಕಿಹೊಳಿ ಸೇರಿದಂತೆ ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗೆ ಇದ್ದೇವೆ' ಎಂದು ಮಾಜಿ ಸಚಿವ ಪರಮೇಶ್ವರ ನಾಯ್ಕ್ ಹೇಳಿದರು.

ವಿದೇಶದಿಂದ ಆಟ ವಾಡುತ್ತಿದ್ದಾರೆ
'ಯಾರು ವಿದೇಶದಿಂದ ಆಟ ವಾಡುತ್ತಿದ್ದಾರೆ. ಯಾರು ದೇಶದಲ್ಲಿ ಇದ್ದುಕೊಂಡು ಆಟ ವಾಡುತ್ತಿದ್ದಾರೆ ಎಂಬುದು ತಿಳಿದಿದೆ. ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗಿದೆ. ಸರ್ಕಾರಕ್ಕೆ ಸಹಕಾರ ಕೊಟ್ಟವರು ಇಂದು ಅವರ ದಾರಿ ನೋಡಿಕೊಳ್ಳುತ್ತಿದ್ದಾರೆ. ಸುಮ್ಮನೆ ಕಾಂಗ್ರೆಸ್ನವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ' ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.












Click it and Unblock the Notifications