ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಿ: ಸಂಸದ ಗೋವಿಂದ ಕಾರಜೋಳ
ಬೆಂಗಳೂರು, ಆಗಸ್ಟ್ 20: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು.
ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು (ಮಂಗಳವಾರ) ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರತಿಭಟನೆ ನಡೆಸುವ ವೇಳೆ ಮಾನ್ಯ ರಾಜ್ಯಪಾಲರ ಫೋಟೊಗೆ ಚಪ್ಪಲಿಯಿಂದ ಹೊಡೆದುದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಟೀಕಿಸಿದರು. ಎಂಎಲ್ಸಿ ಐವಾನ್ ಡಿಸೋಜ ಅವರು ರಾಜ್ಯಪಾಲರಿಗೆ ಧಮ್ಕಿ ಹಾಕುವ ರೀತಿ ಮಾತನಾಡಿದ್ದಾರೆ. ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ರಾಜ್ಯಪಾಲರನ್ನು ಓಡಿಸುವುದಾಗಿ ತಿಳಿಸಿದ್ದು, ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ಬರುತ್ತಿದೆ. ಅವರ ಹೇಳಿಕೆ ಖಂಡನೀಯ ಎಂದರು.
ಸಿದ್ದರಾಮಯ್ಯನವರು ತನಿಖೆ ಎದುರಿಸಿ ಆರೋಪಮುಕ್ತರಾಗಿ ಹೊರಬರಬೇಕು. ಸಿಎಂ ಮೇಲೆ ಆರೋಪ ಬಂದಾಗ ಅವರನ್ನು ಅಪರಾಧಿ ಎನ್ನುವುದಿಲ್ಲ. ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ ಎಂದು ನುಡಿದರು. ಅದಕ್ಕಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಿತ್ತು ಎಂದರು.
ಅದನ್ನು ಬಿಟ್ಟು ಸಾಂವಿಧಾನಿಕ ಹುದ್ದೆಯಲ್ಲಿರುವ, ರಾಷ್ಟçಪತಿಗಳ ಪ್ರತಿನಿಧಿ ಎನಿಸಿದ ರಾಜ್ಯಪಾಲರನ್ನು ಅವಮಾನಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಂಸ್ಕೃತಿ ಎಂಬುದು ಇದೆಯೇ ಎಂದು ಕೇಳಿದರು. ಸಾಮಾಜಿಕ ನ್ಯಾಯದ ಗಂಧವೇ ತಿಳಿಯದವರು ಕಾಂಗ್ರೆಸ್ಸಿಗರು. ಚಪ್ಪಲಿಯಿಂದ ರಾಜ್ಯಪಾಲರ ಫೋಟೊಗೆ ಹೊಡೆದುದಲ್ಲದೆ ಅವರ ಭಾವಚಿತ್ರ ಸುಟ್ಟಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ದಲಿತ ವ್ಯಕ್ತಿ ರಾಜ್ಯಪಾಲರ ಹುದ್ದೆಯಲ್ಲಿ ಇರುವುದು ನಿಮ್ಮ ಗಮನದಲ್ಲಿಲ್ಲವೇ? ಡಾ. ಅಂಬೇಡ್ಕರರಿಗೆ ಅವಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ಸಂಸ್ಕೃತಿ ಇರಲು ಸಾಧ್ಯವೇ ಎಂದು ಕೇಳಿದರು.
ಹಿಂದೆ ತುಮಕೂರಿನ ಎಂ.ವಿ.ರಾಮರಾವ್ ಎಂಬವರು ಗೃಹ ಸಚಿವರಾಗಿದ್ದರು. ಅವರ ಜಿಲ್ಲೆಯಲ್ಲಿ ರೈತರ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಆದುದು ವಿಧಾನಸಭೆಯಲ್ಲಿ ಚರ್ಚೆಗೆ ಬಂದಿತ್ತು. ಶಾಂತವೇರಿ ಗೋಪಾಲಗೌಡರು ವಿಧಾನಸಭಾ ಸ್ಪೀಕರ್ ಆಗಿದ್ದರು. ಗೃಹ ಸಚಿವರೇ ನಿಮ್ಮ ಮಗನ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಆಗಿದ್ದರೆ ಏನು ಮಾಡುತ್ತಿದ್ದಿರಿ ಎಂದು ಸ್ಪೀಕರ್ ಕೇಳಿದ್ದು, ಎಂ.ವಿ.ರಾಮರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆದರ್ಶ ವ್ಯಕ್ತಿ ಆಗಿದ್ದರು ಎಂದು ತಿಳಿಸಿದರು.
ರಾಮಕೃಷ್ಣ ಹೆಗಡೆಯವರ ಮೇಲೆ ಟೆಲಿಫೋನ್ ಕದ್ದಾಲಿಕೆ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದರು. ಕಾಂಗ್ರೆಸ್ಸಿನವರೇ ಆದ ಲಾಲ್ ಬಹದ್ದೂರ್ ಶಾಸ್ತಿçಯವರು ರೈಲ್ವೆ ಸಚಿವರಾಗಿದ್ದಾಗ ರೈಲು ಅವಘಡ ನಡೆದಿದ್ದು, ನಿಷ್ಪಕ್ಷಪಾತ ತನಿಖೆಗಾಗಿ ರಾಜೀನಾಮೆ ನೀಡಿದ್ದರು ಎಂದು ವಿವರಿಸಿದರು.
ಎಂಎಲ್ಸಿ ಐವಾನ್ ಡಿಸೋಜ ಅವರು ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ. ರಾಜಭವನಕ್ಕೆ ನುಗ್ಗಿ ತೊಂದರೆ ಮಾಡುತ್ತೇವೆ ಎಂದಿದ್ದಾರೆ. ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ನನಗೆ ಬರುತ್ತಿದೆ ಎಂದು ತಿಳಿಸಿದರು. ಅವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟಲು ಆಗ್ರಹಿಸಿದರು. ಎಂಎಲ್ಸಿ ಸ್ಥಾನದಿಂದ ವಜಾ ಮಾಡಲು ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು.












Click it and Unblock the Notifications