"ಕಾಂಗ್ರೆಸ್ ಕಾರ್ಯಕರ್ತರು ಕೊರೊನಾ ವೈರಸ್ಗೆ ಜನರಿಂದ ದೇಣಿಗೆ ಸಂಗ್ರಹಿಸುವಂತಿಲ್ಲ'
ಬೆಂಗಳೂರು, ಮಾ. 31: ಕೊರೊನಾ ವೈರಸ್ ಇಡೀ ಜಗತ್ತಿಗೆ ಆತಂಕವನ್ನು ಒಡ್ಡಿದೆ. ಬಲಾಢ್ಯ ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿಯೆ ಹದಗೆಟ್ಟಿದೆ. ಹೀಗಿದ್ದಾಗ ನಮ್ಮ ದೇಶ ಸೇರಿದಂತೆ ಮುಂದುವರೆಯುತ್ತಿರುವ ರಾಷ್ಟ್ರಗಳ ಪರಿಸ್ಥಿತಿಯನ್ನಂತೂ ಕೇಳುವುದೇ ಬೇಡ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕೊರೊನಾ ವೈರಸ್ ವಿರುದ್ಧ ಹೋರಾಡಲು ಪಿಎಂ ಕೇರ್ಸ್ ಫಂಡ್ಗೆ ದೇಣಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಅದೇ ರೀತಿ ರಾಜ್ಯದಲ್ಲಿ ಕೂಡ ಕೋವಿಡ್-19 ವಿರುದ್ಧ ಹೋರಾಡಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಕೊಡುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಕೊರೊನಾ ವೈರಸ್ ಕುರಿತು ದೇಣಿಗೆ ಸಂಗ್ರಹಿಸಲು ಮುಂದಾಗಬಾರದು ಎಂದು ಖಡಕ್ ಸೂಚನೆ ಕೊಡಲಾಗಿದೆ.

ಕೊರೊನಾ ವೈರಸ್ಗೆ ಸರ್ಕಾರ ಉಚಿತ ಚಿಕಿತ್ಸೆ ಕೊಡಬೇಕು
ಕೊರೊನಾ ವೈರಸ್ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರಕ್ಕೆ ವಿರೋಧ ಪಕ್ಷಗಳೂ ಕೂಡ ಎಲ್ಲ ರೀತಿಯ ಸಹಕಾರ ಕೊಟ್ಟಿವೆ. ಮುಂದೆಯೂ ಕೂಡ ಕೊರೊನಾ ವೈರಸ್ ತಡೆಗಟ್ಟಲು ಎಲ್ಲ ರೀತಿಯ ಬೆಂಬಲವನ್ನು ಕೊಡುವುದಾಗಿ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಭರವಸೆ ಕೊಟ್ಟಿದ್ದಾರೆ. ಜೊತೆಗೆ ತಮ್ಮ ಪಕ್ಷದಿಂದಲೂ ಕೂಡ ಕರೊನಾ ವೈರಸ್ ಕಂಟ್ರೊಲ್ ಮಾಡುವ ನಿಟ್ಟಿನಲ್ಲಿ ಕಾರ್ಯಪಡೆಯನ್ನು ಕಾಂಗ್ರೆಸ್ ಪಕ್ಷ ರಚನೆ ಮಾಡಿದೆ.
ಕಾರ್ಯಪಡೆಯ ಮೊದಲ ಸಭೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕೊರೋನಾ ಪರೀಕ್ಷಾ ಕೇಂದ್ರಗಳನ್ನು ಆದಷ್ಟು ಬೇಗ ತೆರೆಯಬೇಕು. ಎಲ್ಲಾ ಕೊರೋನಾ ಸೋಂಕಿತರಿಗೆ ಸರ್ಕಾರವೇ ಉಚಿತವಾಗಿ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಕೊಡಬೇಕು ಎಂಬ ಆಗ್ರಹವನ್ನು ಸರ್ಕಾರಕ್ಕೆ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ದೇಣಿಗೆ ಸಂಗ್ರಹಿಸುವಂತಿಲ್ಲ
ಕೋವಿಡ್ ಹೋರಾಟಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರು ಜನರಿಂದ ಯಾವುದೇ ರೀತಿಯ ದೇಣಿಗೆ ಸಂಗ್ರಹಿಸುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕೊಟ್ಟಿದ್ದಾರೆ. ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಲು ಪಕ್ಷದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಮ್ಮ ಕೈಲಾದಷ್ಟು ದೇಣಿಗೆಯನ್ನು ಕೊರೋನಾ ಕುರಿತ ಕೆಪಿಸಿಸಿ ಪರಿಹಾರ ನಿಧಿಗೆ ನೀಡಬೇಕು. ವೈಯಕ್ತಿಕವಾಗಿ ಯಾರೂ ದೇಣಿಗೆ ಸಂಗ್ರಹಕ್ಕೆ ಮುಂದಾಗಬಾರದು ಎಂದಿದ್ದಾರೆ.

ವೆಂಟಿಲೇಟರ್ಗಳ ಕೊರತೆ ನೀಗಿಲ್ಲ
ರಾಜ್ಯದಲ್ಲಿ ವೆಂಟಿಲೇಟರ್ಗಳ ಕೊರತೆಯಿದೆ, ಆದರೆ ಸರ್ಕಾರ ಶೀಘ್ರ ವೆಂಟಿಲೇಟರ್ಗಳನ್ನು ಕೊಳ್ಳುವುದಾಗಿ ಭರವಸೆ ಕೊಟ್ಟಿತ್ತು. ಕೋವಿಡ್-19 ಸೋಂಕಿತರ ಆರೋಗ್ಯ ತೀವ್ರ ಕೆಟ್ಟಾಗ ವೆಂಟಿಲೇಟರ್ ಸೌಲಭ್ಯ ಅಗತ್ಯವಾಗಿರುತ್ತದೆ. ಕೊರೋನಾ ಚಿಕಿತ್ಸೆ ನೀಡಲಾಗುತ್ತಿರುವ ಆಸ್ಪತ್ರೆಗಳಲ್ಲಿ 1000 ವೆಂಟಿಲೇಟರ್ ಗಳ ಸೌಲಭ್ಯ ಕಲ್ಪಿಸುವುದಾಗಿ ಸರ್ಕಾರ ಘೋಷಿಸಿತ್ತು. ಈವರೆಗೂ ಅದನ್ನು ಕಲ್ಪಿಸಲಾಗಿಲ್ಲ. ಆದಷ್ಟು ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಕೆಪಿಸಿಸಿ ಕಾರ್ಯಪಡೆ ಸರ್ಕಾರಕ್ಕೆ ಆಗ್ರಹಿಸಿದೆ.

ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ವಿಮಾ ಸೌಲಭ್ಯ ನೀಡಬೇಕು
ಕೊರೋನಾಗೆ ಚಿಕಿತ್ಸೆ ನೀಡುತ್ತಿರುವ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ವಿಮಾ ಸೌಲಭ್ಯ ನೀಡಬೇಕು. ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್ ಮುಂತಾದ ಸುರಕ್ಷಾ ಪರಿಕರಗಳನ್ನು ಉಚಿತವಾಗಿ ಒದಗಿಸಬೇಕು. ಎಲ್ಲಾ ಸಾಲಗಳ ಮಾಸಿಕ ಕಂತುಗಳನ್ನು ಮುಂದೂಡಿರುವ ಬಗ್ಗೆ ಇರುವ ಗೊಂದಲಗಳ ನಿವಾರಣೆಗೆ ಮುಖ್ಯಮಂತ್ರಿಗಳು ಬ್ಯಾಂಕುಗಳ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸಬೇಕು ಹಾಗೂ ನಿರ್ದಿಷ್ಟ ಸೂಚನೆಗಳನ್ನು ನೀಡಬೇಕು ಎಂದು ಸರ್ಕಾರಕ್ಕೆ ಕಾಂಗ್ರೆಸ್ ಕಾರ್ಯಪಡೆ ಸೂಚಿಸಿದೆ.

ವಲಸಿಗರು ತಮ್ಮ ಊರಿಗೆ ತೆರಳಲು ಅವಕಾಶ ಮಾಡಿಕೊಡಬೇಕು
ಗಡಿ ಭಾಗಗಳಲ್ಲಿ ಸಿಲುಕಿರುವ ವಲಸಿಗರಿಗೆ ಉಚಿತ ಆಹಾರ ಮತ್ತು ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಬೇಕು. ನಂತರ ಅವರ ಊರುಗಳಿಗೆ ಅವರನ್ನು ತಲುಪಿಸಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಈ ಎಲ್ಲ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಬೇಕು. ಲಾಕ್ಡೌನ್ ಪರಿಣಾಮವಾಗಿ ಜನರು ಆಹಾರ ಸಾಮಾಗ್ರಿಗಳ ಕೊರತೆಯಿಂದ ತತ್ತರಿಸಿ ಹೋಗಿದ್ದು, ಎಲ್ಲಡೆ ಆಹಾಕಾರ ಎದ್ದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ಷಿಪ್ರಗತಿಯಲ್ಲಿ ಎಲ್ಲರಿಗೂ ಆಹಾರ ಸಾಮಾಗ್ರಿ ಸಿಗುವಂತೆ ನೋಡಿಕೊಳ್ಳಬೇಕು. ಆಹಾರ ಸಾಮಾಗ್ರಿಗಳನ್ನು ಜನರಿಗೆ ವಿತರಿಸುವಾಗ ಎಪಿಎಲ್ ಹಾಗೂ ಬಿಪಿಎಲ್ ಎಂದು ಬೇಧ ಭಾವ ಮಾಡಬಾರದು. ಹಸಿವಿನಿಂದ ಕಂಗೆಟ್ಟಿರುವ ಎಲ್ಲರಿಗೂ ಕೂಡ ಆಹಾರ ಮತ್ತು ಆಹಾರ ಸಾಮಾಗ್ರಿಗಳನ್ನು ಪೂರೈಸಬೇಕು.

ಕೋವಿಡ್ ವಿಚಾರವನ್ನು ರಾಷ್ಟ್ರೀಯ ಭಾವನೆಯಿಂದ ನೋಡಬೇಕು
ಕೋವಿಡ್ 19 ಸೋಂಕು ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಧಾರಗಳು ಹಾಗೂ ಘೋಷಣೆಗಳಿಗೆ ಕಾರ್ಯಕರ್ತರು ಸಹಕಾರ ನೀಡಬೇಕು. ಈ ವಿಚಾರವನ್ನು ರಾಷ್ಟ್ರೀಯ ಭಾವನೆಯಿಂದ ನೋಡಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದಾರೆ. ಕೊರೋನಾ ಕಾಯಿಲೆ ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶಗಳು ಮತ್ತು ಸೂಚನೆಗಳನ್ನು ಜನರಿಗೆ ತಲುಪಿಸಿ, ಆ ಬಗ್ಗೆ ಜನರಿಗೆ ಜಾಗೃತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಕೊವಿಡ್ 19 ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಧಾರಗಳನ್ನು ಜನರಿಗೆ ತಲುಪಿಸಲು ಬೆಂಗಳೂರಿನ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ವಾರ್ ರೂಮ್ ತೆರೆಯಲಾಗಿದೆ.
ಸಹಾಯವಾಣಿ ಸಂಖ್ಯೆ 8187042379, 9986926365ಗಳಿಗೆ ಸಾರ್ವಜನಿಕರು ಕರೆ ಮಾಡಲು ಕಾರ್ಯಪಡೆ ಮನವಿ ಮಾಡಿಕೊಂಡಿದೆ. ಜೊತೆಗೆ ಜಿಲ್ಲಾ ಮಟ್ಟದಲ್ಲೂ ವಾರ್ ರೂಮ್ ಸ್ಥಾಪಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications