ಖಾಲಿ ಇರುವ ಸರ್ಕಾರಿ ಪ್ರೌಢಶಾಲೆಗಳ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು, ಆಗಸ್ಟ್ 19: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರೌಡ ಶಾಲೆಗಳ 385 ಹುದ್ದೆಗಳ ( ಹಿಂದಿ ಭಾಷಾ ಶಿಕ್ಷಕರು ಸೇರಿದಂತೆ) ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು
ಶಾಲಾ ಕೊಠಡಿಗಳ ದುರಸ್ತಿ ಹಾಗೂ ಖಾಲಿ ಇರುವ ಶಾಲಾ ಶಿಕ್ಷಕರ ಭರ್ತಿ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಅವರು, 2024-25 ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿನ 13,880 ಕೊಠಡಿಗಳ ದುರಸ್ತಿಗೆ ರೂ 15129.66 ಲಕ್ಷ ಅನುದಾನ ಮಂಜೂರಾಗಿರುತ್ತದೆ. ಕೆ ಕೆ ಆರ್ ಡಿ ಬಿ ವತಿಯಿಂದ 2024-25 ನೇ ಸಾಲಿನಲ್ಲಿ ಕೊಠಡಿಗಳ ದುರಸ್ತಿ ಕಾಮಗಾರಿಗೆ 5284.74 ಲಕ್ಷ ಅನುದಾನ ಮಂಜೂರಾಗಿರುತ್ತದೆ.

ಹಾಗೆಯೇ 2022-23 ರಿಂದ 2024-25 ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿನ ಹೊಸ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾದ ಅನುದಾನ ಒಟ್ಟು 91554.83 ಲಕ್ಷವಾಗಿರುತ್ತದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಲ್ಯಾಣ ಕರ್ನಾಟಕಕ್ಕೆ 2022-23 ರಿಂದ 2024-25 ನೇ ಸಾಲಿನವರೆಗೆ 5251.78 ಲಕ್ಷ ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿರುತ್ತವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟಾರೆಯಾಗಿ 50,104 ಹುದ್ದೆಗಳು ಖಾಲಿಯಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 34027 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹಾಗೆಯೇ ಸರ್ಕಾರಿ ಪ್ರೌಢಶಾಲೆಗಳಲ್ಲಿ 11586 ಖಾಲಿ ಹುದ್ದೆಯಿದ್ದು, 9499 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಸರ್ಕಾರವು ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ಕುರಿತಂತೆ ಸ್ಪಷ್ಟ ನಿರ್ಣಯ ಕೈಗೊಂಡ ನಂತರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಹೇಳಿದರು.
ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಅಂಗೀಕಾರ
ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು 2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ)ವಿಧೇಯಕ, 2025ನೇ ಸಾಲಿನ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವರ್ಹಣೆ (ತಿದ್ದುಪಡಿ) ವಿಧೇಯಕವನ್ನು, 2025ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ)ವಿಧೇಯಕವನ್ನು, 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಿದರು. ವಿಧೇಯಕಗಳನ್ನು ಪರ್ಯಾಲೋಚಿಸಿ ಅಂಗೀಕರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು 2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ದೇವದಾಸಿ (ಪ್ರತಿಬಂಧಕ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕವನ್ನು ಮಂಡಿಸಿದರು. ವಿಧೇಯಕಗಳನ್ನು ಪರ್ಯಾಲೋಚಿಸಿ ಅಂಗೀಕರಿಸಲಾಯಿತು.












Click it and Unblock the Notifications