ಮೊದಲು ನೀವು ಸರಿ ಹೋಗಿ; ಲೋಕಾಯುಕ್ತ ಪೊಲೀಸರ ವಿರುದ್ಧ ಕೋರ್ಟ್ ಕಿಡಿ
ಬೆಂಗಳೂರು, ಸೆಪ್ಟೆಂಬರ್ 06; 'ಮೊದಲು ನೀವು ಸರಿ ಹೋಗ್ರಿ, ನಿಮ್ಮ ಮನೆಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಿ, ನಿರ್ದಿಷ್ಟ ಕಾಲಮಿತಿಯೊಳಗೆ ತನಿಖೆಗಳನ್ನು ಪೂರ್ಣಗೊಳಿಸಿ' ಎಂದು ಕರ್ನಾಟಕ ಹೈಕೋರ್ಟ್ ಲೋಕಾಯುಕ್ತ ಪೊಲೀಸರ ವಿರುದ್ಧ ಕಿಡಿ ಕಾರಿದೆ. ಈ ಕೋರ್ಟ್ ಹಲವು ಪ್ರಕರಣಗಳನ್ನು ಗಮನಿಸಿದೆ, ಅವುಗಳಲ್ಲಿ ತನಿಖೆ ದಶಕಗಳ ಕಾಲ ನಡೆದಿದೆ ಮತ್ತು ಇನ್ನೂ ಅಂತಿಮ ವರದಿಗಳನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ಕಾಳಪ್ಪ ಲೋಕಾಯುಕ್ತರು ತಮ್ಮ ವಿರುದ್ಧ ದಾಖಲಿಸಿರುವ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ: ಲೋಕಾಯುಕ್ತ ಪೊಲೀಸರು 2019ರಿಂದ ತಮ್ಮ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದರೂ ಇನ್ನೂ ಅದನ್ನು ಪೂರ್ಣಗೊಳಿಸಿಲ್ಲ ಮತ್ತು ಅಂತಿಮ ವರದಿಯನ್ನು ಸಲ್ಲಿಸಿಲ್ಲ. ಹಾಗಾಗಿ ಇಡೀ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಜತೆಗೆ ತಮ್ಮ ವಿರುದ್ಧ ಲೋಕಾಯುಕ್ತ ತನಿಖೆ ಬಾಕಿ ಇರುವ ಕಾರಣ ತಾವು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಎಲ್ಲ ಅರ್ಹತೆ ಇದ್ದರೂ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಹೈಕೋರ್ಟ್ ಆದೇಶವೇನು?; ಲೋಕಾಯುಕ್ತ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ತೂಗುಗತ್ತಿ ಸದಾ ಸಾರ್ವಜನಿಕ ಸಿಬ್ಬಂದಿಯ ನೆತ್ತಿಯ ತೂಗಾಡುತ್ತಿರುತ್ತದೆ, ಅವರ ಹಕ್ಕುಗಳೇನಾದರೂ ಇದ್ದರೆ ಅವುಗಳಿಗೆ ಸೋಲಾಗುತ್ತದೆ ಎಂದು ಹೈಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ಬುದ್ಧಿವಾದ ಹೇಳಿದೆ.
ಅಲ್ಲದೆ, ಲೋಕಾಯುಕ್ತ ಪೊಲೀಸರು/ ಪ್ರಾಸಿಕ್ಯೂಷನ್ ವೈಫಲ್ಯಗಳ ಬಗ್ಗೆ ಮಾತನಾಡಿದರೆ ಅದು ಸಂಪುಟಗಟ್ಟಲೆ ಆಗುತ್ತದೆ ಎಂದೂ ನ್ಯಾಯಾಲಯ ಖಾರವಾಗಿ ತಿಳಿಸಿದೆ. ಅರ್ಜಿದಾರರ ವಿರುದ್ಧ ತನಿಖೆ ಪೂರ್ಣಗೊಳಿಸದಿರುವುದಕ್ಕೆ ಒಂದು ಕಾರಣವೆಂದರೆ, ಅರ್ಜಿದಾರರು ತಮ್ಮ ವಿರುದ್ಧದ ಎಲ್ಲ ಬ್ಯಾಂಕ್ ಖಾತೆ ವಿವರಗಳನ್ನು ಬಹಿರಂಗಗೊಳಿಸದಿರುವುದು, ತನಿಖೆ ವೇಳೆ ಕಂಡು ಬಂದಿದ್ದ ಒಟ್ಟು 58 ಬ್ಯಾಂಕ್ ಖಾತೆಗಳ ಪೈಕಿ 20 ಖಾತೆಗಳ ವಿವರಗಳನ್ನು ಮಾತ್ರ ಬಹಿರಂಗಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ, ಲೋಕಾಯುಕ್ತ ಪೊಲೀಸರಿಗೆ ಇಚ್ಛಾಶಕ್ತಿ ಇಲ್ಲ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ತನಿಖೆಯನ್ನು ತ್ವರಿತವಾಗಿ ಏಕೆ ಪೂರ್ಣಗೊಳಿಸಬೇಕು? ಎಂಬುದಕ್ಕೆ ಈ ಪ್ರಕರಣ ಕಣ್ತೆರೆಸಲಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.












Click it and Unblock the Notifications