ಬಾಕಿ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ
ಕರ್ನಾಟಕದಲ್ಲಿ ಒಳಮೀಸಲಾತಿ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಪರಿಶಿಷ್ಟ ಜಾತಿ/ ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದು. ಈ ಸಭೆಯಲ್ಲಿ ಹಲವು ಮಹತ್ವದ ವಿಷಯಗಳನ್ನು ಚರ್ಚೆ ಮಾಡಿದ್ದು ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಂದುವರಿದು ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
1. ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
2. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
3. ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು.
4. 2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6,635 ಪ್ರಕರಣಗಳು ದಾಖಲಾಗಿವೆ. 4912 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4,149 ಪ್ರಕರಣಗಳಲ್ಲಿ ಮಾತ್ರ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.
5. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
6. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಬೇಕು.
7. ರಾಜ್ಯದಲ್ಲಿ 33 ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.
8. ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್ಐಆರ್ ದಾಖಲಿಸಬೇಕು.
9. ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
10. ಬಾಕಿಯಿರುವ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.












Click it and Unblock the Notifications