Government Employee: ಸರ್ಕಾರಿ ನೌಕರರ ಪ್ರಮುಖ ಬೇಡಿಕೆ, ಸರ್ಕಾರಕ್ಕೆ ಸವಾಲು ಏನು
ಬೆಂಗಳೂರು, ಜನವರಿ 24: ಕರ್ನಾಟಕದ ಸರ್ಕಾರಿ ನೌಕರರು ಪ್ರಮುಖ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು, ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡವನ್ನು ಹೇರುತ್ತಿದ್ದಾರೆ. ಈ ಕುರಿತು ಸರ್ಕಾರದ ಗಮನ ಸೆಳೆಯಲು ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲಾಗುತ್ತದೆ ಎಂದು ಈಗಾಗಲೇ ರಾಜ್ಯ ಸರ್ಕಾರಿ ನೌಕರರ ಎನ್ಪಿಎಸ್ ಸಂಘ ಘೋಷಣೆ ಮಾಡಿದೆ.
ಕರ್ನಾಟಕ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೇ ಎನ್ಪಿಎಸ್ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಲಾಗುತ್ತದೆ ಎಂದು ಭರವಸೆ ನೀಡಿತ್ತು. ಆದರೆ ಇನ್ನೂ ಭರವಸೆ ಈಡೇರಿಕೆ ಮಾಡಿಲ್ಲ. 2025-26ನೇ ಬಜೆಟ್ನಲ್ಲಿ ಈ ಕುರಿತು ಘೋಷಣೆ ಮಾಡದಿದ್ದರೆ ಹೋರಾಟ ನಡೆಸುವುದು ಅನಿವಾರ್ಯ ಎಂದು ನೌಕರರು ಹೇಳುತ್ತಿದ್ದಾರೆ.

ಸರ್ಕಾರದ ಮುಂದೆ ಸವಾಲು: 5 ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿ ಕಾರ್ಯ ರೂಪಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರ ಸರ್ಕಾರಿ ನೌಕರರಿಗೆ ನೀಡಿದ ಒಪಿಎಸ್ ಮರು ಸ್ಥಾಪನೆ ಭರವಸೆಯನ್ನು ಈಡೇರಿಸಬೇಕಿದೆ. ಇದು ಸರ್ಕಾರಕ್ಕೆ ಆರ್ಥಿಕ ಸವಾಲನ್ನು ತಂದೊಡ್ಡಿದೆ ಎಂಬ ಮಾಹಿತಿ ಇದೆ. ಒಪಿಎಸ್ ಮರು ಜಾರಿ ಘೋಷಣೆ ಮಾಡಿದರೆ 4 ಪಟ್ಟು ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
2025-26ನೇ ಸಾಲಿನ ಬಜೆಟ್ ಮಂಡನೆ ತಯಾರಿಯಲ್ಲಿರುವ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒಪಿಎಸ್ ಮರು ಜಾರಿ ಪ್ರಮುಖ ಸವಾಲಾಗಿದೆ. ಆರ್ಬಿಐ ಕೂಡಾ ತನ್ನ ವರದಿಯಲ್ಲಿ ಸರ್ಕಾರ ಒಪಿಎಸ್ ವ್ಯವಸ್ಥೆಗೆ ಮರಳಿದರೆ ಆರ್ಥಿಕ ವೆಚ್ಚ 4.5ರಷ್ಟು ಹೆಚ್ಚಾಗಲಿದೆ ಎಂದು ಹೇಳಿದೆ.
ವಿವಿಧ ರಾಜ್ಯಗಳು ಒಪಿಎಸ್ಗೆ ಮರಳಲು ಪ್ರಯತ್ನ ನಡೆಸುತ್ತಿವೆ. ಇಂತಹ ಪ್ರಯತ್ನ ಮಾಡಿದರೆ ಧೀರ್ಘಾವಧಿಯಲ್ಲಿ ರಾಜ್ಯಗಳ ಆರ್ಥಿಕ ಸ್ಥಿತಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಈಗಾಗಲೇ ಆರ್ಬಿಐ ಎಚ್ಚರಿಕೆ ನೀಡಿದೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳು, ಕಲ್ಯಾಣ ಕಾರ್ಯಕ್ರಮಗಳಿಗೆ ಮಾಡುವ ವೆಚ್ಚ ಕಡಿತವಾಗಿದೆ ಎಂದು ಅಂದಾಜಿಸಿದೆ.
2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನಕ್ಕೆ 80,434 ಕೋಟಿ ರೂ., 32,355 ಕೋಟಿ ರೂ.ಗಳನ್ನು ಪಿಂಚಣಿಗೆ ವೆಚ್ಚ ಮಾಡಿದೆ. ಒಪಿಎಸ್ ಮರು ಜಾರಿಗೊಳಿಸಿದರೆ ಪಿಂಚಣಿ ಮೇಲೆ ಮಾಡುವ ವೆಚ್ಚ ಅಧಿಕವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಈಗಾಗಲೇ 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಿರುವ ಕರ್ನಾಟಕ ಸರ್ಕಾರ ಹಳೆ ಪಿಂಚಣಿ ಯೋಜನೆ ಮರು ಜಾರಿ ಕುರಿತು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ವಿವಿಧ ರಾಜ್ಯ ಸರ್ಕಾರಗಳು ಈಗಾಗಲೇ ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ವಾಪಸ್ ಆಗಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಲು ಕರ್ನಾಟಕ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ. ಆದರೆ ಈ ಸಮಿತಿಗೆ ವರದಿ ನೀಡಲು ಕಾಲಮಿತಿ ನಿಗದಿ ಮಾಡಿಲ್ಲ. ಆದ್ದರಿಂದ ಸರ್ಕಾರ ಯಾವಾಗ ಸಮಿತಿಯ ವರದಿ ಸ್ವೀಕಾರ ಮಾಡಲಿದೆ? ಎಂಬುದು ಇನ್ನೂ ನಿಗೂಢವಾಗಿದೆ.
2024ರ ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಿತು. ಆಗ ಒಪಿಎಸ್ ಮರು ಜಾರಿ ಕುರಿತು ಸದಸ್ಯರು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಶ್ನೆಗೆ ಉತ್ತರವನ್ನು ನೀಡಿದ್ದರು.
ಎನ್ಪಿಎಸ್ ಬದಲಾಗಿ ಒಪಿಎಸ್ ಯೋಜನೆ ಮರು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 11/12/2018ರ ಮತ್ತು ದಿನಾಂಕ 1/3/2023ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ 16/8/2024ರಲ್ಲಿ ಪುನರ್ ರಚಿಸಿ ಆದೇಶಿಸಲಾಗಿದೆ, ಈ ಸಮಿತಿ ಈಗಾಗಲೇ ಎರಡು ಸಭೆಗಳನ್ನು ನಡೆಸಿದೆ. ಅಲ್ಲದೇ ಸದರಿ ಸಮಿತಿಗೆ ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿಲ್ಲ ಎಂದು ವಿವರಣೆ ನೀಡಿದ್ದರು.
ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಮುಂಬರುವ ಬಜೆಟ್ನಲ್ಲಿ ಎನ್ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿ ಸಂಬಂಧ ಸಿದ್ದರಾಮಯ್ಯ ಅವರು ಘೋಷಣೆ ಮಾಡಬೇಕು. ಸರ್ಕಾರ ಸಮಿತಿ ರಚನೆ ಮಾಡುವ ಮೂಲಕ ಕಾಲಹರಣ ಮಾಡುತ್ತಿದೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಇದರ ಜಾರಿಗೆ ರಾಜಕೀಯ ಇಚ್ಛಾಶಕ್ತಿ ಬೇಕು" ಎಂದು ಹೇಳಿದ್ದಾರೆ.












Click it and Unblock the Notifications