ಒಳ್ಳೆಯ ದಿನ, ಒಳ್ಳೆಯ ಸಮಯ ನೋಡಿಕೊಂಡು ಕ್ಷೇತ್ರ ಹಂಚಿಕೆ ನಿರ್ಧಾರ!
ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಿಗೆ ಸೇರಿ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿವೆ. ಹೀಗಾಗಿ ಮೈತ್ರಿ ಮಾತುಕತೆ ಕೂಡ ಜೋರಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಳ-ಕಮಲ ಮಾತುಕತೆ ನಡೆದಿದೆ. ಬಿಜೆಪಿ ಹೈಕಮಾಂಡ್ ನಾಯಕರು ಮಾಜಿ ಸಿಎಂ ಕುಮಾರಸ್ವಾಮಿ ಅವರ ಜೊತೆ ಚರ್ಚೆ ನಡೆಸಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಒಳ್ಳೆಯ ದಿನ, ಒಳ್ಳೆಯ ಸಮಯ ನೋಡಿಕೊಂಡು ಯಾರಿಗೆಷ್ಟು ಕ್ಷೇತ್ರಗಳು ಎಂಬುದನ್ನು ದಸರಾ ನಂತರ ನಿರ್ಧಾರ ಮಾಡುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಮೂಲಕ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಮಾಜಿ ಸಿಎಂ ಮಾಹಿತಿ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರ್ಪಡೆ ಆಗುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ & ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರ ಜತೆ ಮಾತುಕತೆ ನಡೆಸಿದ ನಂತರ ಎಚ್ಡಿಕೆ ಮಾಧ್ಯಮಗಳ ಜತೆ ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಹೊಸ ರಾಜಕೀಯ ಶಖೆ ಆರಂಭಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ, ಜೆಡಿಎಸ್ ಪಕ್ಷವು ಎನ್ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ ಆಗುವ ಬಗ್ಗೆ ಕೇಂದ್ರ ಗೃಹ ಸಚಿವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜತೆ ಮಹತ್ವದ ಮಾತುಕತೆ ಸೌಹಾರ್ದ, ಪರಸ್ಪರ ವಿಶ್ವಾಸದಿಂದ ನಡೆಯಿತು ಎಂದು ಎಚ್ಡಿಕೆ ತಿಳಿಸಿದರು.
ರಾಜ್ಯದ 28 ಕ್ಷೇತ್ರದಲ್ಲೂ ಗೆಲುವು
ಮೈತ್ರಿ ಬಗ್ಗೆ ನಡೆದ ಮಾತುಕತೆ ಬಹಳ ಸಂತಸವಾಗಿದೆ. ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತದೆ. ಯಾರು ಯಾರಿಗೆ ಎಷ್ಟು ಸೀಟು ಹಂಚಿಕೆ ಆಗುತ್ತೆ ಎನ್ನುವುದು ಮುಖ್ಯವಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ರಾಜ್ಯದ 28 ಕ್ಷೇತ್ರಗಳಲ್ಲಿ 28 ಅನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ವಿಷಯವನ್ನು ನಾನು ಬಿಜೆಪಿ ವರಿಷ್ಠರಿಗೆ ಒತ್ತಿ ಹೇಳಿದ್ದೇನೆ. ನನ್ನ ಮಾತಿಗೆ ಅವರೂ ಸಮಹಮತ ವ್ಯಕ್ತಪಡಿಸಿದ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.
ದೀರ್ಘಕಾಲದ ಮೈತ್ರಿಗೆ ನಿರ್ಧಾರ
ಬಿಜೆಪಿ ಸ್ಥಳೀಯ ನಾಯಕರನ್ನ ದೆಹಲಿ ಕರೆಸಿ ಮಾತುಕತೆ ನಡೆಸುವುದು, ನಂತರ ಎರಡೂ ಪಕ್ಷಗಳ ಹಿರಿಯರನ್ನ ಕರೆದು ಪರಸ್ಪರ ಸಮನ್ವಯತೆ ಮಾತುಕತೆ ನಡೆಸುವ ಹಾಗೂ ದಸರಾ ಹಬ್ಬದ ನಂತರ ಎಲ್ಲಾ ನಿರ್ಧಾರ ಕೈಗೊಳ್ಳುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು. ಅಲ್ಲದೆ ಈ ಮೈತ್ರಿ ದೀರ್ಘಕಾಲ ಇರಬೇಕು, ಇದರಲ್ಲಿ ರಾಜ್ಯದ ಹಿತ ಅಡಗಿರಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮಾಜಿ ಸಿಎಂ ಮಾಹಿತಿ HDK ನೀಡಿದರು.
ಕಾವೇರಿ ವಿಚಾರದ ಬಗ್ಗೆಯೂ ಚರ್ಚೆ
ಮಾಧ್ಯಮಗಳು ಪದೇಪದೆ ಮೈತ್ರಿ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಬರೀ ಮೈತ್ರಿ ಬಗ್ಗೆಯಷ್ಟೇ ಕೇಳಬೇಡಿ. ಕಾವೇರಿ ವಿಷಯದ ಬಗ್ಗೆಯೂ ಕೇಳಿ. ನಾನಿಲ್ಲಿ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮಾತುಕತೆ ನಡೆಸಲು ಬಂದಿದ್ದೇನೆ. ಕಾವೇರಿ, ಬರ ಸೇರಿ ರಾಜ್ಯದ ಮುಂದಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ವರಿಷ್ಠರ ಗಮನ ಸೆಳೆದಿದ್ದೇನೆ ಎಂದಿದ್ದಾರೆ ಮಾಜಿ ಸಿಎಂ ಎಚ್ಡಿಕೆ.
ಈ ಮೈತ್ರಿಯಿಂದ ಕಾವೇರಿ ನೀರು ಸೇರಿದಂತೆ ನಮ್ಮ ರಾಜ್ಯಕ್ಕೆ ಆದ ಸಮಸ್ಯೆಗಳಿಗೆ ಉತ್ತಮ ಪರಿಹಾರ ಸಿಗುತ್ತದೆ. ಈ ಅಂಶವನ್ನು ಇಟ್ಟುಕೊಂಡೇ ನಾನು ಅಮಿತ್ ಶಾ ಮತ್ತು ನಡ್ಡಾ ಅವರೊಂದಿಗೆ ಮುಕ್ತ ಚರ್ಚೆ ನಡೆಸಿದ್ದೇನೆ ಎಂದು ಎಚ್ಡಿಕೆ ಹೇಳಿದ್ದಾರೆ. ಮಾತುಕತೆ ಸಂದರ್ಭದಲ್ಲಿ ಗೋವಾ ರಾಜ್ಯದ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಜೆಡಿಎಸ್ ರಾಜ್ಯ ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಜರಿದ್ದರು. ಒಟ್ನಲ್ಲಿ ಈ ಮೂಲಕ ಬಿಜೆಪಿ & ಜೆಡಿಎಸ್ ಮೈತ್ರಿ ಫಿಕ್ಸ್ ಆಗಿದೆ. ಈ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕರ್ನಾಟಕದಲ್ಲಿ ಜೆಡಿಎಸ್ & ಬಿಜೆಪಿ ಘರ್ಜಿಸಲು ಸಿದ್ಧವಾಗಿದೆ.












Click it and Unblock the Notifications