ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ-ಕಟೀಲ್ ಭೇಟಿ ಹಿಂದಿರುವ ಕಾರಣ ಇದು!
ಬೆಂಗಳೂರು, ಆ. 05: ಕಳೆದ ಒಂದೂವರೆ ದಶಕದಿಂದ ರಾಜ್ಯ ರಾಜಕೀಯದಲ್ಲಿ ಬಲವಾದ ಹಿಡಿತ ಹೊಂದಿದ್ದ ಜಾರಕಿಹೊಳಿ ಸಹೋದರರ ಪ್ರಭಾವ ಕಡಿಮೆಯಾಗುತ್ತದೆಯಾ? ಅಂಥದ್ದೊಂದು ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಕಾರಣವಾಗಿದೆ. ನೇರವಾಗಿ ಅಲ್ಲದಿದ್ದರೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಲು ಜಾರಕಿಹೊಳಿ ಸಹೋದರರ ರಾಜಕೀಯ ನಡೆ ಕಾರಣ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮುನಿಸು ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಕಾಂಗ್ರೆಸ್ ನಾಯಕರೊಂದಿಗಿನ ಮಾಜಿ ಸಚಿವ ರಮೇಶ ಜಾರಕಿಹೊಳಿ ವೈಮನಸ್ಸು, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಲು ಕಾರಣವಾಗಿತ್ತು. ಹೀಗಾಗಿ ಈಗ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೇ ಕಾರಣ.
ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಈ ಮೂರು ಪಕ್ಷಗಳಲ್ಲಿ ಜಾರಕಿಹೊಳಿ ಸಹೋದರರು ಪ್ರಭಾವಿಗಳಾಗಿದ್ದಾರೆ. ಹೀಗಾಗಿ ಯಾವುದೇ ಸರ್ಕಾರವಿದ್ದರೂ ಜಾರಕಿಹೊಳಿ ಸಹೋದರರಲ್ಲಿ ಒಬ್ಬರಾದರೂ ಮಂತ್ರಿಗಳಾಗಿರುತ್ತಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಎನ್ನಲಾಗಿತ್ತು. ಆದರೆ ಅದಾಗಿಲ್ಲ. ಈ ಸಂದರ್ಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ಭೇಟಿ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮಹತ್ವದ ಭರವಸೆಯೊಂದನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಆ ಭರವಸೆ ಏನು? ಮುಂದಿದೆ ಮಾಹಿತಿ!
ಜಾರಕಿಹೊಳಿ ಸಹೋದರರನ್ನು ನಿರ್ಲಕ್ಷಿಸಿದ ಬಿಜೆಪಿ?
ಹೊರಗಿನಿಂದ ಬಂದವರಲ್ಲಿ ಹೆಚ್ಚಿನವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ. ಆದರೆ ಹಿಂದೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಂತ್ರಿಗಳಾಗಿದ್ದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಅವರಿಗೆ ಮಂತ್ರಿಸ್ಥಾನ ಕೊಟ್ಟಿಲ್ಲ. ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅತ್ಯಾಪ್ತ. ಜೊತೆಗೆ ರಮೇಶ್ ಜಾರಕಿಹೊಳಿ ಅವರ ಬದಲಿಗೆ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಕೊಡಲಾಗುತ್ತಿದೆ ಎಂಬ ಮಾಹಿತಿ ಮೊದಲು ಬಂದಿತ್ತು. ಆದರೆ ಶ್ರೀಮಂತ ಪಾಟೀಲ್ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಕೊಡದಿರುವ ಮೂಲಕ ರಮೇಶ್ ಜಾರಕಿಹೊಳಿ ಅವರನ್ನು ರಾಜ್ಯ ಬಿಜೆಪಿ ನಿರ್ಲಕ್ಷಿಸಿದೆಯಾ? ಎಂಬ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ನಡೆದಿವೆ.
17 ವರ್ಷಗಳ ಬಳಿಕ ಅಧಿಕಾರ ವಂಚಿತ ಸಹೋದರರು!
ಕಳೆದ 2004 ರಿಂದ ಜಾರಕಿಹೊಳಿ ಸಹೋದರರಲ್ಲಿ, ಸತೀಶ್ ಜಾರಹೊಳಿ, ರಮೇಶ್ ಜಾರಕಿಹೊಳಿ ಅಥವಾ ಬಾಲಚಂದ್ರ ಜಾರಹೊಳಿ ಈ ಮೂವರು ಸಹೋದರರಲ್ಲಿ ಒಬ್ಬರು ಮಂತ್ರಿಗಳಾಗುತ್ತಿದ್ದರು. ಅಧಿಕಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಅಥವಾ ಬಿಜೆಪಿ ಈ ಮೂರು ಪಕ್ಷಗಳಲ್ಲಿ ಯಾವುದೇ ಸರ್ಕಾರದ ಸರ್ಕಾರವಿದ್ದರೂ ಒಬ್ಬರಿಗೆ ಅಧಿಕಾರ ಸಿಗುತ್ತಿತ್ತು. ಆದರೆ 17 ವರ್ಷಗಳ ಬಳಿಕ ಸಹೋದರರಲ್ಲಿ ಒಬ್ಬರೀಗೂ ಮಂತ್ರಿ ಪದವಿ ಸಿಕ್ಕಿಲ್ಲ. ಮಾಜಿ ಸಚಿವ ರಮೇಶ್ ಜಾರಕಿಹೊಳಿ 'ಸಿಡಿ ಪ್ರಕರಣ'ದ ಕಾರಣಕೊಟ್ಟು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿ ಸ್ಥಾನ ತಿರಸ್ಕರಿಸಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಿಂದಲೇ ಕೇಳಿ ಬಂದಿವೆ.
ರಮೇಶ್ ಜಾರಕಿಹೊಳಿಗೆ ಕಟೀಲ್ ಕೊಟ್ಟ ಭರವಸೆ ಏನು?
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಇನ್ನೂ 4 ಮಂತ್ರಿಸ್ಥಾನಗಳು ಖಾಲಿಯಿವೆ. ಉದ್ಭವಿಸಬಹುದಾದ ಅಸಮಾಧನ ತಣಿಸಲು ಈ ಮಂತ್ರಿಸ್ಥಾನಗಳನ್ನು ಬಿಜೆಪಿ ಹೈಕಮಾಂಡ್ ಕಾಯ್ದಿರಿಸಿದೆ ಎಂಬ ಮಾಹಿತಿಯೂ ಇದೆ. ಹೀಗಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭೇಟಿಗೆ ಮಹತ್ವ ಬಂದಿದೆ.
ಗುರುವಾರ ಮಧ್ಯಾಹ್ನ ಇಬ್ಬರೂ ನಾಯಕರು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಮೇಶ್ ಜಾರಕಿಹೊಳಿಗೆ ಮಹತ್ವದ ಭರವಸೆ ಕೊಟ್ಟಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲಿ ಎಲ್ಲವೂ ಸರಿ ಹೋಗಲಿದೆ. ನೀವೇನು ಹೆದರಬೇಡಿ ಪಕ್ಷ ನಿಮ್ಮ ಹಿಂದಿದೆ. ನಿಮ್ಮ ಸ್ಥಾನ ಹಾಗೆಯೇ ಉಳಿದಿದೆ ಎಂದು ರಮೇಶ್ ಜಾರಕಿಹೊಳಿಗೆ ನಳಿನ್ ಕುಮಾರ್ ಕಟೀಲ್ ಭರವಸೆ ಕೊಟ್ಟಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ ರಮೇಶ್ ಜಾರಕಿಹೊಳಿಗೆ ಶೀಘ್ರ ಮಂತ್ರಿಸ್ಥಾನ ಸಿಗಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಅದಕ್ಕೆ ಕಾರಣವೂ ಇದೆ.
Recommended Video
|
ಬೆಳಗಾವಿಯಲ್ಲಿ 'ಕೈ' ತಪ್ಪುತ್ತಿವೆ ಮರಾಠ ಮತಗಳು ಕಾರಣ
ಕಳೆದ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಸೋತು ಗೆದ್ದಿದೆ. ದಿ. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕೇವಲ 5 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಯ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಅವರಿ ಸ್ಪರ್ಧೆ ಮಾಡಿದ್ದರು. ಮರಾಠ ಮತದಾರರು ಈ ಬಾರಿ ಬಿಜೆಪಿ ಬದಲಿಗೆ ಕಾಂಗ್ರೆಸ್ ಪಕ್ಷದತ್ತ ವಾಲಿರುವುದು ಇದಕ್ಕೆ ಕಾರಣ ಎಂದು ತಿಳಿದು ಬಂದಿತ್ತು.
ಹೀಗಾಗಿ ಇದೇ ವಿಚಾರವನ್ನು ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕರ ಅನುಭವಕ್ಕೆ ಬಂದಿದೆ ಎನ್ನಲಾಗುತ್ತಿದೆ. ಮರಾಠ ಸಮುದಾಯಕ್ಕೆ ಸೇರಿರುವ ಶ್ರೀಮಂತ ಪಾಟೀಲ್ ಅವರಿಗೆ ಮಂತ್ರಿಸ್ಥಾನವನ್ನೂ ಕೊಟ್ಟಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಅವರಿಗೆ ಮಂತ್ರಿಸ್ಥಾನ ಕೊಡುವ ಮೂಲಕ ಮರಾಠ ಮತದಾರರನ್ನು ಸೆಳೆಯುವುದು ಸುಲಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ಸಧ್ಯದಲ್ಲಿಯೇ ಬೊಮ್ಮಾಯಿ ಸಂಪುಟ ಸೇರಲಿದ್ದಾರೆ ಎನ್ನಲಾಗುತ್ತಿದೆ.